ಅಕ್ರಮ ಹಣ ವರ್ಗಾವಣೆ ಪ್ರಕರಣ: ಮೆಹಬೂಬಾ ಮುಫ್ತಿ ಸಮನ್ಸ್ಗೆ ತಡೆ ನೀಡಲು ಸುಪ್ರೀಂ ಕೋರ್ಟ್ ನಕಾರ
ಹೊಸದಿಲ್ಲಿ, ಮಾ.19: ಹಣ ಅಕ್ರಮ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿ ಜಾರಿ ನಿರ್ದೇಶನಾಲಯ ನೀಡಿರುವ ಸಮನ್ಸ್ಗೆ ತಡೆ ನೀಡುವಂತೆ ಕೋರಿ ಜಮ್ಮು-ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಮೆಹಬೂಬಾ ಮುಫ್ತಿ ಸಲ್ಲಿಸಿದ್ದ ಅರ್ಜಿಯನ್ನು ದಿಲ್ಲಿ ಹೈಕೋರ್ಟ್ ಶುಕ್ರವಾರ ತಿರಸ್ಕರಿಸಿದೆ.
ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ಮಾರ್ಚ್ 22ರಂದು ತನ್ನೆದುರು ವಿಚಾರಣೆಗೆ ಹಾಜರಾಗುವಂತೆ ಜಾರಿನಿರ್ದೇಶನಾಲಯ ಮೆಹಬೂಬಾ ಮುಫ್ತಿಗೆ ಸಮನ್ಸ್ ಜಾರಿಗೊಳಿಸಿತ್ತು. ಇದನ್ನು ಪ್ರಶ್ನಿಸಿ ಸುಪ್ರೀಂಕೋರ್ಟ್ಗೆ ಅರ್ಜಿ ಸಲ್ಲಿಸಿದ್ದ ಮೆಹಬೂಬಾ, ಆರೋಪಿಯೆಂದು ಸಮನ್ಸ್ ನೀಡಲಾಗಿದೆಯೇ ಅಥವಾ ಸಾಕ್ಷಿಯೆಂದು ಪರಿಗಣಿಸಲಾಗಿದೆಯೇ ಎಂದು ಸ್ಪಷ್ಟವಾಗಿಲ್ಲ. ಆದ್ದರಿಂದ ಸಮನ್ಸ್ಗೆ ತಡೆನೀಡಬೇಕು ಎಂದು ಅರ್ಜಿಯಲ್ಲಿ ಕೋರಿದ್ದರು.
ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಪೀಠ, ಸಮನ್ಸ್ಗೆ ತಡೆ ನೀಡಲು ನಿರಾಕರಿಸಿತು ಮತ್ತು ಪ್ರಕರಣಕ್ಕೆ ಸಂಬಂಧಿಸಿದ ಮಾಹಿತಿಯನ್ನು ಸಲ್ಲಿಸುವಂತೆ ಮೆಹಬೂಬಾ ಮುಫ್ತಿ ಪರ ನ್ಯಾಯವಾದಿ ಹಾಗೂ ಸರಕಾರಕ್ಕೆ ತಿಳಿಸಿ ಮುಂದಿನ ವಿಚಾರಣೆಯನ್ನು ಎಪ್ರಿಲ್ 16ಕ್ಕೆ ನಿಗದಿಗೊಳಿಸಿತು.