ಮಹಾರಾಷ್ಟ್ರ ಸರಕಾರ ವಜಾಕ್ಕೆ ಆಗ್ರಹಿಸಿದ ಮನವಿ ತಿರಸ್ಕರಿಸಿದ ಸುಪ್ರೀಂ
ಹೊಸದಿಲ್ಲಿ, ಅ. 16: ಮಹಾರಾಷ್ಟ್ರದ ಉದ್ಧವ್ ಠಾಕ್ರೆ ನೇತೃತ್ವದ ಸರಕಾರವನ್ನು ವಜಾಗೊಳಿಸಲು ಹಾಗೂ ರಾಜ್ಯದಲ್ಲಿ ರಾಷ್ಟ್ರಪತಿ ಆಳ್ವಿಕೆ ಜಾರಿಗೊಳಿಸಲು ನಿರ್ದೇಶನ ನೀಡುವಂತೆ ಕೋರಿ ಸಲ್ಲಿಸಲಾದ ಮನವಿಯನ್ನು ಸುಪ್ರೀಂ ಕೋರ್ಟ್ ಶುಕ್ರವಾರ ತಿರಸ್ಕರಿಸಿದೆ.
ಮನವಿ ತಿರಸ್ಕರಿಸಿದ ಮುಖ್ಯ ನ್ಯಾಯಮೂರ್ತಿ ಎಸ್.ಎ. ಬೋಬ್ಡೆ ನೇತೃತ್ವದ ನ್ಯಾಯಪೀಠ, ‘‘ರಾಷ್ಟ್ರಪತಿ ಅವರನ್ನು ಭೇಟಿಯಾಗುವ ಸ್ವಾತಂತ್ರ್ಯ ನಿಮಗಿದೆ. ಇಲ್ಲಿಗೆ ಬರಬೇಡಿ’’ ಎಂದು ಹೇಳಿತು.
ನ್ಯಾಶನಲಿಸ್ಟ್ ಕಾಂಗ್ರೆಸ್ ಪಾರ್ಟಿ (ಎನ್ಸಿಪಿ) ಹಾಗೂ ಕಾಂಗ್ರೆಸ್ ಮಹಾರಾಷ್ಟ್ರದಲ್ಲಿ ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆಯ ಮಿತ್ರ ಪಕ್ಷಗಳಾಗಿವೆ. ಮಹಾರಾಷ್ಟ ವಿಧಾನ ಸಭೆ ಚುನಾವಣೆಯಲ್ಲಿ ಶಿವಸೇನೆ ಹಾಗೂ ಬಿಜೆಪಿ ಮೈತ್ರಿ ಮಾಡಿಕೊಂಡು ಸ್ಪರ್ಧಿಸಿತ್ತು. ಆದರೆ, ಮುಖ್ಯಮಂತ್ರಿ ಸ್ಥಾನ ಹಾಗೂ ಸ್ಥಾನ ಹಂಚಿಕೆಯ ಕುರಿತ ಭಿನ್ನಾಭಿಪ್ರಾಯಗಳ ಕಾರಣಕ್ಕೆ ಸಂಘಟಿತವಾಗಿ ಸರಕಾರ ರಚಿಸಲು ವಿಫಲವಾಗಿತ್ತು. ಅಂತಿಮವಾಗಿ ಶಿವಸೇನೆ ಬಿಜೆಪಿಯೊಂದಿಗಿನ ಮೈತ್ರಿ ಕಡಿದುಕೊಂಡಿತ್ತು ಹಾಗೂ ಎನ್ಸಿಪಿ ಹಾಗೂ ಕಾಂಗ್ರೆಸ್ನೊಂದಿಗೆ ಮೈತ್ರಿ ಮಾಡಿಕೊಂಡು ಸರಕಾರ ರಚಿಸಿತ್ತು. ದಿಲ್ಲಿಯ ಮೂವರು ನಿವಾಸಿಗಳು 2019ರಲ್ಲಿ ರಚಿಸಲಾದ ಮಹಾರಾಷ್ಟ್ರ ಸರಕಾರದ ವಿರುದ್ಧ ಈ ಮನವಿ ಸಲ್ಲಿಸಿದ್ದರು.