ಗದಗ | ಪ್ರವಾದಿ ಮುಹಮ್ಮದ್ ಬಗ್ಗೆ ಶಾಲಾ ಮಕ್ಕಳಿಗೆ ಪ್ರಬಂಧ ಸ್ಪರ್ಧೆ: ಮುಖ್ಯ ಶಿಕ್ಷಕ ಅಮಾನತು
ಗದಗ: ಶಾಲಾ ಆವರಣದಲ್ಲಿ ಪ್ರವಾದಿ ಮುಹಮ್ಮದ್ ಕುರಿತು ಪ್ರಬಂಧ ಸ್ಪರ್ಧೆ ನಡೆಸಿದ ಆರೋಪದ ಮೇಲೆ ನಾಗಾವಿ ಗ್ರಾಮದ ಸರ್ಕಾರಿ ಪ್ರೌಢ ಶಾಲೆಯ ಮುಖ್ಯ ಶಿಕ್ಷಕರನ್ನು ಅಮಾನತುಗೊಳಿಸಲಾಗಿದೆ.
ಅಬ್ದುಲ್ ಮುನಾಫ್ ಬಿಜಾಪೂರ ಅವರನ್ನು ನಿಯಮಗಳ ರೀತಿಯ ವಿಚಾರಣೆ ಕಾಯ್ದಿರಿಸಿ, ಸೇವೆಯಿಂದ ಅಮಾನತುಗೊಳಿಸಿ ಸಾರ್ವಜನಿಕ ಶಿಕ್ಷಣ ಇಲಾಖೆ ಹೆಚ್ಚುವರಿ ಆಯುಕ್ತ ಸಿದ್ರಾಮಪ್ಪ ಎಸ್.ಬಿರಾದಾರ್ ಆದೇಶ ಹೊರಡಿಸಿದ್ದಾರೆ ಎಂದು ತಿಳಿದು ಬಂದಿದೆ.
ಕಳೆದ ವಾರ ಪ್ರಾಂಶುಪಾಲ ಮುನಾಫ್ ಬಿಜಾಪುರ ಅವರು ವಿದ್ಯಾರ್ಥಿಗಳಿಗೆ ಪ್ರಬಂಧ ಸ್ಪರ್ಧೆ ಏರ್ಪಡಿಸಿ ವಿಜೇತರಿಗೆ ಆಕರ್ಷಕ ನಗದು ಬಹುಮಾನವನ್ನೂ ಘೋಷಿಸಿದ್ದರು ಎಂದು ಆರೋಪಿಸಿ ಶಾಲೆಗೆ ನುಗ್ಗಿದ ಶ್ರೀರಾಮ ಸೇನೆ ಕಾರ್ಯಕರ್ತರು ಮುಖ್ಯ ಶಿಕ್ಷಕರನ್ನು ತರಾಟೆಗೆ ತೆಗೆದುಕೊಂಡಿದ್ದರು.
''ಗದಗದ ಮುಸ್ಲಿಮ್ ಮುಖಂಡರೊಬ್ಬರು ಕೆಲವು ದಿನಗಳ ಹಿಂದೆ ನಮ್ಮ ಶಾಲೆಗೆ ಭೇಟಿ ನೀಡಿ ಪ್ರವಾದಿ ಮಹಮ್ಮದ್ ಅವರ ಕುರಿತಾದ ಎರಡು ಪುಸ್ತಕಗಳನ್ನು ಉಡುಗೊರೆಯಾಗಿ ನೀಡಿದ್ದರು. ನಂತರ ನಾನು ಸ್ಪರ್ಧೆಯನ್ನು ಆಯೋಜಿಸಿದ್ದೆ. ನಗದು ಬಹುಮಾನವು ವಿದ್ಯಾರ್ಥಿಗಳಿಗೆ ಸಹಾಯವಾಗುತ್ತದೆ ಎಂದು ಭಾವಿಸಿದೆ. ನಾನು ಈಗಾಗಲೇ ಪ್ರತಿಭಟನಾಕಾರರು ಮತ್ತು ಶಿಕ್ಷಣ ಇಲಾಖೆಯ ಅಧಿಕಾರಿಗಳಲ್ಲಿ ಕ್ಷಮೆಯಾಚಿಸಿದ್ದೇನೆ'' ಎಂದು ಪ್ರಾಂಶುಪಾಲ ಮುನಾಫ್ ಬಿಜಾಪುರ ಅವರು ಸ್ಪಷ್ಟನೆ ನೀಡಿದ್ದರು.