ಪ್ರಧಾನಿ ಆಯ್ಕೆ ಪ್ರಶ್ನಿಸಿ ಮಾಜಿ ಯೋಧ ತೇಜ್ಬಹದೂರ್ ಸಲ್ಲಿಸಿರುವ ಅರ್ಜಿ ತಿರಸ್ಕರಿಸಿದ ಸುಪ್ರೀಂಕೋರ್ಟ್
ಹೊಸದಿಲ್ಲಿ, ನ. 24: 2019ರ ಲೋಕಸಭಾ ಚುನಾವಣೆಯಲ್ಲಿ ವಾರಣಾಸಿ ಲೋಕಸಭಾ ಕ್ಷೇತ್ರದಿಂದ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಸ್ಪರ್ಧಿಸಲು ಸಲ್ಲಿಸಿದ್ದ ನಾಮಪತ್ರವನ್ನು ತಿರಸ್ಕರಿಸಿದ್ದ ಚುನಾವಣಾ ಆಯೋಗದ ನಿರ್ಧಾರ ಪ್ರಶ್ನಿಸಿ ಗಡಿ ಭದ್ರತಾ ಪಡೆ (ಬಿಎಸ್ಎಫ್)ನ ಮಾಜಿ ಯೋಧ ತೇಜ್ ಬಹಾದ್ದೂರ್ ಸಲ್ಲಿಸಿದ ಮನವಿಯನ್ನು ಸುಪ್ರೀಂ ಕೋರ್ಟ್ ಮಂಗಳವಾರ ತಿರಸ್ಕರಿಸಿತು.
ಮುಖ್ಯ ನ್ಯಾಯಮೂರ್ತಿ ಎಸ್.ಎ. ಬೋಬ್ಡೆ ಮತ್ತು ನ್ಯಾಯಮೂರ್ತಿಗಳಾದ ಎಸ್.ಎಸ್. ಬೋಪಣ್ಣ , ವಿ. ರಾಮಸುಬ್ರಹ್ಮಣೀಯನ್ ಅವರಿದ್ದ ನ್ಯಾಯಪೀಠ ಪ್ರಕರಣದ ವಿಚಾರಣೆಯನ್ನು ನ. 18ರಂದು ಪೂರ್ಣಗೊಳಿಸಿ, ತೀರ್ಪು ಕಾಯ್ದಿರಿಸಿತ್ತು. ಸುಪ್ರೀಂ ಕೋರ್ಟ್ ಇಂದು ತೀರ್ಪು ಪ್ರಕಟಿಸಿದ್ದು, ಈ ಹಿಂದೆ ತೇಜ್ ಬಹಾದ್ದೂರ್ನ ಅರ್ಜಿಯನ್ನು ವಜಾಗೊಳಿಸಿದ್ದ ಅಲಹಾಬಾದ್ನ ತೀರ್ಪನ್ನು ಎತ್ತಿ ಹಿಡಿಯಿತು. ಸೇನೆಯಿಂದ ವಜಾಗೊಂಡಿದ್ದ ತೇಜ್ ಬಹಾದ್ದೂರ್ ಸಮಾಜವಾದಿ ಪಕ್ಷದ ಟಿಕೆಟ್ನಲ್ಲಿ ವಾರಣಾಸಿ ಕ್ಷೇತ್ರದಿಂದ ಪ್ರಧಾನಿ ನರೇಂದ್ರ ಮೋದಿ ಅವರ ವಿರುದ್ಧ ಸ್ಪರ್ಧಿಸಲು ನಾಮಪತ್ರ ಸಲ್ಲಿಸಿದ್ದರು. ಆದರೆ, ಅವರ ನಾಮಪತ್ರವನ್ನು ಚುನಾವಣಾ ಆಯೋಗ ತಿರಸ್ಕರಿಸಿತ್ತು. ಈ ನಿರ್ಧಾರ ಪ್ರಶ್ನಿಸಿ ತೇಜ್ ಬಹಾದ್ದೂರ್ ಅಲಹಾಬಾದ್ ಉಚ್ಚ ನ್ಯಾಯಾಲಯದಲ್ಲಿ ಮನವಿ ಸಲ್ಲಿಸಿದ್ದರು. ಆದರೆ, ಅಲಹಾಬಾದ್ ನ್ಯಾಯಾಲಯ ಚುನಾವಣಾ ಆಯೋಗದ ನಿರ್ಧಾರವನ್ನು ಎತ್ತಿ ಹಿಡಿದಿತ್ತು.