ಪರಿಶಿಷ್ಟರ ಮೀಸಲಾತಿ ಪ್ರಮಾಣ ಹೆಚ್ಚಳ; ಅ.8ಕ್ಕೆ ಸರ್ವಪಕ್ಷ ಸಭೆ: ಸಚಿವ ಬಿ.ಶ್ರೀರಾಮುಲು
ಬೆಂಗಳೂರು, ಸೆ. 26: ‘ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ(ಎಸ್ಸಿ-ಎಸ್ಟಿ) ಜನಸಂಖ್ಯೆಗೆ ಅನುಗುಣವಾಗಿ ಮೀಸಲಾತಿ ಪ್ರಮಾಣ ಹೆಚ್ಚಿಸಬೇಕೆಂಬ ಬೇಡಿಕೆ ಕುರಿತು ಚರ್ಚಿಸಲು ಅಕ್ಟೋಬರ್ 8ರಂದು ಬೆಂಗಳೂರಿನಲ್ಲಿ ಸರ್ವಪಕ್ಷ ಸಭೆ ಕರೆಯಲಾಗಿದೆ' ಎಂದು ಪರಿಶಿಷ್ಟ ವರ್ಗಗಳ ಇಲಾಖೆ ಹಾಗೂ ಸಾರಿಗೆ ಸಚಿವ ಬಿ.ಶ್ರೀರಾಮುಲು ಅವರು ತಿಳಿಸಿದ್ದಾರೆ.
ಸೋಮವಾರ ವಿಜಯನಗರದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ‘ಮೀಸಲಾತಿ ಹೆಚ್ಚಳಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ವಿಧಾನಸಭೆ ಅಧಿವೇಶನದಲ್ಲಿ ಭರವಸೆ ನೀಡಿದ್ದರು. ಎಲ್ಲ ಪಕ್ಷಗಳ ಮುಖಂಡರ ಸಲಹೆ ಪಡೆದು, ಶೀಘ್ರ ಸಂಪುಟ ಸಭೆಯಲ್ಲಿ ಸೂಕ್ತ ತೀರ್ಮಾನ ತೆಗೆದುಕೊಳ್ಳಲಾಗುವುದು’ ಎಂದು ಹೇಳಿದರು.
‘ಪರಿಶಿಷ್ಟರ ಮೀಸಲಾತಿ ಹೆಚ್ಚಳಕ್ಕೆ ರಾಜ್ಯ ಸರಕಾರ ಬದ್ಧ. ವಾಲ್ಮೀಕಿ ಜಯಂತಿ ಬಹಿಷ್ಕಾರಕ್ಕೆ ಸತೀಶ್ ಜಾರಕಿಹೊಳಿ ಕರೆ ನೀಡಿರುವುದು ಸರಿಯಲ್ಲ. ಕನಿಷ್ಟ ರಾಜಕೀಯ ಜ್ಞಾನವುಳ್ಳ ವ್ಯಕ್ತಿ ಹೀಗೆ ಹೇಳಿಕೆ ನೀಡುವುದಿಲ್ಲ. ವಾಲ್ಮೀಕಿ ಜಯಂತಿ ಹೆಸರಿನಲ್ಲಿ ರಾಜಕಾರಣ ಮಾಡುವುದು ಸರಿಯಲ್ಲ' ಎಂದು ಶ್ರೀರಾಮುಲು ಇದೇ ವೇಳೆ ಆಕ್ಷೇಪಿಸಿದರು.