ಮೂರನೇ ಟೆಸ್ಟ್: ಭಾರತದ ತಂಡ ಸೇರಿದ ಉಮೇಶ್ ಯಾದವ್
ಅಹಮದಾಬಾದ್: ಫಿಟ್ನೆಸ್ ಪರೀಕ್ಷೆಯಲ್ಲಿ ಉತ್ತೀರ್ಣರಾದ ನಂತರ ಇಂಗ್ಲೆಂಡ್ ವಿರುದ್ಧದ ಕೊನೆಯ ಎರಡು ಟೆಸ್ಟ್ ಪಂದ್ಯಗಳಲ್ಲಿ ಭಾರತದ ತಂಡಕ್ಕೆ ವೇಗಿ ಉಮೇಶ್ ಯಾದವ್ರನ್ನು ಸೋಮವಾರ ಸೇರಿಸಲಾಗಿದೆ.
ಇದೇ ವೇಳೆ ವಿಜಯ್ ಹಝಾರೆ ಟ್ರೋಫಿ ಏಕದಿನ ಚಾಂಪಿಯನ್ಶಿಪ್ನಲ್ಲಿ ಭಾಗವಹಿಸಲು ಶಾರ್ದುಲ್ ಠಾಕೂರ್ ಅವರನ್ನು ಟೀಮ್ ಇಂಡಿಯಾದಿಂದ ಬಿಡುಗಡೆಗೊಳಿಸಲಾಗಿದೆ.
ಹಗಲು-ರಾತ್ರಿ ನಡೆಯಲಿರುವ ಮೂರನೇ ಟೆಸ್ಟ್ ಬುಧವಾರ ಮೊಟೆರಾದಲ್ಲಿ ಪ್ರಾರಂಭ ವಾಗಲಿದೆ. ಟೀಮ್ ಇಂಡಿಯಾ ವೇಗದ ಬೌಲರ್ ಉಮೇಶ್ ಯಾದವ್ ಫೆಬ್ರವರಿ 21ರಂದು ಮೊಟೆರಾದಲ್ಲಿ ಫಿಟ್ನೆಸ್ ಪರೀಕ್ಷೆಗೆ ಹಾಜರಾಗಿದ್ದರು. ಅವರು ತಮ್ಮ ಫಿಟ್ನೆಸ್ ಪರೀಕ್ಷೆಯಲ್ಲಿ ತೆರ್ಗಡೆಯಾಗಿದ್ದಾರೆ. ಅವರನ್ನು ಕೊನೆಯ ಎರಡು ಟೆಸ್ಟ್ ಪಂದ್ಯಗಳಿಗೆ ಟೀಮ್ ಇಂಡಿಯಾದಲ್ಲಿ ಸೇರಿಸಿಕೊಳ್ಳಲಾಗಿದೆ. ಎಂದು ಬಿಸಿಸಿಐ ಪ್ರಕಟನೆೆಯಲ್ಲಿ ತಿಳಿಸಿದೆ.
ವಿಜಯ್ ಹಝಾರೆ ಟ್ರೋಫಿ ಟೂರ್ನಿಯಲ್ಲಿ ಠಾಕೂರ್ ಮುಂಬೈ ಪರ ಆಡಲಿದ್ದಾರೆ. ಡಿಸೆಂಬರ್ನಲ್ಲಿ ಆಸ್ಟ್ರೇಲಿಯ ವಿರುದ್ಧದ ಮೆಲ್ಬೋರ್ನ್ ಟೆಸ್ಟ್ ಪಂದ್ಯದ ವೇಳೆ ಯಾದವ್ ಗಾಯ ಗೊಂಡಿದ್ದರು. ಪಿಂಕ್ ಬಾಲ್ ಟೆಸ್ಟ್ನಲ್ಲಿ ಭಾರತ ಮೂರು ವೇಗಿಗಳನ್ನು ಆಡಿಸುವ ಸಾಧ್ಯತೆಯಿದೆ.
ಚೆನ್ನೈನಲ್ಲಿ ಇಂಗ್ಲೆಂಡ್ಮೊದಲ ಪಂದ್ಯದಲ್ಲಿ ಗೆಲುವು ದಾಖಲಿಸಿತ್ತು. ಬಳಿಕ ಅದೇ ಕ್ರೀಡಾಂಗಣದಲ್ಲಿ ನಡೆದ ಎರಡನೇ ಪಂದ್ಯವನ್ನು ಭಾರತ ಜಯಿಸಿ ನಾಲ್ಕು ಪಂದ್ಯಗಳ ಸರಣಿಯಲ್ಲಿ 1-1ರಿಂದ ಸಮಬಲ ಸಾಧಿಸಿತ್ತು.
ಕೊನೆಯ 2ಟೆಸ್ಟ್ ಪಂದ್ಯಗಳಿಗೆ ಭಾರತ ತಂಡ
ವಿರಾಟ್ ಕೊಹ್ಲಿ (ನಾಯಕ), ರೋಹಿತ್ ಶರ್ಮಾ, ಮಯಾಂಕ್ ಅಗರ್ವಾಲ್, ಶುಬ್ಮನ್ ಗಿಲ್, ಚೇತೇಶ್ವರ ಪೂಜಾರ, ಅಜಿಂಕ್ಯ ರಹಾನೆ (ಉಪನಾಯಕ), ಕೆ.ಎಲ್.ರಾಹುಲ್, ಹಾರ್ದಿಕ್ ಪಾಂಡ್ಯ, ರಿಷಭ್ ಪಂತ್ (ವಿಕೆಟ್ ಕೀಪರ್), ವೃದ್ಧಿಮಾನ್ ಸಹಾ (ವಿಕೆಟ್ ಕೀಪರ್), ಆರ್.ಅಶ್ವಿನ್, ಕುಲದೀಪ್ ಯಾದವ್, ಅಕ್ಷರ್ ಪಟೇಲ್, ವಾಶಿಂಗ್ಟನ್ ಸುಂದರ್, ಇಶಾಂತ್ ಶರ್ಮಾ, ಜಸ್ಪ್ರೀತ್ ಬುಮ್ರಾ, ಮುಹಮ್ಮದ್ ಸಿರಾಜ್, ಉಮೇಶ್ ಯಾದವ್.