ಪುತ್ರನ ವಿರುದ್ಧ ಪುರಾವೆ ಸಿಗುವ ತನಕ ಅಜಯ್ ಮಿಶ್ರಾ ರಾಜೀನಾಮೆ ನೀಡುವುದಿಲ್ಲ:ವರದಿ
ಲಖಿಂಪುರ ಖೇರಿ ಹಿಂಸಾಚಾರ ಪ್ರಕರಣ
ಹೊಸದಿಲ್ಲಿ: ಲಖಿಂಪುರ ಖೇರಿ ಹಿಂಸಾಚಾರದಲ್ಲಿ ಕೇಂದ್ರ ಗೃಹ ವ್ಯವಹಾರಗಳ ರಾಜ್ಯ ಸಚಿವ ಅಜಯ್ ಮಿಶ್ರಾ ಅವರ ಪುತ್ರ ಭಾಗಿಯಾಗಿರುವ ಕಾರಣ ಮಿಶ್ರಾ ರಾಜೀನಾಮೆಗೆ ಪ್ರತಿಪಕ್ಷಗಳು ಪಟ್ಟು ಹಿಡಿದಿವೆ. ಒಮ್ಮೆ ಪೊಲೀಸ್ ತನಿಖೆ ಪೂರ್ಣಗೊಂಡ ಬಳಿಕ ಪ್ರಧಾನಿ ನರೇಂದ್ರ ಮೋದಿ ಅವರು ಈ ಕುರಿತು ಅಂತಿಮ ತೀರ್ಮಾನ ತೆಗೆದುಕೊಳ್ಳಲಿದ್ದಾರೆ ಎಂದು ಬಿಜೆಪಿ ಮೂಲಗಳು ತಿಳಿಸಿವೆ.
ಕೇಂದ್ರ ಸಚಿವರು ತಮ್ಮ ಮಗ ಘಟನೆಯಲ್ಲಿ ಭಾಗಿಯಾಗಿರುವುದನ್ನು ನಿರಾಕರಿಸಿದ್ದಾರೆ ಹಾಗೂ ಆತನ ವಿರುದ್ಧ ಯಾವುದೇ ಸಾಕ್ಷ್ಯಾಧಾರಗಳು ದೊರೆತಿಲ್ಲ ಎಂದು ಅವರು ಹೇಳಿದ್ದಾರೆ ಎನ್ನುವುದಾಗಿ ಪಕ್ಷದ ಮೂವರು ಹಿರಿಯ ನಾಯಕರು 'ದಿ ಇಂಡಿಯನ್ ಎಕ್ಸ್ಪ್ರೆಸ್' ಗೆ ತಿಳಿಸಿದ್ದಾರೆ.
. "ಘಟನೆಯಲ್ಲಿ ಕೇಂದ್ರ ಸಚಿವರ ಪುತ್ರ ಪಾಲ್ಗೊಳ್ಳುವಿಕೆಯನ್ನು ತೋರಿಸುವ ಪುರಾವೆಗಳಿದ್ದರೆ ಉನ್ನತ ನಾಯಕತ್ವವು ನಿರ್ಧಾರ ತೆಗೆದುಕೊಳ್ಳುತ್ತದೆ. ವಿರೋಧ ಪಕ್ಷಗಳು ಸಚಿವರ ರಾಜೀನಾಮೆಗೆ ಒತ್ತಾಯಿಸುತ್ತಿರುವುದರಿಂದ ಬಿಜೆಪಿ ಒತ್ತಡಕ್ಕೆ ಒಳಗಾಗುವುದಿಲ್ಲ’’ ಎಂದು ಪಕ್ಷದ ಹಿರಿಯ ನಾಯಕರೊಬ್ಬರು ಹೇಳಿದರು.
ಮುಂದಿನ ವರ್ಷದ ಆರಂಭದಲ್ಲಿ ನಡೆಯಲಿರುವ ವಿಧಾನಸಭಾ ಚುನಾವಣೆಯಲ್ಲಿ ಈ ಘಟನೆಯು ತನ್ನ ಚುನಾವಣಾ ನಿರೀಕ್ಷೆಗಳ ಮೇಲೆ ಯಾವುದೇ ದೊಡ್ಡ ಪರಿಣಾಮ ಬೀರುವ ಸಾಧ್ಯತೆ ಇಲ್ಲ ಎಂದು ಬಿಜೆಪಿ ಮೌಲ್ಯಮಾಪನ ಮಾಡಿದೆ ಎಂದು ಮೂಲಗಳು ತಿಳಿಸಿವೆ.
ಆದಾಗ್ಯೂ, ಪಕ್ಷದ ಅಂತಿಮ ನಿರ್ಧಾರವು ತನಿಖೆಯ ಪ್ರಗತಿಯ ಆಧಾರದ ಮೇಲೆ ಇರುತ್ತದೆ" ಎಂದು ಬಿಜೆಪಿ ನಾಯಕರೊಬ್ಬರು ಹೇಳಿದರು.