ರಾಕೇಶ್ ಆಸ್ಥಾನ ನೇಮಕಾತಿ ಪ್ರಶ್ನಿಸಿದ ಅರ್ಜಿಯ ಕುರಿತು 2 ವಾರಗಳಲ್ಲಿ ನಿರ್ಧರಿಸಿ: ದಿಲ್ಲಿ ಹೈಕೋರ್ಟ್ ಗೆ ಸುಪ್ರೀಂ
ಹೊಸದಿಲ್ಲಿ: ಗುಜರಾತ್ ಕೇಡರ್ ಐಪಿಎಸ್ ಅಧಿಕಾರಿ ರಾಕೇಶ್ ಆಸ್ಥಾನ ಅವರನ್ನು ದಿಲ್ಲಿ ಪೊಲೀಸ್ ಆಯುಕ್ತರನ್ನಾಗಿ ನೇಮಕ ಮಾಡಿರುವುದನ್ನು ಪ್ರಶ್ನಿಸಿ ಸಲ್ಲಿಸಲಾಗಿರುವ ಅರ್ಜಿಯನ್ನು ಅಂತಹುದೇ ಅರ್ಜಿಯನ್ನು ಈಗಾಗಲೇ ಸಲ್ಲಿಸಲಾಗಿರುವ ಹೈಕೋರ್ಟ್ನಲ್ಲಿ ವಿಚಾರಣೆ ನಡೆಸಬೇಕು ಎಂದು ಸುಪ್ರೀಂ ಕೋರ್ಟ್ ಇಂದು ಹೇಳಿದೆ. ಈ ಪ್ರಕರಣದಲ್ಲಿ ಒಂದು ನಿರ್ಧಾರವನ್ನು ಎರಡು ವಾರಗಳಲ್ಲಿ ಕೈಗೊಳ್ಳುವಂತೆಯೂ ದಿಲ್ಲಿ ಹೈಕೋರ್ಟ್ಗೆ ಸುಪ್ರೀಂ ಕೋರ್ಟ್ ಸೂಚನೆ ನೀಡಿದೆ.
ಸೆಂಟರ್ ಫಾರ್ ಪಬ್ಲಿಕ್ ಇಂಟರೆಸ್ಟ್ ಲಿಟಿಗೇಶನ್ ಸಲ್ಲಿಸಿರುವ ಅರ್ಜಿಯ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್ ಅರ್ಜಿದಾರರಿಗೆ ಹೈಕೋರ್ಟ್ನಲ್ಲಿ ಸಲ್ಲಿಸಲಾಗಿರುವ ಅರ್ಜಿಯಲ್ಲಿ ಮಧ್ಯಪ್ರವೇಶಿಸಲು ಅನುಮತಿಸಿದೆ.
ಆಸ್ಥಾನ ನೇಮಕಾತಿ ಪ್ರಶ್ನಿಸಿ ಹೈಕೋರ್ಟ್ನಲ್ಲಿ ಸದರ್ ಆಲಂ ಎಂಬವರು ಸಲ್ಲಿಸಿದ ಅರ್ಜಿಯ ವಿಚಾರಣೆ ವೇಳೆ, ಇಂತಹುದೇ ಅರ್ಜಿಯನ್ನು ಸುಪ್ರೀಂ ಕೋರ್ಟ್ನಲ್ಲಿಯೂ ಸಲ್ಲಿಸಲಾಗಿದೆ ಎಂದು ತಿಳಿಸಲಾಗಿತ್ತು. ಆದರೆ ಅರ್ಜಿಯನ್ನು ಸರಕಾರದೊಂದಿಗೆ ಶಾಮೀಲಾಗಿ ಸಲ್ಲಿಸಿ ಅದು ವಜಾಗೊಳ್ಳುವಂತೆ ನೋಡಿಕೊಳ್ಳಲೆಂದೇ ಸಲ್ಲಿಸಲಾಗಿದೆ ಎಂದು ಹೈಕೋರ್ಟ್ ಮುಂದೆ ಸಲ್ಲಿಕೆಯಾಗಿರುವ ಅರ್ಜಿ ಕುರಿತಂತೆ ಸೆಂಟರ್ ಫಾರ್ ಪಬ್ಲಿಕ್ ಇಂಟರೆಸ್ಟ್ ಲಿಟಿಗೇಶನ್ ಪರ ವಕೀಲ ಕಪಿಲ್ ಸಿಬಲ್ ಹೇಳಿದರು.