ಜಾರ್ಖಂಡ್ ನ್ಯಾಯಾಧೀಶರ ಸಾವು: 243 ಶಂಕಿತರು ವಶಕ್ಕೆ, 17 ಮಂದಿ ಬಂಧನ
ಧನ್ಬಾದ್, ಆ. 2: ಜಾರ್ಖಂಡ್ನ ಧನ್ಬಾದ್ ಜಿಲ್ಲೆಯಲ್ಲಿ ನ್ಯಾಯಾಧೀಶ ಉತ್ತಮ್ ಆನಂದ್ ಅವರ ಸಾವಿಗೆ ಸಂಬಂಧಿಸಿ ಪೊಲೀಸರು 250 ಅಟೋ ರಿಕ್ಷಾಗಳನ್ನು ಮುಟ್ಟುಗೋಲು ಹಾಕಿಕೊಂಡಿರುವುದೇ ಅಲ್ಲದೆ, 243 ಶಂಕಿತರನ್ನು ವಶಕ್ಕೆ ತೆಗೆದುಕೊಂಡಿದ್ದಾರೆ ಹಾಗೂ 17 ಮಂದಿಯನ್ನು ಬಂಧಿಸಿದ್ದಾರೆ ಎಂದು ಹಿರಿಯ ಪೊಲೀಸ್ ಅಧಿಕಾರಿಗಳು ಸೋಮವಾರ ತಿಳಿಸಿದ್ದಾರೆ.
ಜಿಲ್ಲೆಯ ವಿವಿಧ ಪೊಲೀಸ್ ಠಾಣಾ ಪ್ರದೇಶದಲ್ಲಿ ರವಿವಾರ ಸಂಜೆ ದಾಳಿ ನಡೆಸಿ 243 ಮಂದಿಯನ್ನು ಕಸ್ಟಡಿಗೆ ತೆಗೆದುಕೊಳ್ಳಲಾಗಿದೆ ಎಂದು ಹಿರಿಯ ಪೊಲೀಸ್ ಅಧೀಕ್ಷಕ (ಎಸ್ಎಸ್ಪಿ) ಸಂಜೀವ್ ಕುಮಾರ್ ತಿಳಿಸಿದ್ದಾರೆ. ‘‘ಜಿಲ್ಲೆಯ 53 ಹೊಟೇಲ್ಗಳಲ್ಲಿ ಪೊಲೀಸರು ಶೋಧ ಕಾರ್ಯಾಚರಣೆ ನಡೆಸಿದ್ದಾರೆ ಹಾಗೂ ಘಟನೆಗೆ ಸಂಬಂಧಿಸಿ 17 ಮಂದಿಯನ್ನು ಬಂಧಿಸಿದ್ದಾರೆ. ಅವರ ವಿರುದ್ಧ ವಿವಿಧ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಿಸಲಾಗಿದೆ’’ ಎಂದು ಅವರು ತಿಳಿಸಿದ್ದಾರೆ.
ವಿಶೇಷ ಕಾರ್ಯಾಚರಣೆ ಸಂದರ್ಭ ನ್ಯಾಯಮೂರ್ತಿ ಅವರಿಗೆ ಢಿಕ್ಕಿ ಹೊಡೆದ ರಿಕ್ಷಾವನ್ನು ಪೊಲೀಸರು ಪತ್ತೆ ಮಾಡಿದ್ದಾರೆ. ಇದಲ್ಲದೆ ಸೂಕ್ತ ದಾಖಲೆಗಳು ಇಲ್ಲದ 250ಕ್ಕೂ ಅಧಿಕ ಆಟೊ ರಿಕ್ಷಾಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಕುಮಾರ್ ತಿಳಿಸಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿ ಘಟನೆಯ ಸಿಸಿಟಿವಿ ದೃಶ್ಯಾವಳಿಯನ್ನು ಬಹಿರಂಗಪಡಿಸಿದ ಸಬ್ ಇನ್ಸ್ಪೆಕ್ಟರ್ ಆದರ್ಶ್ ಕುಮಾರ್ ಸೇರಿದಂತೆ ಇಬ್ಬರು ಪೊಲೀಸರನ್ನು ಅಮಾನತುಗೊಳಿಸಲಾಗಿದೆ ಎಂದು ಕುಮಾರ್ ತಿಳಿಸಿದ್ದಾರೆ.