ರಾಜ್ಯದಲ್ಲಿ ಇನ್ನೂ ಮೂರು ದಿನ ಮಳೆ ಸಾಧ್ಯತೆ: ಹವಾಮಾನ ಇಲಾಖೆ
ಬೆಂಗಳೂರು, ಜು.29: ರಾಜ್ಯದಲ್ಲಿ ಇನ್ನೂ ಮೂರು ದಿನ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಚಿಕ್ಕಮಗಳೂರು, ಹಾಸನ, ಕೊಡಗು ಮತ್ತು ಶಿವಮೊಗ್ಗದಲ್ಲಿ ಜು.30ರಿಂದ ಆ.1ರವರೆಗೆ ಹಾಗೂ ಉತ್ತರ ಕನ್ನಡ, ದಕ್ಷಿಣ ಕನ್ನಡ ಮತ್ತು ಉಡುಪಿಯಲ್ಲಿ ಜು.30 ಮತ್ತು 31ರಂದು ಭಾರೀ ಮಳೆ ಬೀಳುವ ಸಾಧ್ಯತೆ ಇರುವುದರಿಂದ ಇಲಾಖೆ ಈ ಪ್ರದೇಶಗಳಿಗೆ ಯೆಲ್ಲೋ ಅಲರ್ಟ್ ನೀಡಲಾಗಿದೆ.
ತುಮಕೂರು ಮತ್ತು ಚಿತ್ರದುರ್ಗದಲ್ಲಿ ಮುಂದಿನ 24ಗಂಟೆ ಯೆಲ್ಲೋ ಅಲರ್ಟ್ ಇರಲಿದೆ. ಉತ್ತರ ಒಳನಾಡಿನಲ್ಲಿ ಚದುರಿದಂತೆ ಸಾಧಾರಣ ಮಳೆಯಾಗಲಿದೆ ಎಂದು ಇಲಾಖೆ ಮಾಹಿತಿ ನೀಡಿದೆ.
ಬೆಂಗಳೂರಿನಲ್ಲಿ ಇಂದು ಮಳೆ: ಹವಾಮಾನದಲ್ಲಿ ಬದಲಾವಣೆಗಳು ಉಂಟಾಗಿದ್ದರಿಂದ ಬೆಂಗಳೂರಿನಲ್ಲಿ ಜು.30ರಂದು ಮಳೆ ಆಗುವ ನಿರೀಕ್ಷೆ ಇದೆ ಎಂದು ರಾಜ್ಯ ಹವಾಮಾನ ಇಲಾಖೆ ತಿಳಿಸಿದೆ.
ಈ ವೇಳೆ ಮೋಡ ಮುಸುಕಿದ, ಚಳಿಯ ವಾತಾವರಣ ನಿರ್ಮಾಣವಾಗಲಿದೆ. ತಾಪಮಾನ ಗರಿಷ್ಠ 30 ಡಿಗ್ರಿ ಸೆಲ್ಸಿಯಸ್ ಮತ್ತು ಕನಿಷ್ಠ ತಾಪಮಾನ 20 ಡಿಗ್ರಿ ಸೆಲ್ಸಿಯಸ್ ಕಂಡು ಬರಲಿದೆ ಎಂದು ಹವಾಮಾನ ತಜ್ಞರು ತಿಳಿಸಿದ್ದಾರೆ.