ಉತ್ತರಪ್ರದೇಶದಲ್ಲಿ ದಲಿತ ಮಹಿಳೆಯ ಮೇಲೆ ಸಾಮೂಹಿಕ ಅತ್ಯಾಚಾರ: ಮಾಯಾವತಿ ಖಂಡನೆ,ತಕ್ಷಣ ಕ್ರಮಕ್ಕೆ ಆಗ್ರಹ
ಲಕ್ನೊ: ಗೌತಮ್ ಬುದ್ಧ ನಗರದಲ್ಲಿ ದಲಿತ ಮಹಿಳೆ ಮೇಲೆ ನಡೆದ ಸಾಮೂಹಿಕ ಅತ್ಯಾಚಾರವನ್ನು ಬಿಎಸ್ಪಿ ಮುಖ್ಯಸ್ಥೆ ಮಾಯಾವತಿ ಸೋಮವಾರ ಖಂಡಿಸಿದ್ದಾರೆ ಹಾಗೂ ಆರೋಪಿಗಳ ವಿರುದ್ಧ ತಕ್ಷಣ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದ್ದಾರೆ.
ಮಧ್ಯವಯಸ್ಕ ದಲಿತ ಮಹಿಳೆಯನ್ನು ಜೇವರ್ ಪ್ರದೇಶದಲ್ಲಿ ರವಿವಾರ ಬೆಳಗ್ಗೆ ಆಕೆಗೆ ಪರಿಚಯವಿರುವ ಪುರುಷರು ಅತ್ಯಾಚಾರ ಎಸಗಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಮಹಿಳೆ ತನ್ನ ಗ್ರಾಮದ ಹೊರಗೆ ಹುಲ್ಲು ಕತ್ತರಿಸಲು ಹೋಗಿದ್ದಾಗ ಈ ಘಟನೆ ಸಂಭವಿಸಿದೆ. ಪ್ರಮುಖ ಆರೋಪಿ (28 ವರ್ಷ) ತನ್ನ ಜಾನುವಾರುಗಳನ್ನು ಮೇಯಿಸಲು ಅಲ್ಲಿಗೆ ಬಂದಿದ್ದ ಎಂದು ಅವರು ಹೇಳಿದರು.
"ಗೌತಮ್ ಬುದ್ಧ ನಗರದಲ್ಲಿ ದಲಿತ ಮಹಿಳೆಯ ಮೇಲೆ ಸಾಮೂಹಿಕ ಅತ್ಯಾಚಾರ ನಡೆದಿರುವುದು ಅತ್ಯಂತ ದುಃಖಕರ ಮತ್ತು ನಾಚಿಕೆಗೇಡಿನ ಸಂಗತಿಯಾಗಿದೆ. ಉತ್ತರಪ್ರದೇಶದ ಬಿಜೆಪಿ ಸರಕಾರವು ಆರೋಪಿಗಳ ವಿರುದ್ಧ ಕಠಿಣ ಕ್ರಮಗಳನ್ನು ತೆಗೆದುಕೊಳ್ಳಬೇಕು ಹಾಗೂ ಸಂತ್ರಸ್ತ ಕುಟುಂಬಕ್ಕೆ ನ್ಯಾಯ ಒದಗಿಸಬೇಕು" ಎಂದು ಮಾಯಾವತಿ ಹಿಂದಿಯಲ್ಲಿ ಟ್ವೀಟ್ ಮಾಡಿದ್ದಾರೆ.
ಪ್ರಕರಣದಲ್ಲಿ ಎಫ್ಐಆರ್ ದಾಖಲಿಸಲಾಗಿದೆ. ಆದರೆ ಇನ್ನೂ ಬಂಧಿಸಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ.