ಸಿದ್ದರಾಮಯ್ಯ ಮೂಲೆಗುಂಪಾಗುವ ದಿನ ದೂರವಿಲ್ಲ: ನಳಿನ್ ಕುಮಾರ್ ಕಟೀಲ್
ನಳಿನ್ ಕುಮಾರ್ ಕಟೀಲ್
ಬೆಂಗಳೂರು: ‘ಮಂಗಳೂರಿನಲ್ಲಿ ಪ್ರಧಾನಿ ಮೋದಿಯವರ ಅಪಾರ ಜನಸಂದಣಿಯ ಕಾರ್ಯಕ್ರಮ ಮತ್ತು ದೊಡ್ಡಬಳ್ಳಾಪುರದ ಜನಸ್ಪಂದನಕ್ಕೆ ಸ್ವಯಂಪ್ರೇರಿತ ಜನಸಾಗರವನ್ನು ಗಮನಿಸಿ ಸಿದ್ದರಾಮಯ್ಯ(Siddaramaiah) ಸ್ಥಿಮಿತ ಕಳೆದುಕೊಂಡಂತಿದೆ. ಅದಕ್ಕಾಗಿಯೇ ಅವರು ತಮ್ಮ ಸುಳ್ಳಿನ ಸರಮಾಲೆ, ವ್ಯರ್ಥ ಆರೋಪಗಳ ಮೂಲಕ ನಾಟಕ ಮುಂದುವರಿಸಿದ್ದಾರೆ' ಎಂದು ಬಿಜೆಪಿ(BJP) ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್(Nalin Kumar Kateel) ಟೀಕಿಸಿದ್ದಾರೆ.
ರವಿವಾರ ಪತ್ರಿಕಾ ಪ್ರಕಟಣೆ ನೀಡಿರುವ ಅವರು, ‘ಮುಂದಿನ ಚುನಾವಣೆಯಲ್ಲಿ ಸಿದ್ದರಾಮಯ್ಯರನ್ನು ಜನರು ಸೋಲಿಸಿ ರಾಜಕೀಯವಾಗಿ ಮೂಲೆಗುಂಪಾಗುವಂತೆ ಮಾಡಲಿದ್ದಾರೆ. ಕಾಂಗ್ರೆಸ್ ಸಂಪೂರ್ಣ ನೆಲಕಚ್ಚಲಿದೆ. ಸಿದ್ದರಾಮಯ್ಯ ಎಂದರೆ ಢೋಂಗಿತನ, ಹಿಂದೂ ವಿರೋಧಿ ಸಂಕೇತ. ರಾಷ್ಟ್ರವಿರೋಧಿ ಶಕ್ತಿಗಳ ಜೊತೆ ಕೈ ಜೋಡಿಸುವ ಮತ್ತು ಧರ್ಮಗಳನ್ನು ಒಡೆಯುವ ಸ್ವಾರ್ಥ ರಾಜಕಾರಣ ಜನರಿಗೆ ಸ್ಪಷ್ಟವಾಗಿ ತಿಳಿದಿದೆ ಎಂದು ದೂರಿದ್ದಾರೆ.
ನೀವು ಟ್ವೀಟ್ಗಳ ಮೂಲಕ ಹಾಗೂ ಹೇಳಿಕೆಗಳ ಮೂಲಕ ನಿಮ್ಮನ್ನೇ ನೀವು ಜನರ ಮುಂದಿಟ್ಟು ಅಪಹಾಸ್ಯಕ್ಕೆ ಸಿಲುಕುತ್ತಿದ್ದೀರಿ. ಬಿಜೆಪಿ ಸರಕಾರ ಜನಪರವಾಗಿದೆ. ಬಿಜೆಪಿ ಯಾವತ್ತೂ ಸಮಾಜದ ಕಟ್ಟ ಕಡೆಯ ವ್ಯಕ್ತಿಯ ಸರ್ವತೋಮುಖ ಅಭಿವೃದ್ಧಿ ಮತ್ತು ಸಶಕ್ತೀಕರಣದ ಪ್ರಯತ್ನದಲ್ಲಿರುವುದು ಜನರಿಗೆ ತಿಳಿದಿದೆ ಎಂದು ಅವರು ತಿಳಿಸಿದ್ದಾರೆ.
ಬಸವರಾಜ ಬೊಮ್ಮಾಯಿ ನೇತೃತ್ವದ ಬಿಜೆಪಿ ಸರಕಾರವು ಬೆಂಗಳೂರಿನ ಅಭಿವೃದ್ಧಿಗೆ 6ಸಾವಿರ ಕೋಟಿ ರೂ.ಮೊತ್ತವನ್ನು ನೀಡಿ ಸಮಗ್ರ ಅಭಿವೃದ್ಧಿಗೆ ಶ್ರಮಿಸುತ್ತಿದೆ. ಹಲವು ದಶಕಗಳಲ್ಲೇ ಅತ್ಯಧಿಕ ಮಳೆ ಭಾರತದಾದ್ಯಂತ ಮತ್ತು ಬೆಂಗಳೂರಿನಲ್ಲೂ ಬಂದಿದೆ. ಮಳೆ-ಅತಿವೃಷ್ಟಿಯನ್ನು ಎದುರಿಸಲು ಬಿಜೆಪಿ ತಕ್ಷಣವೇ ಮುಂದಾಗಿದ್ದು, ಜನರ ಬದುಕನ್ನು ಕಟ್ಟಿಕೊಡಲು ಕೂಡಲೇ ಸ್ಪಂದಿಸಿದೆ. ಸರಕಾರ ಒಂದೆಡೆ ಮತ್ತು ಪಕ್ಷ ಮತ್ತೊಂದೆಡೆ ಅಗತ್ಯ ಸೇವಾ ಕಾರ್ಯಗಳನ್ನು ಕೈಗೊಂಡಿವೆ ಎಂದು ಕಟೀಲ್ ವಿವರಿಸಿದ್ದಾರೆ.
‘ಒಮ್ಮೆ ನಿರುದ್ಯೋಗ ಸಮಸ್ಯೆ ಎನ್ನುವ ಸಿದ್ದರಾಮಣ್ಣ, ಮತ್ತೆ ಪ್ಲೇಟ್ ಬದಲಿಸಿ ಶೇ.40ರಷ್ಟು ಭ್ರಷ್ಟ್ರಾಚಾರ ಎಂದು ರಾಗ ಎಳೆಯುತ್ತಾರೆ. ಅರ್ಕಾವತಿ ಹಗರಣ ಸೇರಿ ವಿವಿಧ ಭ್ರಷ್ಟ್ರಾಚಾರ ಹಗರಣಗಳನ್ನು ಬಿಜೆಪಿ ಸರಕಾರ ಬಯಲಿಗೆ ಎಳೆಯಲಿದೆ ಎಂದು ತಿಳಿಸಿದ ಬಳಿಕ ಸಿದ್ದರಾಮಣ್ಣನಿಗೆ ಚಳಿಜ್ವರ ಬಂದಂತಿದೆ. ಅದಕ್ಕಾಗಿಯೇ ಸದಾ ಪ್ರಚಾರದಲ್ಲಿರಲು ಸುಳ್ಳು ಸುಳ್ಳು ಹೇಳಿಕೆಗಳನ್ನು ಕೊಡುತ್ತಿದ್ದಾರೆ ಎಂದು ಅವರು ಟೀಕಿಸಿದ್ದಾರೆ.
‘ಸಿದ್ದರಾಮಯ್ಯನವರೇ ನಿಮಗೆ ಪ್ರಜಾಪ್ರಭುತ್ವ ಮತ್ತು ಸಂವಿಧಾನದ ಮೇಲೆ ಗೌರವ ಮತ್ತು ಬದ್ಧತೆ ಇದ್ದರೆ ಜನರ ಆಶೋತ್ತರ ಮತ್ತು ಕಷ್ಟಕಾರ್ಪಣ್ಯಕ್ಕೆ ಸ್ಪಂದಿಸಬೇಕು. ಈ ಮೂಲಕ ನೀವು ವಿಧಾನಸಭೆಯಲ್ಲಿ ವಿರೋಧ ಪಕ್ಷದ ನಾಯಕನ ಘನತೆಯನ್ನು ಎತ್ತಿ ಹಿಡಿಯಬೇಕು. ನೀವು ತಾಕತ್ತಿದ್ದರೆ ಈ ವಿಚಾರವಾಗಿ ಚರ್ಚೆಗೆ ಬಂದರೆ ನಾವೂ ಚರ್ಚೆಗೆ ಸಿದ್ಧರಿದ್ದೇವೆ' ಎಂದು ಅವರು ಸವಾಲು ಹಾಕಿದ್ದಾರೆ.
ಇದನ್ನೂ ಓದಿ: ರೋಗಿಯ ಶಸ್ತ್ರಚಿಕಿತ್ಸೆಗಾಗಿ ಮೂರು ಕಿ.ಮೀ ಓಡಿ ಆಸ್ಪತ್ರೆ ತಲುಪಿದ ವೈದ್ಯ!