ಪ್ರತಿಭಟನೆಯಲ್ಲಿ ಮೃತಪಟ್ಟ 702 ರೈತರ ಪಟ್ಟಿಯನ್ನು ಕೇಂದ್ರಕ್ಕೆ ಕಳುಹಿಸಿದ ಸಂಯುಕ್ತ ಕಿಸಾನ್ ಮೋರ್ಚಾ
ಹೊಸದಿಲ್ಲಿ: ವಿವಾದಾತ್ಮಕ ಮೂರು ಕೃಷಿ ಕಾಯ್ದೆಗಳ ವಿರುದ್ಧ ನಡೆದ ಪ್ರತಿಭಟನೆ ಸಂದರ್ಭ ಸಾವನ್ನಪ್ಪಿದ್ದಾರೆ ಎಂದು ಹೇಳಲಾದ 702 ರೈತರ ಪಟ್ಟಿಯನ್ನು ಸಂಯುಕ್ತ ಕಿಸಾನ್ ಮೋರ್ಚಾ (ಎಸ್ಕೆಎಂ) ಶನಿವಾರ ಕೇಂದ್ರ ಸರಕಾರಕ್ಕೆ ಕಳುಹಿಸಿಕೊಟ್ಟಿದೆ ಎಂದು ವರದಿಯಾಗಿದೆ.
ಈ ಬೆಳವಣಿಗೆಯನ್ನು ದೃಢಪಡಿಸಿರುವ ರೈತ ನಾಯಕ ಕಿಷನ್ ಪಾಲ್, ‘‘ಕೃಷಿ ಕಾಯ್ದೆಗಳ ವಿರುದ್ಧದ ಪ್ರತಿಭಟನೆ ಸಂದರ್ಭ ಹುತಾತ್ಮರಾದ 702 ರೈತರ ಪಟ್ಟಿಯನ್ನು ನಾವು ಕೇಂದ್ರ ಸರಕಾರಕ್ಕೆ ಕಳುಹಿಸಿಕೊಟ್ಟಿದ್ದೇವೆ’’ ಎಂದರು.
ಕೃಷಿ ಕಾಯ್ದೆಗಳ ವಿರುದ್ಧದ ಪ್ರತಿಭಟನೆ ಸಂದರ್ಭ ಮೃತಪಟ್ಟ ರೈತರ ದತ್ತಾಂಶ ಕೇಂದ್ರ ಸರಕಾರದಲ್ಲಿ ಇದೆಯೇ? ಮೃತಪಟ್ಟ ರೈತರ ಕುಟುಂಬಗಳಿಗೆ ಪರಿಹಾರ ಒದಗಿಸಲಾಗುತ್ತದೆಯೇ? ಎಂದು ಲೋಕಸಭೆಯಲ್ಲಿ ಇತ್ತೀಚೆಗೆ ಪ್ರಶ್ನಿಸಲಾಗಿತ್ತು. ಇದಕ್ಕೆ ಪ್ರತಿಕ್ರಿಯಿಸಿದ ಕೇಂದ್ರ ಸರಕಾರ ಕೃಷಿ ಕಾಯ್ದೆಗಳ ವಿರುದ್ಧದ ಪ್ರತಿಭಟನೆಯ ಸಂದರ್ಭ ಯಾವೊಬ್ಬ ರೈತನೂ ಮೃತಪಟ್ಟ ದಾಖಲೆಗಳಿಲ್ಲ. ಆದುದರಿಂದ ಪರಿಹಾರ ನೀಡುವ ಪ್ರಶ್ನೆಯೇ ಉದ್ಬವಿಸುವುದಿಲ್ಲ ಎಂದು ಹೇಳಿತ್ತು.
ಮೂರು ಕೃಷಿ ಕಾಯ್ದೆಗಳನ್ನು ಕೇಂದ್ರ ಸರಕಾರ ರದ್ದುಗೊಳಿಸಿದ ಬಳಿಕ ಮುಂದಿನ ಕ್ರಮವಾಗಿ ಸಿಂಘು ಗಡಿಯಲ್ಲಿ ರೈತರು ಪ್ರಮುಖ ಸಭೆಗಳನ್ನು ನಡೆಸುತ್ತಿದ್ದಾರೆ. ತಮ್ಮ ವಿರುದ್ಧ ದಾಖಲಿಸಲಾಗಿರುವ ಪ್ರಕರಣಗಳನ್ನು ಹಿಂಪಡೆಯುವಂತೆ, ಕನಿಷ್ಠ ಬೆಂಬಲ ಬೆಲೆಗೆ ಕಾಯ್ದೆ ತರುವಂತೆ ಹಾಗೂ ಮೃತಪಟ್ಟ ರೈತರ ಕುಟುಂಬಗಳಿಗೆ ಪರಿಹಾರ ನೀಡುವಂತೆ ಕೂಡ ಅವರು ಆಗ್ರಹಿಸಿದ್ದಾರೆ.
ಶುಕ್ರವಾರ ಬೆಳಗ್ಗೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ‘‘ತನ್ನಲ್ಲಿ ಯಾವುದೇ ದಾಖಲೆ ಇಲ್ಲ ಎಂದು ಸರಕಾರ ಹೇಳುತ್ತಿದೆ. ನಮ್ಮಲ್ಲಿ ಮೃತಪಟ್ಟ 503 ರೈತರ ದತ್ತಾಂಶ ಇದೆ. ಸರಕಾರ ಬಯಸಿದರೆ, ಈ ಪಟ್ಟಿಯನ್ನು ನಮ್ಮಿಂದ ತೆಗೆದುಕೊಳ್ಳಬಹುದು. ಪಂಜಾಬ್ ಸರಕಾರ 403 ಸಂತ್ರಸ್ತ ಕುಟುಂಬಗಳಿಗೆ ಪರಿಹಾರ ಧನ ಹಾಗೂ 152 ಸಂತ್ರಸ್ತ ಕುಟುಂಬದ ಸದಸ್ಯರಿಗೆ ಉದ್ಯೋಗಗಳನ್ನು ನೀಡಿದೆ’’ ಎಂದು ಹೇಳಿದ್ದಾರೆ.