ಮೈಸೂರು ಭಾರತ್ ಜೋಡೊ ಯಾತ್ರೆ ಸಮಿತಿ ಅಧ್ಯಕ್ಷರಾಗಿ ಮಾಜಿ ಸಚಿವ ಡಾ.ಎಚ್.ಸಿ.ಮಹದೇವಪ್ಪ ನೇಮಕ
ಡಾ.ಎಚ್.ಸಿ.ಮಹದೇವಪ್ಪ
ಮೈಸೂರು,ಸೆ.19: ಕಾಂಗ್ರೆಸ್ ಪಕ್ಷದ ವತಿಯಿಂದ ನಡೆಸಲಾಗುತ್ತಿರುವ ಭಾರತ್ ಜೋಡೊ ಯಾತ್ರೆಯು ಇದೇ ತಿಂಗಳ 30ನೇ ತಾರೀಖಿನಂದು ಗುಂಡ್ಲುಪೇಟೆಯ ಮೂಲಕ ರಾಜ್ಯವನ್ನು ಪ್ರವೇಶ ಮಾಡಲಿದ್ದು, ಈ ಯಾತ್ರೆಗೆ ಸಂಬಂಧಿಸಿದಂತೆ ಮೈಸೂರು ಲೋಕಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಸಮಿತಿಯನ್ನು ರಚನೆ ಮಾಡಲಾಗಿದೆ.
ಈ ಸಮಿತಿಯ ಅಧ್ಯಕ್ಷರಾಗಿ ಮಾಜಿ ಸಚಿವ ಡಾ.ಎಚ್.ಸಿ.ಮಹದೇವಪ್ಪ ಅವರನ್ನು ನೇಮಕ ಮಾಡಲಾಗಿದೆ. ಉಳಿದಂತೆ ಸಮಿತಿಯ ಸದಸ್ಯರುಗಳನ್ನಾಗಿ ಮಾಜಿ ಸಚಿವರಾದ ಸುಮಾ ವಸಂತ್,ಶಾಸಕರಾದ ತನ್ವೀರ್ ಸೇಠ್, ಎಚ್.ಪಿ.ಮಂಜುನಾಥ್,ಮಾಜಿ ಶಾಸಕರಾದ ಎಂ.ಕೆ.ಸೋಮಶೇಖರ್, ಜೀವಿಜಯ, ಎಂ.ಸಿ.ನಾಣಯ್ಯ, ಕೆ.ವೆಂಕಟೇಶ್, ವಾಸು, ಕೃಷ್ಣಪ್ಪ, ವಿಧಾನಪರಿಷತ್ ಸದಸ್ಯ ಡಾ.ಡಿ.ತಿಮ್ಮಯ್ಯ, ಮಾಜಿ ಸದಸ್ಯರಾದ ವೀಣಾ ಅಚ್ಚಯ್ಯ, ಅರುಣ್ ಮಾಚಯ್ಯ, ಆರ್.ಧರ್ಮಸೇನ, ಮೈಸೂರು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಬಿ.ಜೆ.ವಿಜಯಕಮಾರ್, ನಗರಾಧ್ಯಕ್ಷ ಆರ್.ಮೂರ್ತಿ, ಮೈಸೂರು ಪೇಂಟ್ಸ್ ಅಂಡ್ ವಾರ್ನಿಷ್ ಸಂಸ್ಥೆ ಮಾಜಿ ಅಧ್ಯಕ್ಷ ಎಚ್.ಎ.ವೆಂಕಟೇಶ್ ಅವರನ್ನು ನೇಮಕ ಮಾಡಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಆದೇಶ ಹೊರಡಿಸಿದ್ದಾರೆ.