ಉತ್ತರಾಖಂಡ ಹಿಮಪಾತ: ಒಟ್ಟು 24 ಮೃತದೇಹ ಪತ್ತೆ, ಮುಂದುವರಿದ ರಕ್ಷಣಾ ಕಾರ್ಯಾಚರಣೆ
ಹೊಸದಿಲ್ಲಿ, ಫೆ. 8: ಉತ್ತರಾಖಂಡದ ಹಿಮಪಾತದಿಂದ ಸಂಭವಿಸಿದ ಪ್ರವಾಹದಲ್ಲಿ ಕೊಚ್ಚಿ ಹೋದವರಲ್ಲಿ ಇದುವರೆಗೆ 26 ಮಂದಿಯ ಮೃತದೇಹ ಪತ್ತೆಯಾಗಿದೆ ಎಂದು ಉತ್ತರಾಖಂಡದ ಡಿಜಿಪಿ ಅಶೋಕ್ ಕುಮಾರ್ ಸೋಮವಾರ ಹೇಳಿದ್ದಾರೆ.
ರವಿವಾರ ರಾತ್ರಿಯಿಂದ ಕಾರ್ಯಾಚರಣೆ ನಡೆಸಿ ಸುರಂಗದ ಒಳಗೆ ಸಿಲುಕಿಕೊಂಡ 39 ಮಂದಿಯನ್ನು ರಕ್ಷಿಸಲಾಗಿದೆ. ಕಾರ್ಯಾಚರಣೆ ಮುಂದುವರಿದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಇಂಡೋ ಟಿಬೆಟಿಯನ್ ಗಡಿ ಪೊಲೀಸ್ (ಐಟಿಬಿಪಿ)ನ 300 ಸಿಬ್ಬಂದಿ ಹಾಗೂ ರಾಷ್ಟ್ರೀಯ ವಿಪತ್ತು ಸ್ಪಂದನಾ ಪಡೆ (ಎನ್ಡಿಆರ್ಎಫ್), ಸೇನೆಯ 200 ಸಿಬ್ಬಂದಿ ರಕ್ಷಣಾ ಕಾರ್ಯಾಚರಣೆಯಲ್ಲಿ ತೊಡಗಿಕೊಂಡಿದ್ದಾರೆ.
ಸುರಂಗದ 100 ಕಿ.ಮೀ. ದೂರದ ವರೆಗೆ ಅವಶೇಷಗಳನ್ನು ತೆರವುಗೊಳಿಸಲಾಗಿದೆ. ಇನ್ನು 100 ಮೀಟರ್ ದೂರದ ವರೆಗೆ ಅವಶೇಷಗಳನ್ನು ತೆರವುಗೊಳಿಸಬೇಕಾಗಿದೆ. ಇದಕ್ಕೆ ಇನ್ನಷ್ಟು ಸಮಯ ಹಿಡಿಯಬಹುದು ಎಂದು ಐಟಿಬಿಪಿ ಅಧಿಕಾರಿಗಳು ತಿಳಿಸಿದ್ದಾರೆ. ಪರಿಸ್ಥಿತಿ ಪರಿಶೀಲಿಸಲು ಉತ್ತರಾಖಂಡದ ಮುಖ್ಯಮಂತ್ರಿ ತ್ರಿವೇಂದ್ರ ಸಿಂಗ್ ರಾವತ್ ಅವರು ಸೋಮವಾರ ಚಮೋಲಿ ಜಿಲ್ಲೆಗೆ ಭೇಟಿ ನೀಡಿದ್ದಾರೆ. ಜನರ ರಕ್ಷಣೆ ನಮ್ಮ ಆದ್ಯತೆ ಎಂದು ಅವರು ಹೇಳಿದ್ದಾರೆ.