ಹಿಂದೂ ಪದದ ಬಗ್ಗೆ ಹೇಳಿಕೆ ಹಿಂಪಡೆದ ಸತೀಶ್ ಜಾರಕಿಹೊಳಿ
ಅವಾಂತರ ಸೃಷ್ಟಿಸಿದವರ ವಿರುದ್ಧ ತನಿಖೆಗೆ ಆಗ್ರಹಿಸಿ ಸಿಎಂ ಬೊಮ್ಮಾಯಿಗೆ ಪತ್ರ
ಬೆಂಗಳೂರು: ಹಿಂದೂ ಪದದ ಬಗ್ಗೆ ನೀಡಿದ್ದ ತನ್ನ ಹೇಳಿಕೆಯನ್ನು ಕಾಂಗ್ರೆಸ್ ನಾಯಕ, ಮಾಜಿ ಸಚಿವ, ಕೆಪಿಸಿಸಿ ಕಾರ್ಯಾಧ್ಯಕ್ಷ ಹಾಗೂ ಹಾಲಿ ಶಾಸಕ ಸತೀಶ್ ಜಾರಕಿಹೊಳಿ ಹಿಂಪಡೆದಿದ್ದಾರೆ.
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಬುಧವಾರ ಪತ್ರ ಬರೆದ ಸತೀಶ್ ಜಾರಕಿಹೊಳಿ, '' ನ. 06ರಂದು ಪ್ಪಾಣಿಯಲ್ಲಿ ಜರುಗಿದ ಮಾನವ ಬಂಧುತ್ವ ವೇದಿಕೆ ಕರ್ನಾಟಕ ಇದರ ಕಾರ್ಯಕ್ರಮದಲ್ಲಿ ಹಿಂದೂ ಪದದ ಕುರಿತು ನಾನು ನೀಡಿದ ಹೇಳಿಕೆಯನ್ನು ತಿರುಚಿ ಅಪಪ್ರಚಾರ ಮಾಡಲಾಗುತ್ತಿದೆ. ಇದರಿಂದ ಸಾರ್ವಜನಿಕರಲ್ಲಿ ಗೊಂದಲ ಸೃಷ್ಟಿ ಆಗಬಾರದು ಎಂದು ಹೇಳಿಕೆ ಹಿಂಪಡೆದಿದ್ದೇನೆ. ನನ್ನ ಹೇಳಿಕೆಯಿಂದ ಯಾರಿಗಾದರೂ ನೋವಾಗಿದ್ದರೆ ವಿಷಾದಿಸುತ್ತೇನೆ'' ಎಂದು ಪತ್ರದಲ್ಲಿ ತಿಳಿಸಿದ್ದಾರೆ.
''ಕೆಲವು ಪಟ್ಟಭದ್ರ ಹಿತಾಸಕ್ತಿಗಳು ನನ್ನನ್ನು ಹಿಂದೂ ವಿರೋಧಿ ಎಂದು ಬಿಂಬಿಸಲು ಹೊರಟಿವೆ. ನನ್ನ ತೇಜೋವಧೆ ಮಾಡುವ ವ್ಯವಸ್ಥಿತಿ ಪಿತೂರಿ ನಡೆದಿದೆ. ಈ ಎಲ್ಲ ಅಂಶಗಳ ಕುರಿತು ಪರಿಶೀಲಿಸಬೇಕು. ನೈಜ ಸ್ಥಿತಿ ವಿವರಿಸದೇ, ಅವಾಂತರ ಸೃಷ್ಟಿಸಿದವರ ವಿರುದ್ಧ ತನಿಖೆಗಾಗಿ ಸಮಿತಿ ರಚಿಸಬೇಕು'' ಎಂದೂ ಆಗ್ರಹಸಿದ್ದಾರೆ.
''ಹಿಂದೂ ಶಬ್ಧ ಪರ್ಷಿಯನ್ ಭಾಷೆಯಿಂದ ಬಂದಿದೆ. ಇದು ಭಾರತಕ್ಕೆ ಹೇಗೆ ಬಂತು? ಹಲವಾರು ಲೇಖನಗಳಲ್ಲಿ ಹಿಂದೂ ಪದದ ಬಗ್ಗೆ ಕೆಟ್ಟ ಅರ್ಥಗಳಿವೆ ಎಂಬುದಾಗಿ ಬರೆದಿದ್ದಾರೆ ಎಂದು ನಾನು ಹೇಳಿಕೆ ನೀಡಿದ್ದೇನೆ. ಈ ಬಗ್ಗೆ ಸಾರ್ವಜನಿಕ ವಲಯದಲ್ಲಿ ಚರ್ಚೆ ಆಗಬೇಕಾದುದು ಅವಶ್ಯ ಎಂದು ಹೇಳಿದ್ದೇನೆ. ವಿಕಿಪೀಡಿಯಾ, ಪುಸ್ತಕಗಳು, ಶಬ್ದಕೋಶಗಳು ಹಾಗೂ ಇತಿಹಾಸಕಾರರ ಬರಹದ ಉಲ್ಲೇಖದ ಮೇಲೆ ಈ ನನ್ನ ಭಾಷಣ ಆಧರಿತವಾಗಿದೆ'' ಎಂದು ವಿವರಿಸಿದ್ದಾರೆ.