2024ರಲ್ಲಿ ಪ್ರತಿಪಕ್ಷಗಳು ಅಧಿಕಾರಕ್ಕೆ ಬಂದರೆ ದೇಶದ ಎಲ್ಲಾ ಹಿಂದುಳಿದ ರಾಜ್ಯಗಳಿಗೆ ವಿಶೇಷ ಸ್ಥಾನಮಾನ: ನಿತೀಶ್ ಕುಮಾರ್
Photo:PTI
ಪಾಟ್ನಾ: 2024 ರ ಸಾರ್ವತ್ರಿಕ ಚುನಾವಣೆಯ ನಂತರ ಬಿಜೆಪಿಯೇತರ ಪಕ್ಷಗಳು ಕೇಂದ್ರದಲ್ಲಿ ಸರಕಾರ ರಚಿಸಿದರೆ ದೇಶದ ಎಲ್ಲಾ ಹಿಂದುಳಿದ ರಾಜ್ಯಗಳಿಗೆ ವಿಶೇಷ ಸ್ಥಾನಮಾನ ನೀಡಲಾಗುವುದು ಎಂದು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್(Nitish Kumar) ಗುರುವಾರ ಘೋಷಿಸಿದರು.
"ನಮಗೆ ಸರಕಾರ ರಚಿಸಲು ಅವಕಾಶ ಸಿಕ್ಕರೆ, ನಾವು ಖಂಡಿತವಾಗಿಯೂ ಹಿಂದುಳಿದ ರಾಜ್ಯಗಳಿಗೆ ವಿಶೇಷ ಸ್ಥಾನಮಾನ ನೀಡುತ್ತೇವೆ. ನಾನು ಬಿಹಾರದ ಬಗ್ಗೆ ಮಾತ್ರವಲ್ಲ, ವಿಶೇಷ ಸ್ಥಾನಮಾನ ಪಡೆಯಬೇಕಾದ ಇತರ ರಾಜ್ಯಗಳ ಬಗ್ಗೆಯೂ ಮಾತನಾಡುತ್ತಿದ್ದೇನೆ" ಎಂದು ಅವರು ಮಾಧ್ಯಮಗಳಿಗೆ ಪ್ರಶ್ನೆಯೊಂದಕ್ಕೆ ಉತ್ತರಿಸಿದರು.
ಕುಮಾರ್ ಇತ್ತೀಚೆಗೆ ದಿಲ್ಲಿಗೆ ಭೇಟಿ ನೀಡಿದ ಹಿನ್ನೆಲೆಯಲ್ಲಿ ಈ ಹೇಳಿಕೆ ನೀಡಿದ್ದಾರೆ. ದಿಲ್ಲಿ ಭೇಟಿಯ ಸಮಯದಲ್ಲಿ ಅವರು ಮುಂದಿನ ಸಾರ್ವತ್ರಿಕ ಚುನಾವಣೆಯಲ್ಲಿ ಬಿಜೆಪಿಯ ಚುನಾವಣಾ ಯಂತ್ರವನ್ನು ಎದುರಿಸಲು ಪ್ರತಿಪಕ್ಷವನ್ನು ಒಟ್ಟಿಗೆ ಸೇರಿಸುವ ಸಾಧ್ಯತೆಯನ್ನು ಅನ್ವೇಷಿಸಲು ಹಲವಾರು ವಿರೋಧ ಪಕ್ಷಗಳ ನಾಯಕರನ್ನು ಭೇಟಿ ಮಾಡಿದ್ದರು.
ಕಳೆದ ತಿಂಗಳು ಬಿಜೆಪಿಯಿಂದ ಬೇರ್ಪಟ್ಟ ಕುಮಾರ್, ತೇಜಸ್ವಿ ಯಾದವ್ ಅವರ ರಾಷ್ಟ್ರೀಯ ಜನತಾ ದಳ ಮತ್ತು ಕಾಂಗ್ರೆಸ್ ಬೆಂಬಲದೊಂದಿಗೆ ಬಿಹಾರದಲ್ಲಿ ಹೊಸ ಸರಕಾರವನ್ನು ರಚಿಸಿದರು, 2007 ರಿಂದ ಬಿಹಾರಕ್ಕೆ ವಿಶೇಷ ಸ್ಥಾನಮಾನಕ್ಕಾಗಿ ಒತ್ತಾಯಿಸುತ್ತಿದ್ದಾರೆ.