ಅಳಿಯನಿಗೆ ಕೈ ತಪ್ಪಿದ ಟಿಕೆಟ್: ತುಮಕೂರು ನಗರ ಕ್ಷೇತ್ರದ ಮಾಜಿ ಶಾಸಕ ಶಫಿ ಅಹ್ಮದ್ ಕಾಂಗ್ರೆಸ್ ಗೆ ರಾಜೀನಾಮೆ
ತುಮಕೂರು, ಎ.7: ಕಾಂಗ್ರೆಸ್ ಅಭ್ಯರ್ಥಿಗಳ ಎರಡನೇ ಪಟ್ಟಿಯಲ್ಲಿ ತುಮಕೂರು ನಗರ ಕ್ಷೇತ್ರಕ್ಕೆ ಟಿಕೆಟ್ ಘೋಷಣೆಯಾದ ಬೆನ್ನಲ್ಲೇ ಅಸಮಾಧಾನ ವ್ಯಕ್ತವಾಗಿದೆ.
ಅಳಿಯ ಎಸ್.ರಫೀಕ್ ಅಹ್ಮದ್ ಅವರಿಗೆ ಟಿಕೆಟ್ ಕೈ ತಪ್ಪಿದ್ದಕ್ಕೆ ಮಾಜಿ ಶಾಸಕ ಶಫಿ ಅಹ್ಮದ್ ಕಾಂಗ್ರೆಸ್ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದಾರೆ.
ಈ ಸಂಬಂಧ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಪತ್ರ ಬರೆದಿರುವ ಶಫಿ ಅಹ್ಮದ್, ವಿಧಾನಸಭಾ ಚುನಾವಣೆಯಲ್ಲಿ ಗೆಲ್ಲಲು ಯಾವುದೇ ಸಾಮರ್ಥ್ಯವಿಲ್ಲದ ಕಿರಿಯ ವ್ಯಕ್ತಿಗೆ ಟಿಕೆಟ್ ನೀಡಲಾಗಿದೆ. ತುಮಕೂರು ವಿಧಾನಸಭಾ ಕ್ಷೇತ್ರಕ್ಕೆ ನಾವು ಸ್ಪರ್ಧಿಸಿದಾಗಲೆಲ್ಲಾ ನಾವು 50,000 ಕ್ಕೂ ಹೆಚ್ಚು ಮತಗಳನ್ನು ಯಶಸ್ವಿಯಾಗಿ ಪಡೆದುಕೊಂಡಿದ್ದೇವೆ. ಜೊತೆಗೆ ಪ್ರಾಮಾಣಿಕವಾಗಿ ಪಕ್ಷಕ್ಕಾಗಿ ಕೆಲಸ ಮಾಡಿದ್ದೇವೆ. ಪಕ್ಷವು ನನ್ನ ಯಾವುದೇ ಸೇವೆಯನ್ನು ಪರಿಗಣಿಸದಿರುವುದು ಮತ್ತುನಿರ್ದಯವಾಗಿ ಪಕ್ಷದ ಟಿಕೆಟ್ ಅನ್ನು ನೀಡದಿರುವುದು ತುಂಬಾ ಅವಮಾನಕರವಾಗಿದೆ" ಎಂದು ಪತ್ರದಲ್ಲಿ ಉಲ್ಲೇಖಿಸಿದ್ದಾರೆ.
ಈ ಕ್ಷೇತ್ರದಲ್ಲಿ ಶಫಿ ಅಹ್ಮದ್ ಕುಟುಂಬ ಬಿಟ್ಟು ಬೇರೆಯವರಿಗೆ ಟಿಕೆಟ್ ನೀಡಬೇಕು ಎಂಬ ಕೂಗು ಕೇಳಿ ಬಂದಿತ್ತು. ಸದ್ಯ ಈ ಕ್ಷೇತ್ರದಲ್ಲಿ ಇಕ್ಬಾಲ್ ಅಹಮ್ಮದ್ ಅವರನ್ನು ಕಾಂಗ್ರೆಸ್ ಹೈಕಮಾಂಡ್ ಕಣಕ್ಕಿಳಿಸಿದೆ.