ಮಹಾರಾಷ್ಟ್ರ ವೈದ್ಯರ ಮುಷ್ಕರ ನಾಲ್ಕನೆ ದಿನಕ್ಕೆ: ಕರ್ತವ್ಯಕ್ಕೆ ಮರಳಲು ಫಡ್ನವೀಸ್, ನಡ್ಡಾ ಆಗ್ರಹ
ಹೊಸದಿಲ್ಲಿ, ಮಾ.23: ಕರ್ತವ್ಯ ನಿರ್ವಹಣೆ ಸಂದರ್ಭದಲ್ಲಿ ತಮ್ಮ ಭದ್ರತೆಯನ್ನು ಹೆಚ್ಚಿಸಬೇಕೆಂದು ಆಗ್ರಹಿಸಿ ಮಹಾರಾಷ್ಟ್ರ ರಾಜ್ಯಾದ್ಯಂತ ಸರಕಾರಿ ವೈದ್ಯರು ನಡೆಸುತ್ತಿರುವ ಮುಷ್ಕರ ಗುರುವಾರ ನಾಲ್ಕನೆ ದಿನಕ್ಕೆ ಕಾಲಿರಿಸಿದೆ.
ಮುಷ್ಕರದಿಂದ ಹಿಂದೆ ಸರಿಯುವಂತೆ ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಇಂದು ರಾಜ್ಯದ ವೈದ್ಯರಿಗೆ ಮನವಿ ಮಾಡಿದ್ದು, ಆಸ್ಪತ್ರೆಯಲ್ಲಿ ಅವರಿಗೆ ಸುರಕ್ಷತೆಯ ಖಾತರಿಪಡಿಸುವುವುದಾಗಿ ಭರವಸೆ ನೀಡಿದ್ದಾರೆ.
ಮುಷ್ಕರ ಕೈಬಿಟ್ಟು ಕರ್ತವ್ಯಕ್ಕೆ ಹಾಜರಾಗುವಂತೆ ಕೇಂದ್ರ ಆರೋಗ್ಯ ಸಚಿವ ಜೆ.ಪಿ. ನಡ್ಡಾ ಅವರು ಮಹಾರಾಷ್ಟ್ರದ ವೈದ್ಯರಿಗೆ ಮನವಿ ಮಾಡಿದ್ದು, ಅವರ ಸುರಕ್ಷತೆಯನ್ನು ಖಾತರಿಪಡಿಸಲು ಎಲ್ಲಾ ರೀತಿಯ ಕ್ರಿಯಾಶೀಲ ಕ್ರಮಗಳನ್ನು ಕೈಗೊಳ್ಳಬೇಕೆಂದು ರಾಜ್ಯ ಸರಕಾರಗಳಿಗೆ ಸೂಚನೆ ನೀಡಿರುವುದಾಗಿ ಅವರು ಹೇಳಿದ್ದಾರೆ.
ಈ ಮಧ್ಯೆ ಬಾಂಬೆ ಹೈಕೋರ್ಟ್, ಮುಷ್ಕರ ಕೈಬಿಟ್ಟು ತಕ್ಷಣವೇ ಕರ್ತವ್ಯಕ್ಕೆ ಹಾಜರಾಗುವಂತೆ ಬಾಂಬೆ ಹೈಕೋರ್ಟ್ ಮಹಾರಾಷ್ಟ್ರದ ಸ್ಥಾನಿಕ ವೈದ್ಯರಿಗೆ ತಿಳಿಸಿದ್ದು, ಅವರ ಸಮಸ್ಯೆಗಳು ಹಾಗೂ ಬೇಡಿಕೆಗಳನ್ನು ರಾಜ್ಯ ಸರಕಾರದೊಂದಿಗೆ ಸೌಹಾರ್ದಯುತವಾಗಿ ಬಗೆಹರಿಸಿಕೊಳ್ಳಬಹುದೆಂದು ಹೇಳಿದೆ.
ರಾಜ್ಯದಾದ್ಯಂತ ಸರಕಾರಿ ಆಸ್ಪತ್ರೆಗಳಲ್ಲಿ ರೋಗಿಗಳ ಬಂಧುಗಳು ವೈದ್ಯರ ಮೇಲೆ ಹಲ್ಲೆ ನಡೆಸಿದ ಸರಣಿ ಘಟನೆಗಳು ನಡೆದಿರು ಹಿನ್ನೆಲೆಯಲ್ಲಿ ತಮ್ಮ ಭದ್ರತೆಯನ್ನು ಒದಗಿಸುವಂತೆ ಆಗ್ರಹಿಸಿ ಸೋಮವಾರದಿಂದ ನಾಲ್ಕು ಸಾವಿರ ಸರಕಾರಿ ವೈದ್ಯರು ಮುಷ್ಕರ ನಡೆಸುತ್ತಿದ್ದಾರೆ.