ಪ್ರತಿಭಟನೆ ಮುಂದುವರಿಸಲು ನಿರ್ಧರಿಸಿದ ರೈತ ಸಂಘಟನೆಗಳು
ಹೊಸದಿಲ್ಲಿ, ಜ.12: ಕೇಂದ್ರ ಸರಕಾರ ಕಳೆದ ಸೆಪ್ಟಂಬರ್ನಲ್ಲಿ ಜಾರಿಗೊಳಿಸಿದ ಮೂರು ಕೃಷಿ ಕಾಯ್ದೆಗಳಿಗೆ ಸುಪ್ರೀಕೋರ್ಟ್ ತಾತ್ಕಾಲಿಕವಾಗಿ ತಡೆ ನೀಡಿರುವ ಆದೇಶವನ್ನು ನಾವು ಸ್ವಾಗತಿಸುತ್ತೇವೆ. ಆದರೆ ಕೃಷಿ ಕಾಯ್ದೆ ರದ್ದಾಗುವವರೆಗೂ ನಮ್ಮ ಪ್ರತಿಭಟನೆಯನ್ನು ಹಿಂದೆಗೆಯುವುದಿಲ್ಲ ಎಂದು ರೈತ ಸಂಘಟನೆಗಳು ಹೇಳಿವೆ.
ಪ್ರತಿಭಟನಾ ನಿರತ ಸುಮಾರು 40 ರೈತಸಂಘಟನೆಗಳ ಒಕ್ಕೂಟವಾಗಿರುವ ಸಂಯುಕ್ತ ಕಿಸಾನ್ ಮೋರ್ಛ, ಸುಪ್ರೀಂ ಆದೇಶದ ಬಳಿಕ ಮುಂದಿನ ನಡೆಯನ್ನು ನಿರ್ಧರಿಸಲು ಮಂಗಳವಾರ ಸಭೆ ನಡೆಸಿದ್ದು ಸಭೆಯಲ್ಲಿ ಪ್ರತಿಭಟನೆ ಮುಂದುವರಿಸಲು ನಿರ್ಧರಿಸಲಾಗಿದೆ ಎಂದು ಸಂಘಟನೆಯ ಮುಖಂಡರು ಹೇಳಿದ್ದಾರೆ.
ಸಭೆಯ ಬಳಿಕ ಮಾಧ್ಯಮದವರ ಜತೆ ಮಾತನಾಡಿದ ಸಂಘಟನೆಯ ಮುಖಂಡ ಅಭಿಮನ್ಯು ಕೊಹಾರ್, ಸುಪ್ರೀಂಕೋರ್ಟ್ನ ನಿರ್ಧಾರವನ್ನು ಸಭೆಯಲ್ಲಿ ಸ್ವಾಗತಿಸಲಾಯಿತು. ಆದರೆ ಕಾಯ್ದೆ ರದ್ದಾಗುವವರೆಗೂ ಪ್ರತಿಭಟನೆ ಮುಂದುವರಿಸಲು ನಿರ್ಧರಿಸಲಾಗಿದೆ ಎಂದು ಹೇಳಿದರು. ಈ ಮಧ್ಯೆ, ಸುಪ್ರೀಂಕೋರ್ಟ್ ನೇಮಿಸಿರುವ ಸಮಿತಿಯ ಎದುರು ಹಾಜರಾಗದಿರಲು ರೈತರು ನಿರ್ಧರಿಸಿದ್ದಾರೆ. ಈ ಕುರಿತು ಸಂಘಟನೆಯ ಮುಖಂಡರು ಅಧಿಕೃತವಾಗಿ ಘೋಷಣೆ ಮಾಡಲಿದ್ದಾರೆ ಎಂದು ಮತ್ತೊಬ್ಬ ಮುಖಂಡ ಹರೀಂದರ್ ಲೋಖ್ವಾಲ್ ಹೇಳಿದ್ದಾರೆ.