ಶೃಂಗೇರಿ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಘೋಷಣೆ; ಶಾಸಕ ರಾಜೇಗೌಡ 2ನೇ ಬಾರಿಗೆ ಸ್ಪರ್ಧೆ
ಚಿಕ್ಕಮಗಳೂರು, ಮಾ.25: ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ಕಾಂಗ್ರೆಸ್ ಪಕ್ಷ ಶನಿವಾರ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆಗೊಳಿಸಿದ್ದು, ನಿರೀಕ್ಷೆಯಂತೆ ಶೃಂಗೇರಿ ಕ್ಷೇತ್ರದಿಂದ ಟಿ.ಡಿ.ರಾಜೇಗೌಡ ಅವರನ್ನು ಅಭ್ಯರ್ಥಿಯಾಗಿ ಘೋಷಣೆ ಮಾಡ ಲಾಗಿದೆ. ಇದರೊಂದಿಗೆ ಟಿ.ಡಿ.ರಾಜೇಗೌಡ ಎರಡನೇ ಬಾರಿಗೆ ಅದೃಷ್ಟ ಪರೀಕ್ಷೆಗೆ ಮುಂದಾಗಿದ್ದಾರೆ.
ಮಾಜಿ ಸಚಿವ ಹಾಗೂ ಹಾಲಿ ಮುಖ್ಯಮಂತ್ರಿ ರಾಜಕೀಯ ಕಾರ್ಯದರ್ಶಿಯಾಗಿರುವ ಡಿ.ಎನ್.ಜೀವರಾಜ್ ವಿರುದ್ಧ ಮೊದಲ ಬಾರಿಗೆ ಕಣಕ್ಕಿಳಿದು ಪರಾಭವಗೊಂಡಿದ್ದರು. ಸೋಲಿನ ಬಳಿಕ ಕ್ಷೇತ್ರದ ಜನತೆಯೊಂದಿಗೆ ನಿಕಟ ಸಂಪರ್ಕ ಹೊಂದಿದ್ದ ಅವರು 2018ರಲ್ಲಿ ನಡೆದ ವಿಧಾನಸಭೆ ಚುನಾವಣೆಯಲ್ಲಿ ಡಿ.ಎನ್.ಜೀವರಾಜ್ ವಿರುದ್ಧ ಅತ್ಯಲ್ಪ ಮತಗಳ ಅಂತರದಲ್ಲಿ ಗೆಲುವು ಸಾಧಿಸಿ ವಿಧಾನಸಭೆ ಪ್ರವೇಶಿಸಿದ್ದರು. 2023ರ ವಿಧಾನಸಭೆ ಚುನಾವಣೆಗೆ ಟಿ.ಡಿ.ರಾಜೇಗೌಡ ಅವರನ್ನು ಅಭ್ಯರ್ಥಿಯಾಗಿ ಪಕ್ಷ ಘೋಷಣೆ ಮಾಡಿದ್ದು, ಮತ್ತೊಮ್ಮೆ ಪ್ರತಿಸ್ಫರ್ಧಿಗಳ ವಿರುದ್ಧ ತೊಡೆ ತಟ್ಟಲಿದ್ದಾರೆ. ಶೃಂಗೇರಿ ಕ್ಷೇತ್ರದಿಂದ ಜೆಡಿಎಸ್ ಪಕ್ಷ ಸುಧಾಕರ್ ಶೆಟ್ಟಿ ಅವರನ್ನು ಅಭ್ಯರ್ಥಿ ಯಾಗಿ ಘೋಷಣೆ ಮಾಡಿದ್ದರೇ, ಆಮ್ ಆದ್ಮಿ ಪಕ್ಷದಿಂದ ಎಚ್.ಎಸ್.ರಾಜನ್ಗೌಡ ಅವರನ್ನು ಕಣಕ್ಕಿಳಿಸಿದೆ. ಬಿಜೆಪಿ ಪಕ್ಷದ ಅಭ್ಯರ್ಥಿಯಾಗಿ ಮಾಜಿ ಸಚಿವ ಜೀವರಾಜ್ ಆಗಿದ್ದು, ಅಧಿಕೃತ ಘೋಷಣೆ ಬಾಕಿ ಇದೆ.
ಶೃಂಗೇರಿ ಕ್ಷೇತ್ರದಿಂದ ಬಿಜೆಪಿ ಪಕ್ಷದಿಂದ ಡಿ.ಎನ್.ಜೀವರಾಜ್ ಕಣಕ್ಕಿಳಿಯುವ ಸಾಧ್ಯತೆಗಳಿರುವುದರಿಂದ ಕ್ಷೇತ್ರದಲ್ಲಿ ತ್ರಿಕೋನ ಸ್ಫರ್ಧೆ ಏರ್ಪಡುವ ಎಲ್ಲಾ ಸಾಧ್ಯತೆಗಳು ಇವೆ. ನಾಲ್ಕು ಪಕ್ಷಗಳು ಮತದಾರನ್ನು ಸೆಳೆಯಲು ಇನ್ನಿಲ್ಲದ ಕಸರತ್ತು ನಡೆಸುತ್ತಿವೆ. ಬಿಜೆಪಿ ಭದ್ರಕೋಟೆಯಾಗಿದ್ದ ಶೃಂಗೇರಿ ಕ್ಷೇತ್ರವನ್ನು 2018ರಲ್ಲಿ ನಡೆದ ಚುನಾವಣೆಯಲ್ಲಿ ಕಾಂಗ್ರೆಸ್ ತಕ್ಕೆಗೆ ಜಾರಿತ್ತು, ಕಾಂಗ್ರೆಸ್ ಪಕ್ಷ ಕ್ಷೇತ್ರ ಉಳಿಸಿಕೊಳ್ಳಲು ಮುಂದಾಗಿದ್ದರೇ, ಕೈ ತಪ್ಪಿರುವ ಕ್ಷೇತ್ರವನ್ನು ಮತ್ತೆ ಹಿಡಿತಕ್ಕೆ ತಗೆದುಕೊಳ್ಳಲು ಬಿಜೆಪಿ ಮುಂದಾಗಿದೆ. ಜೆಡಿಎಸ್ ಪಕ್ಷ ಕ್ಷೇತ್ರದಲ್ಲಿ ಪಾರಮ್ಯ ಸಾಧಿಸಲು ಸಂಕಲ್ಪತೊಟ್ಟಂತೆ ಕಾಣುತ್ತಿದೆ.
ಜಿಲ್ಲೆಯ ಐದು ಕ್ಷೇತ್ರಗಳ ಪೈಕಿ ಕಾಂಗ್ರೆಸ್ ಮೊದಲ ಪಟ್ಟಿಯಲ್ಲಿ ಹಾಲಿ ಶಾಸಕ ಟಿ.ಡಿ.ರಾಜೇಗೌಡರಿಗೆ ಟಿಕೆಟ್ ಘೋಷಣೆ ಮಾಡಿದೆ. ಕಾಂಗ್ರೆಸ್ ಪಕ್ಷದ ಹೊಸ ನೀತಿಯಂತೆ ಕ್ಷೇತ್ರದಿಂದ ಟಿ.ಡಿ.ರಾಜೇಗೌಡ ಮತ್ತು ಸಚಿನ್ ಮೀಗಾ ಟಿಕೆಟ್ಗಾಗಿ ಅರ್ಜಿ ಸಲ್ಲಿಸಿದ್ದರು. ಅಳೆದು ತೂಗಿರುವ ಎಐಸಿಸಿ, ಕೆಪಿಸಿಸಿ ಮುಖಂಡರು ಹಾಲಿ ಶಾಸಕ ಟಿ.ಡಿ.ರಾಜೇ ಗೌಡ ಅವರಿಗೆ ಟಿಕೆಟ್ ಘೋಷಣೆ ಮಾಡಿದ್ದು, ಕ್ಷೇತ್ರದಲ್ಲಿ ಅಸಮಾಧಾನ ಆಂತರಿಕ ಬಿಕಟ್ಟು ಯಾವುದಕ್ಕೂ ಲವಲೇಷವು ಅವಕಾಶವಿಲ್ಲದಂತೆ ಟಿಕೆಟ್ ನೀಡಿದೆ. ತರೀಕೆರೆ, ಕಡೂರು, ಚಿಕ್ಕಮಗಳೂರು ಮತ್ತು ಮೂಡಿಗೆರೆ ಕ್ಷೇತ್ರದ ಅಭ್ಯರ್ಥಿಗಳ ಹೆಸರುಗಳು ಎರಡನೇ ಪಟ್ಟಿಯಲ್ಲಿ ಬಿಡುಗಡೆಗೊಳ್ಳುವ ಸಾಧ್ಯತೆ ಹೆಚ್ಚಿದ್ದು, ತರೀಕೆರೆ, ಚಿಕ್ಕಮಗಳೂರು, ಮೂಡಿಗೆರೆ, ಕಡೂರು ಕ್ಷೇತ್ರದಲ್ಲಿ ಕಾಂಗ್ರೆಸ್ ಟಿಕೆಟ್ಗಾಗಿ ಭಾರೀ ಪೈಪೋಟಿ ಎದ್ದಿದೆ. ಮೂಡಿಗೆರೆ ವಿಧಾನಸಭಾ ಕ್ಷೇತ್ರದಲ್ಲಿ ಮೂರು ಪಕ್ಷಗಳಲ್ಲಿ ಹೊಸಬರಿಗೆ ಟಿಕೆಟ್ ನೀಡುವಂತೆ ಸ್ವಪಕ್ಷೀಯರಿಂದ ಕೂಗು ಹೆಚ್ಚುತ್ತಿದೆ.
ಚಿಕ್ಕಮಗಳೂರು ವಿಧಾನಸಭಾ ಕ್ಷೇತ್ರದಲ್ಲಿ ಜಾತಿ ಲೆಕ್ಕಾಚಾರ ಜೋರಾಗಿದ್ದು, ಬೇರೆ ಪಕ್ಷದಿಂದ ವಲಸೆ ಬಂದಿರುವರು ಹೆಚ್ಚಿನವರು ಟಿಕೆಟ್ ಆಕಾಂಕ್ಷಿಗಳಾಗಿದ್ದು, ಪಕ್ಷದಲ್ಲಿ ಮುಸುಕಿನ ಗುದ್ದಾಟ ನಡೆಯುತ್ತಿದೆ. ಹೊಸಬರಿಗೆ ಟಿಕೆಟ್ ನೀಡಿದಲ್ಲಿ ಸ್ವಪಕ್ಷಿಯರು ಮುನಿಸಿಕೊಳ್ಳುವ ಸಾಧ್ಯತೆಗಳು ಹೆಚ್ಚಿದೆ. ತರೀಕೆರೆ, ಕಡೂರು ಕ್ಷೇತ್ರದಲ್ಲೂ ಟಿಕೆಟ್ ಪೈಟ್ ಜೋರಾಗಿದ್ದು, ಈ ಹಿನ್ನಲೆಯಲ್ಲಿ ಎಐಸಿಸಿ ಮತ್ತು ಕೆಪಿಸಿಸಿ ಮುಖಂಡರು ಕಾದುನೋಡುವ ತಂತ್ರ ಅನುಸರಿಸಿದ್ದು, ಎರಡನೇ ಪಟ್ಟಿಯಲ್ಲಿ ನಾಲ್ಕು ಕ್ಷೇತ್ರಗಳ ಅಭ್ಯರ್ಥಿಗಳ ಘೋಷಣೆ ಮಾಡುವ ಸಾಧ್ಯತೆ ಇದ್ದು, ಯಾರಿಗೆ ಟಿಕೆಟ್ ಒಲಿ ಯಲಿದೆ ಎಂಬುದನ್ನು ಕಾದುನೋಡಬೇಕಿದೆ.