ಅಫ್ಘಾನಿಸ್ತಾನದ ಕುರಿತು ರಾಜನಾಥ್ ಸಿಂಗ್, ಅಮಿತ್ ಶಾ, ಅಜಿತ್ ದೋವಲ್ ಜೊತೆ ಪ್ರಧಾನಿ ಚರ್ಚೆ
ಹೊಸದಿಲ್ಲಿ: ಅಫ್ಘಾನಿಸ್ತಾನದಲ್ಲಿ ನಡೆಯುತ್ತಿರುವ ಪರಿಸ್ಥಿತಿಯ ಕುರಿತು ಪ್ರಧಾನಿ ನರೇಂದ್ರ ಮೋದಿ ಅವರು ರಕ್ಷಣಾ ಸಚಿವ ರಾಜನಾಥ್ ಸಿಂಗ್, ಗೃಹ ಸಚಿವ ಅಮಿತ್ ಶಾ ಹಾಗೂ ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ದೋವಲ್ ಅವರೊಂದಿಗೆ ತಮ್ಮ ನಿವಾಸದಲ್ಲಿ ಸೋಮವಾರ ಚರ್ಚೆ ಮಾಡಿದ್ದಾರೆ ಎಂದು NDTV ವರದಿ ಮಾಡಿದೆ.
ಅಫ್ಘಾನಿಸ್ತಾನದ ಮೇಲೆ ತಾನು ಸಂಪೂರ್ಣ ಹಿಡಿತ ಸಾಧಿಸಿದ್ದೇನೆ ಎಂದು ತಾಲಿಬಾನ್ ಸೋಮವಾರ ಪ್ರತಿಪಾದಿಸಿರುವ ಹಿನ್ನೆಲೆಯಲ್ಲಿ ಈ ಸಭೆ ನಡೆದಿದೆ.
"ಪಂಜ್ ಶಿರ್ ಪ್ರಾಂತ್ಯದಲ್ಲಿನ ವಿಜಯದೊಂದಿಗೆ ನಮ್ಮ ದೇಶವು ಯುದ್ಧದ ಬಿಕ್ಕಟ್ಟಿನಿಂದ ಸಂಪೂರ್ಣವಾಗಿ ಹೊರಬಂದಿದೆ" ಎಂದು ತಾಲಿಬಾನ್ ನ ಮುಖ್ಯ ವಕ್ತಾರ ಝಬಿಹುಲ್ಲಾ ಮುಜಾಹಿದ್ ಕಾಬೂಲ್ ನಲ್ಲಿ ಪತ್ರಿಕಾಗೋಷ್ಠಿಯಲ್ಲಿ ಹೇಳಿದರು.
ಅಫ್ಘಾನಿಸ್ತಾನದಲ್ಲಿನ ಪರಿಸ್ಥಿತಿಯನ್ನು ಗಮನದಲ್ಲಿಟ್ಟುಕೊಂಡು ಭಾರತದ ತಕ್ಷಣದ ಆದ್ಯತೆಗಳ ಮೇಲೆ ಕೇಂದ್ರೀಕರಿಸಲು ಪ್ರಧಾನಿ ಮೋದಿ ಉನ್ನತ ಮಟ್ಟದ ತಂಡವನ್ನು ರಚಿಸಿದ್ದಾರೆ. ಈ ತಂಡವು ವಿದೇಶಾಂಗ ಸಚಿವ ಎಸ್. ಜೈಶಂಕರ್, ದೋವಲ್ ಹಾಗೂ ಇತರ ಹಿರಿಯ ಅಧಿಕಾರಿಗಳನ್ನು ಒಳಗೊಂಡಿದೆ ಎಂದು ಮೂಲಗಳು ತಿಳಿಸಿವೆ. ಈ ತಂಡವು ಅಫ್ಘಾನಿಸ್ತಾನದ ಪರಿಸ್ಥಿತಿ ಹಾಗೂ ಅದಕ್ಕೆ ಅಂತಾರಾಷ್ಟ್ರೀಯ ಪ್ರತಿಕ್ರಿಯೆಗಳನ್ನು ಗಮನಿಸುತ್ತಿದೆ.