ಸಾಮಾಜಿಕ ಜಾಲತಾಣದಲ್ಲಿ ತನ್ನ ಹೆಸರು ದುರ್ಬಳಕೆ ಮಾಡುವವರ ವಿರುದ್ಧ ಕ್ರಮಕ್ಕೆ ಶರ್ಮಿಳಾ ಪೊಲೀಸರಿಗೆ ದೂರು
ಹೈದರಾಬಾದ್, ಜ.15: ಸಾಮಾಜಿಕ ಜಾಲತಾಣದಲ್ಲಿ ತನ್ನ ಹೆಸರು ದುರ್ಬಳಕೆ ಮಾಡುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿ ವೈಎಸ್ಆರ್ ಕಾಂಗ್ರೆಸ್ ಅಧ್ಯಕ್ಷ ವೈಎಸ್ ಜಗನ್ಮೋಹನ್ ರೆಡ್ಡಿ ಸಹೋದರಿ ವೈಎಸ್ ಶರ್ಮಿಳಾ ಸೋಮವಾರ ಹೈದರಾಬಾದ್ ಪೊಲೀಸ್ ಕಮಿಶನರ್ಗೆ ದೂರು ಸಲ್ಲಿಸಿದ್ದಾರೆ.
ವೈಎಸ್ಆರ್ ಕಾಂಗ್ರೆಸ್ನ ನಾಯಕಿಯಾಗಿರುವ ಶರ್ಮಿಳಾ ತನ್ನ ಪತಿ ಅನಿಲ್ಕುಮಾರ್ರೊಂದಿಗೆ ಪೊಲೀಸ್ ಕಮಿಶನರ್ ಅಂಜನಿ ಕುಮಾರ್ಗೆ ತನ್ನ ವಿರುದ್ದ ಸಾಮಾಜಿಕ ಜಾಲತಾಣದಲ್ಲಿ ಆಕ್ಷೇಪಾರ್ಹ ಚಿತ್ರವನ್ನು ಹಾಕುತ್ತಿರುವವರ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿದ್ದಾರೆ.
ತನಗೂ, ತೆಲುಗು ಚಿತ್ರನಟ ಪ್ರಭಾಸ್ಗೂ ಸಂಬಂಧವಿದೆ ಎನ್ನುವುದು ಶುದ್ಧ ಸುಳ್ಳು. ಮುಂಬರುವ ಮಹಾ ಚುನಾವಣೆಯಲ್ಲಿ ರಾಜಕೀಯ ಲಾಭ ಪಡೆಯಲು ಕೆಲವು ಪಟ್ಟಭದ್ರ ಹಿತಾಸಕ್ತಿಯ ಜನರು ಇಂತಹ ಪಿತೂರಿ ಮಾಡುತ್ತಿದ್ದಾರೆ ಎಂದು ಶರ್ಮಿಳಾ ಸುದ್ದಿಗಾರರೊಂದಿಗೆ ತಿಳಿಸಿದ್ದಾರೆ.
ಈ ಅಭಿಯಾನದ ಹಿಂದೆ ತೆಲುಗು ದೇಶಂ ಪಕ್ಷದ ಕೈವಾಡವಿದೆ ಎಂದು ಆಂಧ್ರಪದೇಶದ ಮಾಜಿ ಮುಖ್ಯಮಂತ್ರಿ ವೈಎಸ್ ರಾಜಶೇಖರ್ ರೆಡ್ಡಿ ಅವರ ಪುತ್ರಿ ಶರ್ಮಿಳಾ ಆರೋಪಿಸಿದ್ದಾರೆ