ಸಾಗರ : ಪಡಿತರ ಅಕ್ಕಿ ಕಾಳಸಂತೆಯಲ್ಲಿ ಮಾರಾಟ ತಡೆಯಲು ಒತ್ತಾಯಿಸಿ ಪ್ರತಿಭಟನೆ
ಸಾಗರ : ಪಡಿತರ ಅಕ್ಕಿ ಕಾಳಸಂತೆಯಲ್ಲಿ ಮಾರಾಟ ಮಾಡಲಾಗುತ್ತಿದ್ದು, ತಾಲ್ಲೂಕು ಆಡಳಿತ ಸೂಕ್ತ ಕ್ರಮ ಜರುಗಿಸಬೇಕು. ಅಗತ್ಯ ಇಲ್ಲದವರ ಪಡಿತರ ಚೀಟಿಯನ್ನು ರದ್ದುಪಡಿಸುವಂತೆ ಒತ್ತಾಯಿಸಿ ಸಾಮಾಜಿಕ ಕಾರ್ಯಕರ್ತ ಸ್ವಾಮಿನಾಥ್ ಹೊಸಂತೆ ಗ್ರಾಮದಿಂದ ತಹಶೀಲ್ದಾರ್ ಕಚೇರಿವರೆಗೆ ರಾಷ್ಟ್ರಧ್ವಜ ಹಿಡಿದು 20 ಕಿ.ಮೀ. ಪಾದಯಾತ್ರೆ ನಡೆಸಿ ತಹಶೀಲ್ದಾರ್ ಮಲ್ಲೇಶ್ ಬಿ. ಪೂಜಾರ್ ಅವರಿಗೆ ಮನವಿ ಸಲ್ಲಿಸಿ, ಒತ್ತಾಯಿಸಿದರು.
ಇದೇ ಸಂದರ್ಭ ತಹಶೀಲ್ದಾರ್ ಮಲ್ಲೇಶ್ ಬಿ. ಪೂಜಾರ್ ಮನವಿ ಸ್ವೀಕರಿಸಿ ಸಾಮಾಜಿಕ ಕಾರ್ಯಕರ್ತ ಸ್ವಾಮಿನಾಥ್ ಅವರಿಗೆ ಹೊಸ ಅಂಗಿ ಕೊಡಿಸಿ, ಬಸ್ ಚಾರ್ಜ್ಗೆ ವೈಯಕ್ತಿಕ ಹಣ ನೀಡಿ ಮಾನವೀಯತೆ ಮೆರೆಯುವ ಜೊತೆಗೆ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ಬೇಡಿಕೆ ಈಡೇರಿಸುವ ಭರವಸೆ ನೀಡಿದರು.
ಈ ಸಂದರ್ಭದಲ್ಲಿ ಮಾತನಾಡಿದ ಸಾಮಾಜಿಕ ಕಾರ್ಯಕರ್ತ ಸ್ವಾಮಿನಾಥ್ ಹೊಸಂತೆ, ಕೇಂದ್ರ ಮತ್ತು ರಾಜ್ಯ ಸರ್ಕಾರ ಬಡಜನರು ಹಸಿವಿನಿಂದ ಬಳಲಬಾರದು ಎಂದು ಪಡಿತರ ಅಕ್ಕಿಯನ್ನು ಉಚಿತವಾಗಿ ಕೊಡುತ್ತಿದೆ. ಆದರೆ ನಮ್ಮ ಮನೆಯಲ್ಲಿ ಸುಮಾರು ಒಂದು ಕ್ವಿಂಟಾಲ್ನಷ್ಟು ಪಡಿತರ ಅಕ್ಕಿಯನ್ನು ಬಡವರಿಗೆ ಕೊಡಲು ಸಂಗ್ರಹಿಸಿ ಇಡಲಾಗಿತ್ತು. ಆದರೆ ನನ್ನ ಪತ್ನಿ ನನಗೆ ಗೊತ್ತಿಲ್ಲದೆ ಅಕ್ಕಿಯನ್ನು ಕಾಳಸಂತೆಕೋರರಿಗೆ ಮಾರಾಟ ಮಾಡಿದ್ದಾರೆ. ಇದರಿಂದ ನನಗೆ ಬೇಸರವಾಗಿದೆ. ಈ ಹಿನ್ನೆಲೆಯಲ್ಲಿ ಅರೆಬೆತ್ತಲೆಯಾಗಿ 20 ಕಿ.ಮೀ. ಪಾದಯಾತ್ರೆ ನಡೆಸಿ ನನ್ನ ಪಡಿತರ ಚೀಟಿಯನ್ನು ರದ್ದುಮಾಡುವಂತೆ ಮನವಿ ಮಾಡಿದ್ದೇನೆ. ಜೊತೆಗೆ ತಾಲ್ಲೂಕಿನ ಬೇರೆಬೇರೆ ಭಾಗದಲ್ಲಿ ಇಂತಹ ಅವ್ಯವಹಾರ ನಡೆಯುತ್ತಿದೆ. ಅಗತ್ಯ ಇಲ್ಲದವರ ಪಡಿತರ ಚೀಟಿಯನ್ನು ರದ್ದುಮಾಡಬೇಕು. ಪಡಿತರ ಅಕ್ಕಿಯನ್ನು ಖರೀದಿ ಮಾಡುವ ರೈಸ್ಮಿಲ್, ಅಂಗಡಿಯವರ ಮೇಲೆ ದಾಳಿ ನಡೆಸಿ ಸೂಕ್ತಕ್ರಮ ಜರುಗಿಸಬೇಕು ಎಂದು ತಿಳಿಸಿದರು.
ಮನವಿ ಸ್ವೀಕರಿಸಿ ಮಾತನಾಡಿದ ತಹಶೀಲ್ದಾರ್ ಮಲ್ಲೇಶ್ ಬಿ.ಪೂಜಾರ್, ಸ್ವಾಮಿನಾಥ್ ಅವರ ಸಾಮಾಜಿಕ ಕಳಕಳಿ ಅನುಕರಣೀಯವಾಗಿದೆ. ಮನವಿಯಲ್ಲಿ ತಿಳಿಸಿರುವಂತೆ ನಾನು ಅವರ ಮನೆಗೆ ಹೋಗಿ ಭೇಟಿ ನೀಡಿ ಪರಿಶೀಲನೆ ನಡೆಸಿ ಮುಂದಿನ ಕ್ರಮ ಜರುಗಿಸುತ್ತೇನೆ. ಇದರ ಜೊತೆಗೆ ತಾಲ್ಲೂಕಿನಲ್ಲಿ ಪಡಿತರ ಅಕ್ಕಿಯನ್ನು ಅಕ್ರಮವಾಗಿ ಯಾರಾದರೂ ಮಾರಾಟ ಮಾಡುವುದಾಗಲೀ, ಖರೀದಿ ಮಾಡುವುದಾಗಲಿ ಕಂಡು ಬಂದರೆ ನನ್ನ ಗಮನಕ್ಕೆ ತನ್ನಿ. ಅಂತಹವರ ವಿರುದ್ಧ ಕಾನೂನು ಕ್ರಮ ಜರುಗಿಸಲಾಗುತ್ತದೆ ಎಂದು ಹೇಳಿದರು.