ಸಕಲೇಶಪುರ: ಕಾಡ್ಗಿಚ್ಚಿಗೆ ಸಿಲುಕಿ ಅರಣ್ಯ ವೀಕ್ಷಕ ಸಾವು
ಸಕಲೇಶಪುರ: ಸಕಲೇಶಪುರ ತಾಲೂಕಿನ ಪಶ್ಚಿಮಘಟ್ಟದ ಕಾಡ್ಗಿಚ್ಚಿಗೆ ಸಿಲುಕಿ ಸುಟ್ಟಗಾಯಗಳೊಂದಿಗೆ ಆಸ್ಪತ್ರೆಗೆ ದಾಖಲಾಗಿದ್ದ ಅರಣ್ಯ ವೀಕ್ಷಕ ಚಿಕಿತ್ಸೆ ಫಲಕಾರಿಯಾಗದೇ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಸಾವನ್ನಪ್ಪಿರುವುದಾಗಿ ವರದಿಯಾಗಿದೆ.
ತೀರ್ಥಹಳ್ಳಿ ನಿವಾಸಿ ಸುಂದರೇಶ್ ಮೃತಪಟ್ಟ ಅರಣ್ಯ ವೀಕ್ಷಕ ಎಂದು ಗುರುತಿಸಲಾಗಿದೆ. ತಾಲೂಕಿನ ಮೂರ್ಕಣ್ಣು ಗುಡ್ಡ ಅರಣ್ಯ ಪ್ರದೇಶದಲ್ಲಿ ಗುರುವಾರ ಮಧ್ಯಾಹ್ನ ಕಾಡ್ಗಿಚ್ಚು ಕಾಣಿಸಿಕೊಂಡಿತ್ತು. ಕಾಡ್ಗಿಚ್ಚಿಗೆ ಸಿಲುಕಿ ಅರಣ್ಯ ಇಲಾಖೆ ಸಿಬ್ಬಂದಿಗಳಾದ ಮಂಜುನಾಥ್, ಸುಂದರೇಶ್, ತುಂಗೇಶ್, ಮಹೇಶ್ ಗಂಭೀರ ಗಾಯಗೊಂಡಿದ್ದರು.
ಗಾಯಗೊಂಡ ಇವರನ್ನು ಪಟ್ಟಣದ ಖಾಸಗಿ ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಿ ಜಿಲ್ಲಾಸ್ಪತ್ರೆಗೆ ರವಾನಿಸಲಾಗಿತ್ತು. ಈ ಪೈಕಿ ಗಾಯಾಳು ಮಂಜುನಾಥ್ ಹಾಗೂ ಸುಂದರೇಶ್ ರವರಿಗೆ ಹೆಚ್ಚಿನ ಚಿಕಿತ್ಸೆಗಾಗಿ ಜಿಲ್ಲಾಸ್ಪತ್ರೆಯಿಂದ ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ತೀವ್ರ ಸುಟ್ಟ ಗಾಯಗಳೊಂದಿಗೆ ಸುಂದರೇಶ್ ಮೃತಪಟ್ಟಿರುವುದಾಗಿ ತಿಳಿದುಬಂದಿದೆ.