ಜ.16ಕ್ಕೆ ‘ರೈತ ಸಂಕ್ರಾಂತಿ’: ಲಾಂಛನ ಬಿಡುಗಡೆ ಮಾಡಿದ ಕುಮಾರಸ್ವಾಮಿ
ಬೆಂಗಳೂರು, ಜ.11: ಇದೇ ತಿಂಗಳು 16ರ ಸಂಜೆ ಜೆಡಿಎಸ್ ಪಕ್ಷದಿಂದ ರೈತ ಸಂಕ್ರಾಂತಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಅನ್ನದಾತನ ಆಮೂಲಾಗ್ರ ಸಬಲೀಕರಣ ನನ್ನ ಆಶಯ. ಅದಕ್ಕಾಗಿ ಪಂಚರತ್ನ ಕಾರ್ಯಕ್ರಮಗಳಲ್ಲಿ ರೈತ ಚೈತನ್ಯ ಯೋಜನೆ ರೂಪಿಸಿದ್ದೇನೆ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ತಿಳಿಸಿದ್ದಾರೆ.
ಬುಧವಾರ ಸೇಡಂ ವಿಧಾನಸಭಾ ಕ್ಷೇತ್ರದ ಸುಲೇಪೇಟೆಯಲ್ಲಿ ಸುದ್ದಿಗೋಷ್ಠಿ ನಡೆಸಿ ರೈತ ಸಂಕ್ರಾಂತಿಯ ಲಾಂಛನ ಬಿಡುಗಡೆ ಮಾಡಿದ ಅವರು, ಅಂದು ಆನ್ಲೈನ್ ವೇದಿಕೆ ಮೂಲಕ ಐವತ್ತಕ್ಕೂ ಹೆಚ್ಚು ವಿಧಾನಸಭೆ ಕ್ಷೇತ್ರಗಳ ರೈತರ ಜತೆ ಸಂವಾದ ನಡೆಸಲಿದ್ದೇನೆ. ಕೃಷಿ ವಲಯದ ಜ್ವಲಂತ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ಕಂಡುಕೊಳ್ಳುವುದು ನನ್ನ ಉದ್ದೇಶ ಎಂದರು.
ಈ ಅರ್ಥಪೂರ್ಣ ಕಾರ್ಯಕ್ರಮದಲ್ಲಿ ಅನ್ನದಾತರು ದೊಡ್ಡ ಪ್ರಮಾಣದಲ್ಲಿ ಭಾಗಿಯಾಗಬೇಕು ಎಂದು ವಿನಂತಿಸುತ್ತೇನೆ ಎಂದು ಕುಮಾರಸ್ವಾಮಿ ಹೇಳಿದರು. ಈ ಸಂದರ್ಭದಲ್ಲಿ ಮಾಜಿ ಸಚಿವ ವೆಂಕಟರಾವ್ ನಾಡಗೌಡ, ವಿಧಾನ ಪರಿಷತ್ ಸದಸ್ಯ ಭೋಜೇಗೌಡ, ಮಾಜಿ ಸದಸ್ಯ ಎಚ್.ಎಂ.ರಮೇಶ್ ಗೌಡ, ಸೇಡಂ ಕ್ಷೇತ್ರದ ಅಭ್ಯರ್ಥಿ ಬಾಲರಾಜ್ ಗುತ್ತೇದಾರ್, ಜಿಲ್ಲಾಧ್ಯಕ್ಷ ಸುರೇಶ್ ಮಾಗಾವಂಕರ್ ಸೇರಿದಂತೆ ಇನ್ನಿತರರು ಹಾಜರಿದ್ದರು.