ಭೋಪಾಲ್ ಆಸ್ಪತ್ರೆಯ ಮಕ್ಕಳ ವಾರ್ಡ್ ನಲ್ಲಿ ಅಗ್ನಿ ಅನಾಹುತ: ಕೆಲ ಮಕ್ಕಳಿಗೆ ಗಾಯ
ಸಾಂದರ್ಭಿಕ ಚಿತ್ರ
ಭೋಪಾಲ್: ಭೋಪಾಲ್ನ ಆಸ್ಪತ್ರೆಯೊಂದರ ಮಕ್ಕಳ ವಾರ್ಡ್ನಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಕೆಲವು ಮಕ್ಕಳಿಗೆ ಸುಟ್ಟ ಗಾಯವಾಗಿದೆ ಎಂದು ಮೂಲಗಳು ತಿಳಿಸಿವೆ. ಬೆಂಕಿಗೆ ಕಾರಣ ತನಿಖೆ ನಡೆಯುತ್ತಿದೆ ಎಂದು ತಿಳಿದುಬಂದಿದೆ.
ಅಗ್ನಿಶಾಮಕ ದಳ ಹಾಗೂ ಪೊಲೀಸ್ ತಂಡಗಳು ಆಸ್ಪತ್ರೆಯಲ್ಲಿದ್ದು ರಕ್ಷಣಾ ಕಾರ್ಯಾಚರಣೆ ನಡೆಸುತ್ತಿವೆ. ರಾಜ್ಯ ಸಚಿವ ವಿಶ್ವಾಸ್ ಸಾರಂಗ್ ಮತ್ತು ಹಿರಿಯ ಪೊಲೀಸ್ ಅಧಿಕಾರಿ ಇರ್ಷಾದ್ ವಾಲಿ ಕೂಡ ಸ್ಥಳದಲ್ಲಿದ್ದಾರೆ.
ಬೆಂಕಿ ಹೊತ್ತಿಕೊಂಡ ವಾರ್ಡ್ನಿಂದ ತಪ್ಪಿಸಿಕೊಂಡ ನಂತರ ಮಕ್ಕಳ ಪೋಷಕರು ಮೆಟ್ಟಿಲುಗಳ ಮೇಲೆ ಕುಸಿದು ಬೀಳುವ ದೃಶ್ಯಗಳು ಆಘಾತಗೊಳಿಸಿದವು.
ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ಘಟನೆಯನ್ನು "ತುಂಬಾ ದುಃಖಕರ" ಎಂದು ಬಣ್ಣಿಸಿದ್ದಾರೆ ಹಾಗೂ ಪರಿಸ್ಥಿತಿಯನ್ನು ಹತೋಟಿಗೆ ತರಲು ಎಲ್ಲವನ್ನು ಮಾಡುವಂತೆ ಆಡಳಿತ ಮತ್ತು ರಕ್ಷಣಾ ಸಿಬ್ಬಂದಿಗೆ ಸೂಚನೆ ನೀಡಿದ್ದಾರೆ.
"ಅಧಿಕಾರಿಗಳು ನನ್ನೊಂದಿಗೆ ನಿರಂತರ ಸಂಪರ್ಕದಲ್ಲಿದ್ದಾರೆ. ಎಲ್ಲಾ ವಿಪತ್ತು ನಿರ್ವಹಣಾ ಕ್ರಮಗಳನ್ನು ತೆಗೆದುಕೊಳ್ಳಲಾಗುತ್ತಿದೆ. ಮಕ್ಕಳ ಬಗ್ಗೆ ಸೂಕ್ತ ಕಾಳಜಿ ವಹಿಸಲು ಆಸ್ಪತ್ರೆಯ ಆಡಳಿತ ಮಂಡಳಿಗೆ ಸೂಚಿಸಲಾಗಿದೆ ಹಾಗೂ ರಕ್ಷಣಾ ಕಾರ್ಯ ನಡೆಯುತ್ತಿದೆ" ಎಂದು ಮುಖ್ಯಮಂತ್ರಿ ಹೇಳಿದರು.