ಸಾರ್ವಜನಿಕರಿಗೆ ಆಗಿರುವ ತೊಂದರೆಗೆ ಕ್ಷಮೆ ಇರಲಿ, ಆಂಬ್ಯುಲೆನ್ಸ್ ವ್ಯವಸ್ಥೆ ಬಗ್ಗೆ ಆತಂಕ ಬೇಡ: ಸಚಿವ ಡಾ.ಸುಧಾಕರ್
ಬೆಂಗಳೂರು, ಸೆ. 25:‘ತುರ್ತು ಆಂಬ್ಯುಲೆನ್ಸ್ಸೇವೆಗಳ 108 ಸಹಾಯವಾಣಿಯಲ್ಲಿ ಕೆಲ ತಾಂತ್ರಿಕ ಸಮಸ್ಯೆಗಳು ಸೃಷ್ಟಿಯಾಗಿದ್ದು, ಅದಕ್ಕೆ ಪೂರಕವಾಗಿ ಕ್ರಮ ತೆಗೆದುಕೊಳ್ಳಲಾಗಿದೆ. ರಾಜ್ಯದ ಜನರು ಈ ಕುರಿತು ಯಾವುದೇ ಆತಂಕಕ್ಕೊಳಗಾಗುವುದು ಬೇಡ' ಎಂದು ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ಅವರು ಸ್ಪಷ್ಟಪಡಿಸಿದ್ದಾರೆ.
ರವಿವಾರ ನಗರದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ‘ಐಟಿ ಹಾರ್ಡ್ವೇರ್ ನಲ್ಲಿ ಸಮಸ್ಯೆ ಸೃಷ್ಟಿಯಾಗಿದ್ದು, ಅದನ್ನು ಗುತ್ತಿಗೆ ಪಡೆದುಕೊಂಡಿರುವ ಜಿವಿಕೆ-ಇಎಂಆರ್ಐ ಸಂಸ್ಥೆ ಎಲ್ಲವನ್ನೂ ಬಗೆಹರಿಸಿದೆ. 15 ವರ್ಷ ಹಳೆಯ ತಾಂತ್ರಿಕ ವ್ಯವಸ್ಥೆ ಇದಾಗಿರುವುದರಿಂದ ಸರ್ವರ್ಗೆ ವೈರಸ್ ಸಮಸ್ಯೆ ಆಗಿದೆ. ಎಂಜಿನಿಯರ್ ಗಳು ಮದರ್ ಬೋರ್ಡ್ ಸಮಸ್ಯೆಯನ್ನು ಸರಿಪಡಿಸಿದ್ದಾರೆ. ಇಲಾಖೆ ಎಲ್ಲ್ಲ ಜಿಲ್ಲಾ ಆರೋಗ್ಯಾಧಿಕಾರಿಗಳ ಜೊತೆಗೆ ವಿಡಿಯೋ ಕಾನ್ಫರೆನ್ಸ್ ನಡೆಸಿಕೊಂಡು ಇದು ಕೆಲಸ ಮಾಡುತ್ತಿರುವ ಬಗ್ಗೆ ಖಚಿತ ಪಡಿಸಿಕೊಳ್ಳಲಾಗಿದೆ. ಈಗ ಕರೆಗಳನ್ನು ಸ್ವೀಕಾರ ಮಾಡಲಾಗುತ್ತಿದೆ. ಪ್ರತಿ ಜಿಲ್ಲೆಯಲ್ಲೂ 4-5 ಜನರಿರುವ ಬ್ಯಾಕ್ ಅಪ್ ಕಾಲ್ ಸೆಂಟರ್ ಅನ್ನು ತೆರೆಯಲು ಸೂಚಿಸಲಾಗಿದೆ' ಎಂದು ವಿವರಿಸಿದರು.
‘ಸಾರ್ವಜನಿಕರಿಗೆ ಯಾವುದೇ ರೀತಿಯಲ್ಲಿ ತೊಂದರೆ ಆಗಬಾರದು ಅನ್ನುವ ನಿಟ್ಟಿನಲ್ಲಿ ಇಲಾಖೆ ಹಲವು ಕ್ರಮಗಳನ್ನು ತೆಗೆದುಕೊಂಡಿದೆ. 108 ಸಹಾಯವಾಣಿ ಕರೆಗಳು ಆಟೋಮ್ಯಾಟಿಕ್ ಆಗಿ ಕರೆಗಳನ್ನು ಸ್ವೀಕರಿಸಿ 2 ನಿಮಿಷಗಳಲ್ಲಿ ಆಂಬ್ಯುಲೆನ್ಸ್ ವಾಹನ ಹಂಚಿಕೆ ಕಾರ್ಯ ಮಾಡುತ್ತಿತ್ತು. ತಾಂತ್ರಿಕ ಸಮಸ್ಯೆಯಿಂದ ಈಗ ಈ ಪ್ರಕ್ರಿಯೆಗೆ 6 ರಿಂದ 7 ನಿಮಿಷಗಳ ಕಾಲ ತೆಗೆದುಕೊಳ್ಳಲಾಗುತ್ತಿದೆ. ಪ್ರತಿದಿನ 7 ರಿಂದ 8 ಸಾವಿರ ಕರೆಗಳ ಬದಲು 2 ಸಾವಿರದಿಂದ 2,500 ಕರೆಗಳನ್ನು ಮಾತ್ರ ಸ್ವೀಕರಿಸಲು ಸಾಧ್ಯವಾಗುತ್ತಿದೆ. ಆಂಬ್ಯುಲೆನ್ಸ್ ಸೇವೆ ತುರ್ತು ಸೇವೆ ಇದಾಗಿರುವುದರಿಂದ ಬ್ಯಾಕ್ ಅಪ್ ಸರ್ವರ್ನ್ನು ಹೆಚ್ಚುವರಿಯಾಗಿ ಅಳವಡಿಸಲಾಗಿದೆ. ಇದು ತಾಂತ್ರಿಕ ಸಮಸ್ಯೆ ಆಗಿದ್ದರೂ, ರಾಜ್ಯದ ಜನರಿಗೆ ತೊಂದರೆಯಾಗಿರುವುದಕ್ಕೆ ಕ್ಷಮೆ ಕೇಳುತ್ತೇನೆ' ಎಂದು ತಿಳಿಸಿದರು.
‘ಎಲ್ಲ ಜಿಲ್ಲೆಗಳಲ್ಲೂ ಅಧಿಕಾರಿಗಳು ವ್ಯವಸ್ಥಿತವಾಗಿ ಎಲ್ಲವನ್ನೂ ನಿಭಾಯಿಸಿದ್ದಾರೆ. ಜಿಲ್ಲಾ ಮಟ್ಟದ ಕಾಲ್ಸೆಂಟರ್ಗಳು ಬ್ಯಾಕ್ ಅಪ್ ಆಗಿ ಆಕ್ಟೀವೇಟ್ ಆಗಿದೆ. ಇನ್ನೊಂದು ವಾರ ಈ ಬಗ್ಗೆ ಎಚ್ಚರಿಕೆಯಿಂದ ಇರುತ್ತೇವೆ. ಎಲ್ಲಿಯೂ ಲೋಪವಾಗದಂತೆ ಸಮಯಕ್ಕೆ ಸರಿಯಾಗಿ ಕೆಲಸ ಮಾಡುವಂತೆ ವ್ಯವಸ್ಥೆ ಮಾಡಲಾಗಿದೆ. ಈಗಾಗಲೇ ಎಲ್ಲ ಆಸ್ಪತ್ರೆಗಳಿಗೆ ಇಂಟರ್ ಫೆಸಿಲಿಟಿ ಟ್ರಾನ್ಸ್ಫರ್ಗಳಿಗೆ ಮೊದಲ ಆದ್ಯತೆ ನೀಡಬೇಕೆಂದು ಸೂಚಿಸಲಾಗಿದೆ. ಆಂಬ್ಯುಲೆನ್ಸ್ನಲ್ಲಿ ಕಾರ್ಯ ನಿರ್ವಹಿಸುತ್ತಿರುವವರು ತಮ್ಮ ವೈಯಕ್ತಿಕ ಮೊಬೈಲ್ ಸಂಖ್ಯೆಗಳಿಗೂ ಕರೆ ಬಂದರೆ ಸ್ವೀಕರಿಸಿ ಅಗತ್ಯ ಸೇವೆಗಳನ್ನು ಮಾಡಬೇಕೆಂದು ಸೂಚಿಸಲಾಗಿದೆ.
ಮ್ಯಾನ್ಯುವಲ್ ಐಡಿಗಳನ್ನು ಕ್ರಿಯೇಟ್ ಮಾಡಿ ಆ ಮೂಲಕವೂ ಜನರಿಗೆ ತುರ್ತು ಸೇವೆ ಒದಗಿಸಲು ಸೂಚನೆ ನೀಡಲಾಗಿದೆ. ತುರ್ತು ಸೇವೆ ಒದಗಿಸುವ 112 ಸಹಾಯವಾಣಿಯಲ್ಲಿರುವ 2-3 ಸಿಬ್ಬಂದಿ ಬದಲು ಅಲ್ಲಿಗೆ 7-8 ಸಿಬ್ಬಂದಿ ನಿಯೋಜನೆ ಮಾಡಲು ಸೂಚಿಸಲಾಗಿದೆ. ಈ ಮೂಲಕ 108 ಸಹಾಯವಾಣಿಯ ತಂಡದ ಮುಖ್ಯಸ್ಥರಿಗೆ ಕರೆಗಳನ್ನು ಡೈವರ್ಟ್ ಮಾಡಿ ಆ ಮೂಲಕ ಮ್ಯಾನ್ಯುವಲ್ ಐಡಿ ಜನರೇಟ್ ಮಾಡಿ ಆಂಬ್ಯುಲೆನ್ಸ್ ವ್ಯವಸ್ಥೆ ಮಾಡಲಾಗುತ್ತಿದೆ. ಇದರ ಜೊತೆಗೆ 104- ಸಹಾಯವಾಣಿಯನ್ನು ಬಳಸಿಕೊಂಡು 108 -ಸಹಾಯವಾಣಿ ಮೇಲಿನ ಒತ್ತಡ ಕಡಿಮೆ ಮಾಡಲಾಗುತ್ತಿದೆ. ಮಿಸ್ಡ್ ಕಾಲ್ಗಳನ್ನು ಪರಿಗಣನೆಗೆ ತೆಗೆದುಕೊಳ್ಳಲಾಗುತ್ತಿದ್ದು, 108 ಸಹಾಯವಾಣಿಯಲ್ಲಿರುವ ಏಜೆಂಟ್ಗಳ ಸಂಖ್ಯೆಯನ್ನು ಕೂಡ ಹೆಚ್ಚಿಸಲು ಕ್ರಮ ವಹಿಸಲಾಗಿದೆ ಎಂದು ಅವರು ತಿಳಿಸಿದರು.
ಹೊಸ ಆಂಬ್ಯಲೆನ್ಸ್: ‘ಸದ್ಯ ಆಂಬ್ಯಲೆನ್ಸ್ ಸೇವೆ ನೀಡುತ್ತಿರುವ ಜಿವಿಕೆ ಕಾನೂನಾತ್ಮಕ ಹೋರಾಟ ಮಾಡಿದೆ. ಆದರೆ, ಅವರ ಸೇವೆ ಸರ್ಕಾರಕ್ಕೆ ಸಮಾಧಾನ ತಂದಿಲ್ಲ. ಈಗಾಗಲೇ ಕೋರ್ಟ್ ಮಾರ್ಗಸೂಚಿಯಂತೆ ಹೊಸ ಟೆಂಡರ್ ಆಗಿದೆ. ಒಳ್ಳೆಯ ಸೇವೆ ನೀಡುವ ಸಂಸ್ಥೆ ಇನ್ನೊಂದು ತಿಂಗಳಲ್ಲಿ 108 ಆರೋಗ್ಯ ಸೇವೆ ನೀಡಲಿದೆ. ಇದು ತಾಂತ್ರಿಕವಾಗಿ ಉತ್ಕೃಷ್ಠ ಸೇವೆಯಾಗಿರಲಿದ್ದು, ದೇಶದಲ್ಲೇ ಮಾದರಿ ಸೇವೆಯಾಗಿರಲಿದೆ' ಎಂದು ತಿಳಿಸಿದರು.
ಕಾಮಾಲೆ ಕಣ್ಣಿನಿಂದ ನೋಡಬಾರದು: ‘ವಿಪಕ್ಷ ನಾಯಕ ಸಿದ್ದರಾಮಯ್ಯ ಆಂಬ್ಯಲೆನ್ಸ್ ಸಮಸ್ಯೆಗೆ ಭ್ರಷ್ಟಾಚಾರ ಮೂಲ ಕಾರಣ ಎಂದು ಹೇಳಿರುವುದಕ್ಕೆ ಪ್ರತಿಕ್ರಿಯೆ ನೀಡಿರುವುದು ಸರಿಯಲ್ಲ. ತಾಂತ್ರಿಕವಾಗಿ ಅವರಿಗೆ ಏನೂ ಗೊತ್ತಿಲ್ಲ. ಸ್ವಲ್ಪ ತಿಳಿದುಕೊಂಡು ಮಾತನಾಡಬೇಕು. ಕಾಮಾಲೆ ಕಣ್ಣಿಂದ ಎಲ್ಲವನ್ನೂ ನೋಡಬಾರದು' ಎಂದು ಡಾ.ಸುಧಾಕರ್ ತಿರುಗೇಟು ನೀಡಿದರು.
ಬಾಕ್ಸ್..
ಲಿಂಗಾಯತರೇ ಕಾಂಗ್ರೆಸ್ ಟಾರ್ಗೆಟ್: ‘ಕಾಂಗ್ರೆಸ್ ಲಿಂಗಾಯತ ಸಮುದಾಯವನ್ನು ಟಾರ್ಗೆಟ್ ಮಾಡಿದೆ. 173 ಸೀಟ್ ತಂದುಕೊಟ್ಟ ವೀರೇಂದ್ರ ಪಾಟೀಲ್ರನ್ನೇ ಕುಂಟುನೆಪ ಹೇಳಿ ಮುಖ್ಯಮಂತ್ರಿ ಹುದ್ದೆಯಿಂದ ಕಿತ್ತು ಹಾಕಿತ್ತು. ವಿಧಾನಸೌಧ ಕಟ್ಟಿಸಿದ್ದ ಕೆಂಗಲ್ ಹನುಮಂತಯ್ಯರನ್ನು ಅದರ ಉದ್ಘಾಟನೆಗೂ ಬಿಡಲಿಲ್ಲ. ಅಷ್ಟೇ ಅಲ್ಲ ಒಕ್ಕಲಿಗರಾದ ಎಸ್ಸೆಂ ಕೃಷ್ಣ ಅವರನ್ನು ಉತ್ತಮ ಆಡಳಿತ ನೀಡಿದರೂ ಚೆನ್ನಾಗಿ ನಡೆಸಿಕೊಳ್ಳಲಿಲ್ಲ. ಕಾಂಗ್ರೆಸ್ ಕೆಲವೇ ಕೆಲವು ಸಮುದಾಯವನ್ನು ಟಾರ್ಗೆಟ್ ಮಾಡುತ್ತಿದೆ'
-ಡಾ.ಕೆ.ಸುಧಾಕರ್ ಆರೋಗ್ಯ ಸಚಿವ