ಲೋಕ ಜನಶಕ್ತಿ ಪಕ್ಷದ ಮುಖ್ಯಸ್ಥ ಸ್ಥಾನದಿಂದ ಚಿರಾಗ್ ಪಾಸ್ವಾನ್ ವಜಾ
ಹೊಸದಿಲ್ಲಿ: ತನ್ನ ಚಿಕ್ಕಪ್ಪನ ನೇತೃತ್ವದ ಲೋಕ ಜನಶಕ್ತಿ ಪಕ್ಷದಲ್ಲಿ (ಎಲ್ಜೆಪಿ) ಎದ್ದಿದ್ದ ಬಂಡಾಯ ದಿಂದಾಗಿ ಏಕಾಂಗಿಯಾಗಿದ್ದ ಚಿರಾಗ್ ಪಾಸ್ವಾನ್ ಅವರನ್ನು ಪಕ್ಷದ ಅಧ್ಯಕ್ಷ ಸ್ಥಾನದಿಂದ ತೆಗೆದು ಹಾಕಲಾಗಿದೆ ಎಂದು NDTV ವರದಿ ಮಾಡಿದೆ.
ಬಂಡಾಯ ಸಂಸದರು ನಡೆಸಿದ “ತುರ್ತು ಸಭೆ’’ಯಲ್ಲಿ ಪಾಸ್ವಾನ್ ಅವರನ್ನು ಅಧ್ಯಕ್ಷ ಸ್ಥಾನದಿಂದ ವಜಾಗೊಳಿಸಲು ನಿರ್ಧರಿಸಿದ್ದಾರೆ.
ಚಿರಾಗ್ ಪಾಸ್ವಾನ್ ಅವರನ್ನು "ಒಬ್ಬ ವ್ಯಕ್ತಿಗೆ ಒಂದೇ ಹುದ್ದೆ" ತತ್ವದ ಮೇಲೆ ಮುಖ್ಯಸ್ಥ ಸ್ಥಾನದಿಂದ ತೆಗೆದುಹಾಕಲಾಗಿದೆ ಎಂದು ಬಂಡಾಯ ಸಂಸದರ ನೇತೃತ್ವವಹಿಸಿದ್ದ ಪಾಸ್ವಾನ್ ಅವರ ಚಿಕ್ಕಪ್ಪ ಪಶುಪತಿ ಕುಮಾರ್ ಪರಾಸ್ ತಿಳಿಸಿದ್ದಾರೆ.
ಚಿರಾಗ್ ಪಾಸ್ವಾನ್ ಅವರು ಎಲ್ ಜೆ ಪಿ ಸಂಸದೀಯ ಪಕ್ಷದ ನಾಯಕರಾಗಿದ್ದರು ಹಾಗೂ ರಾಷ್ಟ್ರೀಯ ಅಧ್ಯಕ್ಷರಲ್ಲದೆ ಸಂಸದೀಯ ಮಂಡಳಿಯ ಅಧ್ಯಕ್ಷರಾಗಿದ್ದರು.
ಬಂಡಾಯ ಸಂಸದರು ಸೂರಜ್ ಭನ್ ಅವರನ್ನು ಎಲ್ಜೆಪಿಯ ಹೊಸ ಕಾರ್ಯಕಾರಿ ಅಧ್ಯಕ್ಷ ಹಾಗೂ ಚುನಾವಣಾ ಅಧಿಕಾರಿಯಾಗಿ ಆಯ್ಕೆ ಮಾಡಿದ್ದಾರೆ. ಪಕ್ಷದ ರಾಷ್ಟ್ರೀಯ ಕಾರ್ಯಕಾರಿಣಿಯನ್ನು ಕರೆದು ಐದು ದಿನಗಳಲ್ಲಿ ಹೊಸ ಅಧ್ಯಕ್ಷರಿಗೆ ಚುನಾವಣೆ ನಡೆಸಲು ಸೂರಜ್ ಗೆ ತಿಳಿಸಲಾಗಿದೆ.
ಚಿರಾಗ್ ಪಾಸ್ವಾನ್ ಅವರ ಚಿಕ್ಕಪ್ಪ ಪಶುಪತಿ ಕುಮಾರ್ ಪರಾಸ್ ಈ ವಾರಾಂತ್ಯದಲ್ಲಿ ಹೊಸ ರಾಷ್ಟ್ರೀಯ ಅಧ್ಯಕ್ಷರಾಗಿ ಆಯ್ಕೆಯಾಗುವ ಸಾಧ್ಯತೆಯಿದೆ.