ಎಚ್.ಡಿ. ದೇವೇಗೌಡರನ್ನು ಭೇಟಿಯಾದ ಸಿದ್ದರಾಮಯ್ಯ
ಬೆಂಗಳೂರು, ಸೆ.19: ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ ಅವರನ್ನು ವಿಧಾನಸಭೆಯ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ಭೇಟಿಯಾಗಿ ಆರೋಗ್ಯ ವಿಚಾರಿಸಿದರು.
ಸೋಮವಾರ ಸಂಜೆ ವಿಧಾನಸಭೆ ಕಲಾಪ ಮುಗಿದ ಕೂಡಲೇ ಪದ್ಮನಾಭ ನಗರದ ನಿವಾಸಕ್ಕೆ ತೆರಳಿದ ಸಿದ್ದರಾಮಯ್ಯ, ದೇವೇಗೌಡ ಅವರನ್ನು ಭೇಟಿಯಾದರು.
ರಾಜ್ಯಸಭೆ ಸದಸ್ಯರಾಗಿರುವ ದೇವೇಗೌಡ ಅವರು ಕಳೆದ ಕೆಲ ದಿನಗಳಿಂದ ಕಾಲು ನೋವಿನ ಹಿನ್ನೆಲೆಯಲ್ಲಿ ಅವರು ಮನೆಯಲ್ಲಿ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾರೆ, ಈ ಹಿನ್ನೆಲೆಯಲ್ಲಿ ಸಿದ್ದರಾಮಯ್ಯ ಅವರು ದೇವೇಗೌಡರ ಮನೆಗೆ ಭೇಟಿ ನೀಡಿ ಅವರ ಆರೋಗ್ಯದ ಬಗ್ಗೆ ಮಾಹಿತಿ ಪಡೆದುಕೊಂಡು ಶೀಘ್ರ ಗುಣಮುಖರಾಗುವಂತೆ ಆಶಿಸಿದರು.
ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಅವರು, ದೇವೇಗೌಡ ಅವರು ದೇಶದಲ್ಲಿಯೇ ಹಿರಿಯ ರಾಜಕಾರಣಿ ಆಗಿದ್ದಾರೆ. ಅವರ ಭೇಟಿಯಲ್ಲಿ ಪಕ್ಷ, ರಾಜಕೀಯ ಎನ್ನುವುದು ಇಲ್ಲ. ಮನುಷ್ಯತ್ವ ಬಹಳ ಮುಖ್ಯ. ಹೀಗಾಗಿಯೇ ಆರೋಗ್ಯ ವಿಚಾರಿಸಿದ್ದೇನೆ ಎಂದು ಮಾಹಿತಿ ನೀಡಿದರು.
ಆರು ವರ್ಷಗಳ ನಂತರ ದೇವೇಗೌಡ ಅವರ ಮನೆಗೆ ಸಿದ್ದರಾಮಯ್ಯ ಭೇಟಿ ನೀಡಿದ್ದು, ಈ ಮೂಲಕ ರಾಜ್ಯ ರಾಜಕಾರಣದಲ್ಲಿ ಈ ಭೇಟಿ ಕುತೂಹಲ ಮೂಡಿಸಿದೆ. ಜೆಡಿಎಸ್ ವಲಯದಿಂದ ತಮ್ಮ ರಾಜಕೀಯ ಜೀವನವನ್ನು ಆರಂಭಿಸಿದ್ದ ಸಿದ್ದರಾಮಯ್ಯ ಅವರು 2005ನೇ ಸಾಲಿನಲ್ಲಿ ನಡೆದ ಅಹಿಂದ ಸಮಾವೇಶದ ನಂತರ ಜೆಡಿಎಸ್ನಿಂದ ಹೊರಬಂದು ಕಾಂಗ್ರೆಸ್ ಸೇರಿದರು. ತದನಂತರ ಕಾಂಗ್ರೆಸ್ನಲ್ಲಿಯೇ ಅವರು ಮುಖ್ಯಮಂತ್ರಿಯಾಗಿ 5 ವರ್ಷಗಳ ಪೂರ್ಣ ಅವಧಿ ಮುಗಿಸಿದ್ದರು.
ಈ ಸಂದರ್ಭದಲ್ಲಿ ಶಾಸಕರಾದ ಆರ್.ವಿ.ದೇಶಪಾಂಡೆ, ಬಿ.ಝೆಡ್.ಝಮೀರ್ ಅಹ್ಮದ್ ಖಾನ್, ಬೈರತಿ ಸುರೇಶ್ ಸೇರಿದಂತೆ ಪ್ರಮುಖರಿದ್ದರು.