ಬಾಬರಿ ಮಸೀದಿ ಪ್ರಕರಣದ ತೀರ್ಪು ಸಂವಿಧಾನಕ್ಕೆ, ಸುಪ್ರೀಂ ಕೋರ್ಟ್ ತೀರ್ಪಿಗೆ ವಿರುದ್ಧವಾದುದು: ಕಾಂಗ್ರೆಸ್
ಹೊಸದಿಲ್ಲಿ, ಸೆ. 30: ಬಾಬ್ರಿ ಮಸೀದಿ ಧ್ವಂಸದ ಇಪ್ಪತ್ತೆಂಟು ವರ್ಷಗಳ ಹಳೆಯ ಪ್ರಕರಣದ ಎಲ್ಲ ಆರೋಪಿಗಳನ್ನು ಬಿಡುಗಡೆ ಮಾಡಿರುವ ಲಕ್ನೋದ ವಿಶೇಷ ನ್ಯಾಯಾಲಯದ ತೀರ್ಪನ್ನು ತರಾಟೆಗೆ ತೆಗೆದುಕೊಂಡಿರುವ ಕಾಂಗ್ರೆಸ್, ಇದು ಕಳೆದ ನವೆಂಬರ್ನಲ್ಲಿ ಸುಪ್ರೀಂ ಕೋರ್ಟ್ ನೀಡಿದ ತೀರ್ಪು ಹಾಗೂ ಸಂವಿಧಾನದ ಆಶಯಕ್ಕೆ ವಿರುದ್ಧವಾದದು ಎಂದಿದ್ದಾರೆ.
ಸುಪ್ರೀಂ ಕೋರ್ಟ್ ತನ್ನ ತೀರ್ಪಿನಲ್ಲಿ ದೇವಾಲಯ ನಿರ್ಮಾಣ ಮಾಡಲು ಅನುಮತಿ ನೀಡಿದೆ. ಆದರೆ, ಬಾಬರಿ ಮಸೀದಿ ಧ್ವಂಸ ಸ್ಪಷ್ಟವಾಗಿ ಕಾನೂನು ಬಾಹಿರ ಹಾಗೂ ಕಾನೂನಿನ ಅತಿಯಾದ ಉಲ್ಲಂಘನೆ ಎಂದು ತಿಳಿಸಿರುವುದಾಗಿ ಕಾಂಗ್ರೆಸ್ ಹೇಳಿದೆ. ‘‘ಆದರೆ, ವಿಶೇಷ ನ್ಯಾಯಾಲಯ ಎಲ್ಲ ಆರೋಪಿಗಳನ್ನು ಬಿಡುಗಡೆ ಮಾಡಿದೆ. ವಿಶೇಷ ನ್ಯಾಯಾಲಯದ ತೀರ್ಪು ಸುಪ್ರೀಂ ಕೋರ್ಟ್ನ ತೀರ್ಪಿಗೆ ವಿರುದ್ಧವಾಗಿದೆ ಎಂಬುದು ಸುಸ್ಪಷ್ಟ’’ ಎಂದು ಕಾಂಗ್ರೆಸ್ನ ಹಿರಿಯ ನಾಯಕ ಹಾಗೂ ಪಕ್ಷದ ವಕ್ತಾರ ರಣದೀಪ್ ಸುರ್ಜೇವಾಲ ಹೇಳಿಕೆಯಲ್ಲಿ ತಿಳಿಸಿದ್ದಾರೆ. ಯಾವುದೇ ರೀತಿಯಿಂದಾದರೂ ಅಧಿಕಾರ ಪಡೆಯಬೇಕು ಎಂಬ ಹಪಹಪಿಕೆಯಿಂದ ದೇಶದ ಕೋಮು ಸೌಹಾರ್ದತೆ ಹಾಗೂ ಭ್ರಾತೃತ್ವವನ್ನು ನಾಶಮಾಡಲು ಬಿಜೆಪಿ ಹಾಗೂ ಅದರ ಸೈದ್ಧಾಂತಿಕ ಮಾರ್ಗದರ್ಶಿ ಆರ್ಎಸ್ಎಸ್ ಷಡ್ಯಂತ್ರ ರೂಪಿಸಿದೆ ಎಂದು ಅವರು ಆರೋಪಿಸಿದ್ದಾರೆ.