ಮಹಿಳಾ ಪಿಎಸ್ಐಗೆ ನಿಂದಿಸಿ, ಕರ್ತವ್ಯಕ್ಕೆ ಅಡ್ಡಿ ಪಡಿಸಿದ ಆರೋಪ: ಬಿಜೆಪಿ ಮುಖಂಡ ಅಪ್ಪಣ್ಣ ವಿರುದ್ಧ ಪ್ರಕರಣ ದಾಖಲು
ಮೈಸೂರು, ಅ.3: ಮೈಸೂರು ದಸರಾ ಅಂಗವಾಗಿ ನಡೆಯುತ್ತಿರುವ ಯುವ ದಸರಾ ಕಾರ್ಯಕ್ರಮದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ವೇಳೆ ಅವಾಚ್ಯ ಶಬ್ದಗಳಿಂದ ನಿಂದಿಸಿ ಕರ್ತವ್ಯಕ್ಕೆ ಅಡ್ಡಿಪಡಿಸಿದ್ದಾರೆಂದು ಆರೋಪಿಸಿ ಬಿಜೆಪಿ ಮುಖಂಡ ಅಪ್ಪಣ್ಣ ವಿರುದ್ಧ ಮಹಿಳಾ ಪೊಲೀಸರೊಬ್ಬರು ದೂರು ನೀಡಿದ್ದಾರೆ.
ಮೈಸೂರಿನ ಅಶೋಕಪುರಂ ಪೊಲೀಸ್ ಠಾಣೆಯಲ್ಲಿ ಪಿಎಸ್ಐ ಆಗಿ ಕರ್ತವ್ಯ ನಿರ್ವಹಿಸುತ್ತಿರುವ ಸ್ಮಿತಾ ಎಂಬವರು ಬಿಜೆಪಿ ಮುಖಂಡ ಅಪ್ಪಣ್ಣ ವಿರುದ್ಧ ಲಕ್ಷ್ಮೀಪುರಂ ಪೊಲೀಸ್ ಠಾಣೆಗೆ ದೂರು ನೀಡಿದ್ದು, ಈ ಸಂಬಂಧ ಎಫ್ಐಆರ್ ದಾಖಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಯುವ ದಸರಾ ಕಾರ್ಯಕ್ರಮಕ್ಕೆ ಬಂದೋಬಸ್ತ್ ಗಾಗಿ ನನ್ನನ್ನ ನಿಯೋಜನೆ ಮಾಡಲಾಗಿತ್ತು. ಈ ವೇಳೆ ಕಾರ್ಯಕ್ರಮಕ್ಕೆ ಬಂದಿದ್ದ ಜಿಲ್ಲಾ ಉಸ್ತುವಾರಿ ಸಚಿವರಿಗೆ ಕಾಯ್ದಿರಿಸಿದ ಜಾಗವನ್ನ ತೋರಿಸಿ ಕಳುಹಿಸಿದೆ. ಈ ಸಮಯದಲ್ಲಿ ಅಪ್ಪಣ್ಣ ಮತ್ತು ಬೆಂಬಲಿಗರನ್ನು ತಡೆದಾಗ ನನಗೆ ಅವಾಚ್ಯ ಶಬ್ದಗಳಿಂದ ನಿಂದಿಸಿ ಕರ್ತವ್ಯಕ್ಕೆ ಅಡ್ಡಿಪಡಿಸಿದ್ದಾರೆ. ಹೀಗಾಗಿ ಅಪ್ಪಣ್ಣ ಮತ್ತು ಸಹಚರರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ದೂರಿನಲ್ಲಿ ಪಿಎಸ್ಐ ಸ್ಮಿತಾ ಮನವಿ ಮಾಡಿದ್ದಾರೆ.