ಗೆಲ್ಲುವ ಸಾಮರ್ಥ್ಯ ಇರುವವರಿಗೆ ಮಾತ್ರ ಟಿಕೆಟ್ ನೀಡಬೇಕು: ಸತೀಶ್ ಜಾರಕಿಹೊಳಿ
ಬೆಳಗಾವಿ, ಡಿ.9: ಮುಂಬರುವ ವಿಧಾನಸಭಾ ಚುನಾವಣೆಗೆ ಸಂಬಂಧಿಸಿದಂತೆ ಅಗತ್ಯ ತಂತ್ರಗಾರಿಕೆಯನ್ನು ಮಾಡದಿದ್ದರೆ, ರಾಜ್ಯದಲ್ಲಿ ಚುನಾವಣೆ ಗೆಲ್ಲಲು ಸಾಧ್ಯವಾಗುವುದಿಲ್ಲ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ತಿಳಿಸಿದ್ದಾರೆ.
ಶುಕ್ರವಾರ ಇಲ್ಲಿನ ಜಾಧವನಗರದಲ್ಲಿ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ಚುನಾವಣೆಯಲ್ಲಿ ಸೋಲುತ್ತಾರೆ ಎಂದು ಗೊತ್ತಿದ್ದರೂ ಕೆಲವರಿಗೆ ಹಿರಿಯರು ಎಂಬ ಕಾರಣಕ್ಕೆ ಟಿಕೆಟ್ ನೀಡಲಾಗುತ್ತಿದೆ. ಗೆಲ್ಲುವ ಸಾಮರ್ಥ್ಯ ಇರುವವರಿಗೆ ಮಾತ್ರ ಟಿಕೆಟ್ ನೀಡಬೇಕು ಎಂದರು.
ಜಾತಿ ಆಧಾರದಲ್ಲಿ ಚುನಾವಣೆ ಗೆಲ್ಲುವ ಕಾಲ ಮುಗಿದಿದೆ. ಯಾರು ಏನು ಕೆಲಸ ಮಾಡುತ್ತಿದ್ದಾರೆ ಅನ್ನೋದನ್ನು ಜನ ನೋಡುತ್ತಿದ್ದಾರೆ. ಆದುದರಿಂದ, ಕಾಂಗ್ರೆಸ್ ಪಕ್ಷದಲ್ಲಿಯೂ ಕೆಲಸ ಮಾಡುವವರಿಗೆ, ಹೊಸಬರಿಗೆ ಅವಕಾಶಗಳನ್ನು ನೀಡಬೇಕು ಎಂದು ಸತೀಶ್ ಜಾರಕಿಹೊಳಿ ಹೇಳಿದರು.
ಗುಜರಾತ್ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಅಷ್ಟೊಂದು ಕಡಿಮೆ ಸ್ಥಾನ ಬರಬಹುದು ಎಂದು ನಿರೀಕ್ಷೆ ಮಾಡಿರಲಿಲ್ಲ. ಆಮ್ ಆದ್ಮಿ ಪಕ್ಷ ಶೇ.13ರಷ್ಟು ಕಾಂಗ್ರೆಸ್ ಮತಗಳನ್ನು ಪಡೆದುಕೊಂಡಿದ್ದೆ ಕಾಂಗ್ರೆಸ್ ಸೋಲಿಗೆ ಪ್ರಮುಖ ಕಾರಣ. ಆದರೆ, ನಮ್ಮ ರಾಜ್ಯದಲ್ಲಿ ಆಮ್ ಆದ್ಮಿ ಪಕ್ಷದಿಂದ ಅಂತಹ ಪರಿಸ್ಥಿತಿ ನಿರ್ಮಾಣವಾಗುವುದಿಲ್ಲ ಎಂದು ಅವರು ತಿಳಿಸಿದರು.
ನಮ್ಮ ರಾಜ್ಯದಲ್ಲಿ ಜೆಡಿಎಸ್ ಪಕ್ಷವಿದೆ. ಅದು ಕೆಲವು ಸೀಮಿತ ಕ್ಷೇತ್ರಗಳಲ್ಲಿ ತನ್ನ ಸಾಮಥ್ರ್ಯ ಉಳಿಸಿಕೊಂಡಿದೆ. ನಾವು ಯಾವ ಯಾವ ಕ್ಷೇತ್ರಗಳಲ್ಲಿ ಗೆಲ್ಲಬೇಕೋ ಅಂತಹ ಕಡೆ ಹೆಚ್ಚಿನ ಪ್ರಯತ್ನಗಳನ್ನು ಮಾಡಬೇಕು ಎಂದ ಅವರು, ಹಿಮಾಚಲ ಪ್ರದೇಶದಲ್ಲಿ ಕಾಂಗ್ರೆಸ್ ಪಕ್ಷ ಸ್ಪಷ್ಟ ಬಹುಮತ ಪಡೆಯಲು ಅಲ್ಲಿನ ಬಿಜೆಪಿ ಸರಕಾರದ ಆಡಳಿತ ವಿರೋಧಿ ಅಲೆ ಕಾರಣ ಎಂದರು.
ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಪ್ರಧಾನ ಕಾರ್ಯದರ್ಶಿ ಪ್ರಿಯಂಕಾ ಗಾಂಧಿ ಮತ್ತು ಪಕ್ಷದ ಚುನಾವಣಾ ಉಸ್ತುವಾರಿಗಳು ಮಾಡಿದಂತಹ ಚುನಾವಣಾ ತಂತ್ರಗಾರಿಕೆ, ಪ್ರಚಾರದಿಂದ ಕಾಂಗ್ರೆಸ್ ಪಕ್ಷ 40 ಸ್ಥಾನಗಳನ್ನು ಪಡೆಯಲು ಸಾಧ್ಯವಾಯಿತು ಎಂದು ಸತೀಶ್ ಜಾರಕಿಹೊಳಿ ಹೇಳಿದರು.