"ಸಾವರ್ಕರ್ರನ್ನು ನಾವು ಪ್ರೀತಿಸಿ, ಆದರಿಸುತ್ತೇವೆ, ಹಾಗಾಗಿ ಕಾಂಗ್ರೆಸ್ ನಾಯಕರ ಹೇಳಿಕೆಯನ್ನು ಒಪ್ಪುವುದಿಲ್ಲ"
ವಿಡಿ ಸಾವರ್ಕರ್ ಕುರಿತಾದ ರಾಹುಲ್ ಗಾಂಧಿ ಟೀಕೆಗೆ ಉದ್ಧವ್ ಠಾಕ್ರೆ ಪ್ರತಿಕ್ರಿಯೆ
ಮುಂಬೈ: ಭಾರತ್ ಜೋಡೋ ಯಾತ್ರೆಯ ಸಂದರ್ಭದಲ್ಲಿ ರಾಹುಲ್ ಗಾಂಧಿ ಹಿಂದುತ್ವವಾದಿ ವಿ ಡಿ ಸಾವರ್ಕರ್ ಅವರನ್ನು ಟೀಕಿಸಿದ ಎರಡು ದಿನಗಳ ನಂತರ, ಶಿವಸೇನಾ ಅಧ್ಯಕ್ಷ ಉದ್ಧವ್ ಠಾಕ್ರೆ ಗುರುವಾರ ಅವರು ಸಾವರ್ಕರ್ ರನ್ನು ತಾವು ಗೌರವಿಸುವುದರಿಂದ ಕಾಂಗ್ರೆಸ್ ನಾಯಕರ ಹೇಳಿಕೆಗಳನ್ನು ಬೆಂಬಲಿಸುವುದಿಲ್ಲ ಎಂದು ಹೇಳಿದ್ದಾರೆ.
ಆದಾಗ್ಯೂ, ಭಾರತ್ ಜೋಡೋ ಯಾತ್ರೆಯನ್ನು ಶಿವಸೇನೆ ಬೆಂಬಲಿಸುತ್ತದೆ ಎಂದು ಠಾಕ್ರೆ ಹೇಳಿದ್ದಾರೆ. ಯಾತ್ರೆಯ ಅಂಗವಾಗಿ ಕಾಂಗ್ರೆಸ್ ಆಯೋಜಿಸಿರುವ ಶೆಗಾಂವ್ನಲ್ಲಿ ರ್ಯಾಲಿಯಲ್ಲಿ ಪಾಲ್ಗೊಳ್ಳದಿರುವ ಸಾಧ್ಯತೆಯನ್ನೂ ಅವರು ಸೂಚಿಸಿದ್ದಾರೆ. ಈ ರ್ಯಾಲಿಗಾಗಿ ಉದ್ಧವರ್ ಠಾಕ್ರೆ ಹಾಗೂ ಎನ್ಸಿಪಿ ಮುಖ್ಯಸ್ಥ ಶರದ್ ಪವಾರ್ ಅವರನ್ನು ಕಾಂಗ್ರೆಸ್ ಆಹ್ವಾನಿಸಿತ್ತು.
ಈ ನಡುವೆ, ಆರ್ಎಸ್ಎಸ್ ಮತ್ತು ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ ಅವರು, ಸಾವರ್ಕರ್ ಹಾಗೂ ಇತರೆ ಸ್ವಾತಂತ್ರ್ಯ ಹೋರಾಟಗಾರರ ಬಗ್ಗೆ ಮಾತನಾಡುವ ಆರ್ಎಸ್ಎಸ್ ಯಾಕೆ ಭಾರತದ ಸ್ವಾತಂತ್ರ್ಯ ಚಳವಳಿಯ ಭಾಗವಾಗಿಲ್ಲ, ಮತ್ತು ಸಾವರ್ಕರ್ಗೆ ಭಾರತ ರತ್ನ ಏಕೆ ನೀಡಲಿಲ್ಲ ಎಂದು ಬಿಜೆಪಿಯನ್ನು ಪ್ರಶ್ನಿಸಿದ್ದಾರೆ.
ವೀರ್ ಸಾವರ್ಕರ್ ಬಗ್ಗೆ ರಾಹುಲ್ ಗಾಂಧಿ ಹೇಳಿದ್ದನ್ನು ನಾವು ಒಪ್ಪುವುದಿಲ್ಲ. ನಾವು ಸಾವರ್ಕರ್ ಅವರನ್ನು ಗೌರವಿಸುತ್ತೇವೆ ಮತ್ತು ಪ್ರೀತಿಸುತ್ತೇವೆ. ಆದರೆ ಸ್ವಾತಂತ್ರ್ಯ ಹೋರಾಟಗಾರರು ಮತ್ತು ಸಾವರ್ಕರ್ ಬಗ್ಗೆ ನಮ್ಮನ್ನು ಪ್ರಶ್ನಿಸುವ ಮೊದಲು, ನೀವು (ಬಿಜೆಪಿ) ಸ್ವಾತಂತ್ರ್ಯ ಹೋರಾಟದಲ್ಲಿ ಆರೆಸ್ಸೆಸ್ ಪಾತ್ರ ಮತ್ತು ಕೊಡುಗೆ ಏನು ಎಂಬುದನ್ನು ಮೊದಲು ನಮಗೆ ತಿಳಿಸಬೇಕು. ಸ್ವಾತಂತ್ರ್ಯ ಹೋರಾಟದ ಸಮಯದಲ್ಲಿ ನಾವು ಇರಲಿಲ್ಲ, ಆದರೆ ಆರ್ಎಸ್ಎಸ್ ಇತ್ತು ಎಂದು ಠಾಕ್ರೆ ವಾಗ್ದಾಳಿ ನಡೆಸಿದ್ದಾರೆ.
ಸ್ವಾತಂತ್ರ್ಯ ಹೋರಾಟದಲ್ಲಿ ಆರ್ಎಸ್ಎಸ್ ಸಂಘಟನೆಗೆ ಯಾವುದೇ ಪಾತ್ರವಿಲ್ಲ ಎಂದು ಹೇಳಿದ ಠಾಕ್ರೆ, ಬಿಜೆಪಿಗೆ ಸಾವರ್ಕರ್ ಬಗ್ಗೆ ಮಾತನಾಡುವ ಹಕ್ಕಿಲ್ಲ ಎಂದಿದ್ದಾರೆ. ಅಲ್ಲದೆ, ಜಮ್ಮು ಮತ್ತು ಕಾಶ್ಮೀರದಲ್ಲಿ ಪೀಪಲ್ಸ್ ಡೆಮಾಕ್ರಟಿಕ್ ಪಾರ್ಟಿ (ಪಿಡಿಪಿ) ಯೊಂದಿಗೆ ಸರ್ಕಾರ ರಚಿಸಲು ಬಿಜೆಪಿ ಕೈಜೋಡಿಸಿದೆ ಎಂಬುದನ್ನು ಇದೇ ವೇಳೆ ಉಲ್ಲೇಖಿಸಿದ್ದಾರೆ.