ಅಮಿತ್ ಶಾ ರಾಜ್ಯ ಪ್ರವಾಸದಿಂದ ಸಂಚಲನ ಸೃಷ್ಟಿ: ಸಚಿವ ಡಾ.ಅಶ್ವತ್ಥ ನಾರಾಯಣ
ಬೆಳಗಾವಿ(ಸುವರ್ಣ ವಿಧಾನಸೌಧ), ಡಿ.28: ಕೇಂದ್ರ ಗೃಹ ಸಚಿವ ಅಮಿತ್ ಶಾ ರಾಜ್ಯಕ್ಕೆ ಭೇಟಿ ನೀಡುತ್ತಿರುವುದರಿಂದ ದೊಡ್ಡ ಸಂಚಲನ ಸೃಷ್ಟಿಯಾಗುತ್ತದೆ. ಅಲ್ಲದೆ, ಪಕ್ಷಕ್ಕೆ ದೊಡ್ಡ ಶಕ್ತಿಯೂ ಬರಲಿದೆ ಎಂದು ಉನ್ನತ ಶಿಕ್ಷಣ ಸಚಿವ ಡಾ.ಅಶ್ವತ್ಥ ನಾರಾಯಣ ತಿಳಿಸಿದರು.
ಬುಧವಾರ ಸುವರ್ಣ ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹಳೆ ಮೈಸೂರು ಭಾಗದಲ್ಲಿ ಪಕ್ಷದ ಸಂಘಟನೆ ಹಾಗೂ ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಹೆಚ್ಚಿನ ಸ್ಥಾನಗಳನ್ನು ಗೆಲ್ಲುವ ನಿಟ್ಟಿನಲ್ಲಿ ಅಮಿತ್ ಶಾ ಭೇಟಿ ಸಹಕಾರಿಯಾಗಲಿದೆ ಎಂದರು.
ಮೈಶುಗರ್ ಸಕ್ಕರೆ ಕಾರ್ಖಾನೆಯನ್ನೆ ಸರಿಯಾಗಿ ನಿರ್ವಹಣೆ ಮಾಡುವುದಕ್ಕೆ ಜೆಡಿಎಸ್ ಹಾಗೂ ಕಾಂಗ್ರೆಸ್ ಪಕ್ಷಗಳ ಸರಕಾರಗಳಿಗೆ ಆಗಲಿಲ್ಲ. ಹಳೆ ಮೈಸೂರು ಭಾಗದ ಜನ ಜೆಡಿಎಸ್ ಹಾಗೂ ಕಾಂಗ್ರೆಸ್ ಅನ್ನು ಬಹಳ ನಂಬಿದ್ದರು.ಆದರೆ, ಅದರಿಂದ ಏನೂ ಆಗಿಲ್ಲ ಎಂದು ಅಶ್ವತ್ಥ ನಾರಾಯಣ ತಿಳಿಸಿದರು.
ಪಾಂಡವಪುರದಲ್ಲಿರುವ ಮೈಶುಗರ್ ಸೇರಿದಂತೆ ಎಲ್ಲ ಅಭಿವೃದ್ಧಿ ಕೂಡ ಬಿಜೆಪಿಯಿಂದಲೇ ಆಗಿದೆ.ಎಲ್ಲ ವರ್ಗದ ಜನರನ್ನು ಪ್ರತಿನಿಧಿಸಿ ಸರ್ವಾಂಗೀಣ ಅಭಿವೃದ್ಧಿಗೆ ನಾವು ಕೆಲಸ ಮಾಡುತ್ತೇವೆ ಎಂದು ಅವರು ಹೇಳಿದರು.
ರಾಜ್ಯದಲ್ಲಿ ಅವಧಿಪೂರ್ವ ಚುನಾವಣೆ ನಡೆಯಲಿದೆಯೇ ಎಂಬ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅಶ್ವತ್ಥ ನಾರಾಯಣ ಆ ವಿಚಾರವನ್ನು ಕೇಂದ್ರ ಚುನಾವಣಾ ಆಯೋಗ ನಿರ್ಧಾರ ಮಾಡುತ್ತದೆ ಎಂದರು.