ಶಿವಮೊಗ್ಗ : ಬೈಕಿನಲ್ಲಿ ಬಂದ ತಂಡದಿಂದ ಯುವಕನಿಗೆ ಹಲ್ಲೆ; ದೂರು ದಾಖಲು
ಶಿವಮೊಗ್ಗ: ಬೈಕಿನಲ್ಲಿ ಬಂದ ದುಷ್ಕರ್ಮಿಗಳ ತಂಡವೊಂದು ಯುವಕನ ಮೇಲೆ ಕಲ್ಲು ತೂರಾಟ ನಡೆಸಿದ ಪರಿಣಾಮ ಯುವಕನ ತಲೆಗೆ ಗಾಯವಾದ ಘಟನೆ ಶಿವಮೊಗ್ಗದಲ್ಲಿ ಸೋಮವಾರ ತಡರಾತ್ರಿ ನಡೆದಿದೆ.
ಪ್ರಕಾಶ್ (25) ಎಂಬಾತನ ಮೇಲೆ ದಾಳಿ ನಡೆಸಲಾಗಿದೆ. ಭರ್ಮಪ್ಪನಗರದ 2ನೇ ಅಡ್ಡರಸ್ತೆಯಲ್ಲಿ ರಾತ್ರಿ ಘಟನೆ ಸಂಭವಿಸಿದೆ.
ಬೈಕಿನಲ್ಲಿ ಬಂದ ದುಷ್ಕರ್ಮಿಗಳು ಯುವಕನ ಮೇಲೆ ಕಲ್ಲು ತೂರಾಟ ಮಾಡಿದ್ದು, ತಲೆಗೆ ಗಾಯವಾಗಿದೆ. ಕೂಡಲೇ ಯುವಕನನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದ್ದು ವಿಚಾರ ತಿಳಿಯುತ್ತಿದ್ದಂತೆ ಜನ ಗುಂಪು ಸೇರಿದ್ದರಿಂದ ಕೆಲಕಾಲ ಬಿಗುವಿನ ವಾತಾವರಣ ನಿರ್ಮಾಣವಾಗಿತ್ತು.
ಸದ್ಯ ಪ್ರಕಾಶ್ಗೆ ಯಾವುದೇ ತೊಂದರೆ ಇಲ್ಲ ಎಂದು ವೈದ್ಯರು ತಿಳಿಸಿದ್ದಾರೆ. ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರಿದಿದೆ.
ಸ್ಥಳಕ್ಕೆ ಪೊಲೀಸರು ದೌಡಾಯಿಸಿ ಪರಿಸ್ಥಿತಿ ತಿಳಿಗೊಳಿಸಿದರು. ಜಿಲ್ಲಾ ರಕ್ಷಣಾಧಿಕಾರಿ ಮಿಥುನ್ ಕುಮಾರ್ ಸೇರಿದಂತೆ ಹಿರಿಯ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿದ್ದಾರೆ. ಈ ಬಗ್ಗೆ ಇಲ್ಲಿನ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.
ಇದನ್ನೂ ಓದಿ: ಶಿವಮೊಗ್ಗ | ಹರ್ಷ ಸಹೋದರಿ ಸಹಿತ 15 ಮಂದಿಯ ವಿರುದ್ಧ ಎಫ್ಐಆರ್ ದಾಖಲು