ಸೆಂಟ್ರಲ್ ವಿಸ್ತಾ ಯೋಜನೆ: ಮಧ್ಯ ಪ್ರವೇಶಿಸಲು ನಿರಾಕರಿಸಿದ ಸುಪ್ರೀಂ ಕೋರ್ಟ್
ತುರ್ತು ವಿಚಾರಣೆಗೆ ದಿಲ್ಲಿ ಹೈಕೋರ್ಟ್ಗೆ ಅರ್ಜಿ ಸಲ್ಲಿಸಲು ಸೂಚನೆ
ಹೊಸದಿಲ್ಲಿ : ರಾಜಧಾನಿ ದಿಲ್ಲಿ ಕೋವಿಡ್ನಿಂದ ತತ್ತರಿಸುತ್ತಿದ್ದರೂ ಕೇಂದ್ರ ಸರಕಾರ ತನ್ನ ಮಹತ್ವಾಕಾಂಕ್ಷೆಯ ಹಾಗೂ ಅಷ್ಟೇ ವಿವಾದಿತ ಸೆಂಟ್ರಲ್ ವಿಸ್ತಾ ಯೋಜನೆಯ ಕಾಮಗಾರಿಯನ್ನು ಕೈಗೆತ್ತಿಕೊಂಡಿರುವುದನ್ನು ಪ್ರಶ್ನಿಸಿ ಹಾಗೂ ಕಾಮಗಾರಿಗೆ ತಡೆ ಕೋರಿ ಸಲ್ಲಿಸಲಾಗಿದ್ದ ಅಪೀಲನ್ನು ಸುಪ್ರೀಂ ಕೋರ್ಟ್ ಇಂದು ವಜಾಗೊಳಿಸಿದೆ. ಈ ಪ್ರಕರಣ ಈಗಾಗಲೇ ದಿಲ್ಲಿ ಹೈಕೋರ್ಟ್ ಮುಂದಿರುವುದರಿಂದ ಸೋಮವಾರ ಪ್ರಕರಣದ ತುರ್ತು ವಿಚಾರಣೆ ನಡೆಸುವಂತೆ ನ್ಯಾಯಾಲಯಕ್ಕೆ ಅಪೀಲುದಾರರು ಮನವಿ ಸಲ್ಲಿಸಬಹುದು ಎಂದು ಸುಪ್ರೀಂ ಕೋರ್ಟ್ ಹೇಳಿದೆ. ಈ ಹಿಂದೆ ಅಪೀಲುದಾರರು ದಿಲ್ಲಿ ಹೈಕೋರ್ಟಿಗೆ ಮನವಿ ಸಲ್ಲಿಸಿದ್ದು ಮುಂದಿನ ವಿಚಾರಣೆಯನ್ನು ಹೈಕೋರ್ಟ್ ಮೇ 17ಕ್ಕೆ ನಿಗದಿ ಪಡಿಸಿತ್ತು.
"ಈ ಪ್ರಕರಣ ಹೈಕೋರ್ಟ್ ಮುಂದೆ ಬಾಕಿಯಿರುವುದರಿಂದ ಹಾಗೂ ವಿಚಾರಣೆಯನ್ನು ಹೈಕೋರ್ಟ್ ಮುಂದೂಡಿರುವುದನ್ನು ಈ ಅಪೀಲಿನಲ್ಲಿ ಪ್ರಶ್ನಿಸಲಾಗಿರುವುದರಿಂದ ನಾವು ಮಧ್ಯ ಪ್ರವೇಶಿಸಲು ಬಯಸುವುದಿಲ್ಲ, ಹೈಕೋರ್ಟ್ ಈ ಪ್ರಕರಣದ ಶೀಘ್ರ ವಿಚಾರಣೆ ನಡೆಸುವಂತೆ ಕೋರಿ ಸಲ್ಲಿಸಲಾಗುವ ಅಪೀಲನ್ನು ಪರಿಗಣಿಸಬಹುದು ಎಂದು ನಾವು ನಿರೀಕ್ಷಿಸುತ್ತೇವೆ" ಎಂದು ಸುಪ್ರೀಂ ಕೋರ್ಟ್ ಪೀಠ ಹೇಳಿದೆ.
ಸೆಂಟ್ರಲ್ ವಿಸ್ತಾ ಯೋಜನೆಗೆ ಸುಪ್ರೀಂ ಕೋರ್ಟಿನ ತ್ರಿಸದಸ್ಯ ಪೀಠ ಜನವರಿ 5ರಂದು ಹಸಿರು ನಿಶಾನೆ ನೀಡಿತ್ತೆಂಬುದನ್ನು ಇಲ್ಲಿ ಸ್ಮರಿಸಬಹುದು.