ತಿಂಗಳೊಳಗೆ ಎಲ್ಲ ರಾಷ್ಟ್ರೀಯ ಹೆದ್ದಾರಿಗಳ ಹೊಂಡ ಮುಚ್ಚಲು ರಸ್ತೆ ಸಾರಿಗೆ ಸಚಿವಾಲಯ ಆದೇಶ
ಹೊಸದಿಲ್ಲಿ: ರಾಷ್ಟ್ರೀಯ ಹೆದ್ದಾರಿಗಳು ಹೊಂಡ- ಗುಂಡಿಗಳಿಂದ ಕೂಡಿ ಸಂಚಾರ ದುಸ್ತರವಾಗಿದೆ ಎಂಬ ವರದಿಗಳ ಹಿನ್ನೆಲೆಯಲ್ಲಿ ಒಂದು ತಿಂಗಳ ಒಳಗಾಗಿ ಎಲ್ಲ ರಾಷ್ಟ್ರೀಯ ಹೆದ್ದಾರಿಗಳನ್ನು ಹೊಂಡ ಮುಕ್ತವನ್ನಾಗಿ ಮಾಡಬೇಕು ಎಂದು ರಸ್ತೆ ಸಾರಿಗೆ ಸಚಿವಾಲಯ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಆದೇಶ ನೀಡಿದೆ.
ಸಾರ್ವಜನಿಕ ಅಹವಾಲು ಮತ್ತು ಗಣ್ಯರು ಉಲ್ಲೇಖಿಸಿದ ಸಮಸ್ಯೆಗಳನ್ನು ಬಗೆಹರಿಸುವ ನಿಟ್ಟಿನಲ್ಲಿ ವಿಶೇಷ ಅಭಿಯಾನ ಹಮ್ಮಿಕೊಂಡು ರಸ್ತೆ ಹೊಂಡಗಳನ್ನು ಮುಚ್ಚಲು ಕ್ರಮ ಕೈಗೊಳ್ಳಬೇಕು ಎಂದು ರಸ್ತೆ ಸಾರಿಗೆ ಕಾರ್ಯದರ್ಶಿ ಗಿರಿಧರ್ ಅರಮನೆ ಇತ್ತೀಚೆಗೆ ನಡೆದ ಸಭೆಯಲ್ಲಿ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ರಾಷ್ಟ್ರೀಯ ಹೆದ್ದಾರಿಗಳಲ್ಲಿ ಹೊಂಡ- ಗುಂಡಿಗಳು ಇರುವುದನ್ನು ಒಪ್ಪಿಕೊಳ್ಳಲು ಸಾಧ್ಯವಿಲ್ಲ. ಆದ್ದರಿಂದ ಕ್ಷೇತ್ರ ಅಧಿಕಾರಿಗಳು ತಕ್ಷಣ ಈ ಬಗ್ಗೆ ಗಮನ ಹರಿಸಬೇಕು ಎಂದು ಸೂಚಿಸಿದರು ಎಂದು ತಿಳಿದು ಬಂದಿದೆ.
ರಾಷ್ಟ್ರೀಯ ಹೆದ್ದಾರಿಗಳಲ್ಲಿ ಹೊಂಡ-ಗುಂಡಿಗಳು ಇರುವುದು ಅಪಾಯಕಾರಿಯಾಗಿದ್ದು, ಸಾಮಾನ್ಯವಾಗಿ ಹೆದ್ದಾರಿಗಳಲ್ಲಿ ವಾಹನಗಳ ಸರಾಸರಿ ವೇಗ ಅಧಿಕ ಇರುತ್ತದೆ. ರಸ್ತೆ ಹೊಂಡಗಳನ್ನು ತಪ್ಪಿಸಲು ಹಠಾತ್ತನೇ ವೇಗ ತಗ್ಗಿಸುವುದು ಅಪಘಾತಕ್ಕೆ ಕಾರಣವಾಗುವ ಎಲ್ಲ ಸಾಧ್ಯತೆಗಳಿರುತ್ತವೆ.
ಈ ಕಾರ್ಯವನ್ನು ಆದ್ಯತೆ ಮೇಲೆ ಕೈಗೊಳ್ಳಲಾಗುವುದು ಹಾಗು ಪ್ರಗತಿಯನ್ನು ಪ್ರತಿದಿನ ಮೇಲ್ವಿಚಾರಣೆ ನಡೆಸಲಾಗುವುದು ಎಂದು ಭಾರತದ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳು ಭರವಸೆ ನೀಡಿದ್ದಾರೆ. ಈ ಬಗ್ಗೆ timesofindia.com ವರದಿ ಮಾಡಿದೆ.