JDS ರಾಜ್ಯದಲ್ಲಿ ಅಧಿಕಾರಕ್ಕೆ ಬರುವುದನ್ನು ತಡೆಯಲು ಯಾರಿಂದಲೂ ಸಾಧ್ಯವಿಲ್ಲ: ಸಿ.ಎಂ. ಇಬ್ರಾಹಿಂ
ಹಾಸನ: ಸೆಪ್ಟೆಂಬರ್ 13, 'ರಾಜ್ಯದಲ್ಲಿ ಜೆಡಿಎಸ್ (JDS) ಪಕ್ಷ ನಂಬರ್ ಒನ್ ಸ್ಥಾನದಲ್ಲಿದ್ದು ಎರಡನೇ ಸ್ಥಾನಕ್ಕೆ ರಾಷ್ಟ್ರೀಯ ಪಕ್ಷಗಳಾದ ಕಾಂಗ್ರೆಸ್ ಹಾಗೂ ಬಿಜೆಪಿ ಪೈಪೋಟಿ ನಡೆಸುತ್ತಿವೆ. ಜೆಡಿಎಸ್ ಅಧಿಕಾರಕ್ಕೆ ಬರಲಿದೆ ಎಂಬ ಮುನ್ಸೂಚನೆ ಅರಿತಿರುವ ಬಿಜೆಪಿ ಹಾಗೂ ಕಾಂಗ್ರೆಸ್ ಪಕ್ಷಗಳಲ್ಲಿ ತಳಮಳ ಸೃಷ್ಟಿಯಾಗಿದೆ ' ಎಂದು ಜೆಡಿಎಸ್ ರಾಜ್ಯ ಘಟಕದ ಅಧ್ಯಕ್ಷ ಸಿ.ಎಂ. ಇಬ್ರಾಹಿಂ ಭವಿಷ್ಯ ನುಡಿದರು.
ಮಾಜಿ ಶಾಸಕ ದಿವಂಗತ ಎಚ್ಎಸ್ ಪ್ರಕಾಶ್ ಅವರ ಸವಿನೆನಪು ಕಾರ್ಯಕ್ರಮ ಹಿನ್ನೆಲೆಯಲ್ಲಿ ನಗರಕ್ಕೆ ಬಂದಿರುವ ಅವರು ಸುದ್ದಿಗಾರರೊಂದಿಗೆ ಮಾತನಾಡಿದರು.
'ಜೆಡಿಎಸ್ ಪಕ್ಷಕ್ಕೆ ರಾಜ್ಯದ ಯಾವುದೇ ಕ್ಷೇತ್ರದಲ್ಲಿ ಅಭ್ಯರ್ಥಿಗಳ ಕೊರತೆ ಇಲ್ಲ. ಅಭ್ಯರ್ಥಿಗಳ ಸಂಖ್ಯೆ ಹೆಚ್ಚಾಗಿದ್ದು, ಅವರನ್ನು ಸಮಾಧಾನಪಡಿಸುವ ಕೆಲಸ ಮಾಡಲಾಗುತ್ತಿದೆ. ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಜೆಡಿಎಸ್ ಅಧಿಕಾರಕ್ಕೆ ಬರಲಿದ್ದು, ಎಚ್.ಡಿ. ಕುಮಾರಸ್ವಾಮಿ ಮುಖ್ಯಮಂತ್ರಿ ಆಗಿ ಅಧಿಕಾರ ಸ್ವೀಕರಿಸುವುದು ದೈವಾನುಗ್ರಹ' ಎಂದರು.
'1994ರಲ್ಲಿ ಇದ್ದ ಪರಿಸ್ಥಿತಿ ಇದೀಗ ಉದ್ಭವವಾಗುತ್ತಿದೆ. 2023ಕ್ಕೆ ಜೆಡಿಎಸ್ ರಾಜ್ಯದಲ್ಲಿ ಅಧಿಕಾರಕ್ಕೆ ಬರುವುದನ್ನು ತಡೆಯಲು ಯಾರಿಂದಲೂ ಸಾಧ್ಯವಿಲ್ಲ' ಎಂದರು.
'ಕಾಂಗ್ರೆಸ್ ಪಕ್ಷದಲ್ಲಿ ಶಕ್ತಿ ಇಲ್ಲ. ಆದ್ದರಿಂದ ಭಾರತ್ ಜೋಡೊ ಯಾತ್ರೆ ಮಾಡುತ್ತಿದ್ದಾರೆ. ಮೊದಲು ಅವರು ತಮ್ಮ ಪಕ್ಷದಲ್ಲಿ ಇರುವಂತಹ ಭಿನ್ನಾಭಿಪ್ರಾಯದ ನಾಯಕರನ್ನು ಒಂದುಗೂಡಿಸುವ ಮೂಲಕ ಪಕ್ಷವನ್ನು ಗಟ್ಟಿಗೊಳಿಸಬೇಕಿದೆ' ಎಂದು ಟೀಕಿಸಿದರು.
ಇದನ್ನೂ ಓದಿ: ಪ್ರವಾಹ ಪೀಡಿತ ಪ್ರದೇಶದಲ್ಲಿ ಬೋಟ್ನಲ್ಲಿ ಪ್ರಯಾಣಿಸಿದ ಸಿದ್ದರಾಮಯ್ಯ: ಸದನದಲ್ಲಿ ಭಾರೀ ಚರ್ಚೆ