ಭೀಮಾ-ಕೋರೆಗಾಂವ್ ಪ್ರಕರಣ: ನವ್ಲಾಖಾರ ಜಾಮೀನು ಅರ್ಜಿಗೆ ಉತ್ತರಿಸುವಂತೆ ಎನ್ಐಎಗೆ ಸರ್ವೋಚ್ಚ ನ್ಯಾಯಾಲಯದ ಸೂಚನೆ
ಹೊಸದಿಲ್ಲಿ,ಮಾ.3: ಭೀಮಾ-ಕೋರೆಗಾಂವ್ ಪ್ರಕರಣದಲ್ಲಿ ಆರೋಪಿಯಾಗಿರುವ ನಾಗರಿಕ ಹಕ್ಕುಗಳ ಕಾರ್ಯಕರ್ತ ಗೌತಮ್ ನವ್ಲಾಖಾ ಅವರು ಜಾಮೀನು ಕೋರಿ ಸಲ್ಲಿಸಿರುವ ಅರ್ಜಿಗೆ ಉತ್ತರಿಸುವಂತೆ ಸರ್ವೋಚ್ಚ ನ್ಯಾಯಾಲಯವು ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್ಐಎ) ಗೆ ಸೂಚಿಸಿದೆ. ಬಾಂಬೆ ಉಚ್ಚ ನ್ಯಾಯಾಲಯವು ತನ್ನ ಜಾಮೀನು ಅರ್ಜಿಯನ್ನು ತಿರಸ್ಕರಿಸಿದ್ದನ್ನು ಪ್ರಶ್ನಿಸಿ ನವ್ಲಾಖಾ ಫೆ.19ರಂದು ಸರ್ವೋಚ್ಚ ನ್ಯಾಯಾಲಯದಲ್ಲಿ ಮೇಲ್ಮನವಿಯನ್ನು ಸಲ್ಲಿಸಿದ್ದರು.
ಅರ್ಜಿಯ ವಿಚಾರಣೆಯನ್ನು ನಡೆಸಿದ ನ್ಯಾಯಮೂರ್ತಿಗಳಾದ ಯು.ಯು.ಲಲಿತ್,ಇಂದಿರಾ ಬ್ಯಾನರ್ಜಿ ಮತ್ತು ಕೆ.ಎಂ.ಜೋಸೆಫ್ ಅವರ ಪೀಠವು ಎನ್ಐಎಗೆ ನೋಟಿಸನ್ನು ಹೊರಡಿಸಿತು. ಮಾ.15ರಂದು ಮತ್ತೆ ವಿಚಾರಣೆ ನಡೆಯಲಿದೆ.
ಕಳೆದ ವರ್ಷದ ಎ.14ರಿಂದ ಬಂಧನದಲ್ಲಿರುವ ನವ್ಲಾಖಾ,ಎನ್ಐಎ ನಿಗದಿತ 90 ದಿನಗಳಲ್ಲಿ ದೋಷಾರೋಪಣ ಪಟ್ಟಿಯನ್ನು ನ್ಯಾಯಾಲಯಕ್ಕೆ ಸಲ್ಲಿಸಲು ವಿಫಲಗೊಂಡಿರುವ ಹಿನ್ನೆಲೆಯಲ್ಲಿ ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದರು. ಆದರೆ ವಿಶೇಷ ನ್ಯಾಯಾಲಯವು ತನ್ನ ಅರ್ಜಿಯನ್ನು ತಿರಸ್ಕರಿಸಿದ ಬಳಿಕ ನವ್ಲಾಖಾ ಬಾಂಬೆ ಉಚ್ಚ ನ್ಯಾಯಾಲಯದ ಮೆಟ್ಟಿಲನ್ನೇರಿದ್ದರು. ವಿಚಾರಣಾ ನ್ಯಾಯಾಲಯದ ಆದೇಶದಲ್ಲಿ ತಾನು ಹಸ್ತಕ್ಷೇಪ ಮಾಡಲು ಕಾರಣವಿಲ್ಲ ಎಂದು ಉಚ್ಚ ನ್ಯಾಯಾಲಯವು ಫೆ.8ರ ತನ್ನ ಆದೇಶದಲ್ಲಿ ತಿಳಿಸಿತ್ತು.