ಸ್ಕಾರ್ಫ್ ವಿವಾದ: ತನಿಖೆ ನಡೆಸಿ ನ್ಯಾಯ ಒದಗಿಸಲು ಆಗ್ರಹ
ಉಡುಪಿ, ಜ.17: ಉಡುಪಿ ಸರಕಾರಿ ಬಾಲಕಿಯರ ಪದವಿ ಪೂರ್ವ ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿರುವ ಮುಸ್ಲಿಂ ವಿದ್ಯಾರ್ಥಿನಿಯರಿಗೆ ಹಿಜಾಬ್ ಧರಿಸಿದ ಕಾರಣಕ್ಕಾಗಿ ತರಗತಿ ಪ್ರವೇಶ ನಿರಾಕರಿಸಿದ ಪ್ರಕರಣವನ್ನು ಇನ್ನೂ ಇತ್ಯರ್ಥ ಪಡಿಸದೇ ಮೂರು ವಾರಗಳಿಂದ ತರಗತಿಗೆ ಪ್ರವೇಶ ನಿರಾಕರಿಸಿ ವಿದ್ಯಾರ್ಜನೆಗೆ ಅಡ್ಡಿಪಡಿಸಿರುವ ಕ್ರಮವು ಸಂವಿಧಾನ ವಿರೋಧಿಯಾಗಿದೆ. ಈ ಕುರಿತು ಕೂಡಲೇ ಮಧ್ಯ ಪ್ರವೇಶ ಮಾಡಿ ತನಿಖೆ ನಡೆಸಿ ವಿದ್ಯಾರ್ಥಿನಿಯರಿಗೆ ನ್ಯಾಯ ಒದಗಿಸುವಂತೆ ಉಡುಪಿ ಜಿಲ್ಲಾ ಮುಸ್ಲಿಂ ಒಕ್ಕೂಟದ ಮಾಜಿ ಅಧ್ಯಕ್ಷ ಎಂ.ಪಿ.ಮೊಯಿದಿನಬ್ಬ ಶಿಕ್ಷಣ ಸಚಿವರು ಮತ್ತು ಶಿಕ್ಷಣ ಇಲಾಖೆಯ ಪ್ರಧಾನ ಕಾರ್ಯದರ್ಶಿ ಅವರನ್ನು ಒತ್ತಾಯಿಸಿದ್ದಾರೆ.
ಈಗಾಗಲೇ ಉಡುಪಿ ಜಿಲ್ಲಾಧಿಕಾರಿ, ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪ ನಿರ್ದೇಶಕರಿಗೆ ವಿದ್ಯಾರ್ಥಿಗಳು, ಪೋಷಕರು ವಿವಿಧ ಸ್ವಯಂ ಸೇವಾಸಂಸ್ಥೆ ಗಳು ಮನವಿ ಸಲ್ಲಿಸಿ ಕ್ರಮ ಕೈಗೊಳ್ಳಲು ಒತ್ತಾಯ ಮಾಡಿದ್ದರೂ ಯಾವ ಅಧಿಕಾರಿಯೂ ಈ ಕುರಿತಂತೆ ಕ್ರಮ ಕೈಗೊಳ್ಳಲು ವಿಫಲರಾಗಿದ್ದಾರೆ. ಇದರಿಂದ ವಿದ್ಯಾರ್ಥಿನಿಯರು ಮೂರು ವಾರದಿಂದ ತರಗತಿ ಹೊರಗೆ ಕೂರುವ ಸ್ಥಿತಿ ನಿರ್ಮಾಣವಾಗಿದೆ. ಇದಕ್ಕೆ ಜಿಲ್ಲಾಧಿಕಾರಿಗಳು ಮತ್ತು ಜಿಲ್ಲೆಯ ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪನಿರ್ದೇಶಕರು ನೇರ ಹೊಣೆಗಾರರಾಗಿದ್ದು ಸರಕಾರ ಅವರ ಮೇಲೆ ಕ್ರಮ ಕೈಗೊಳ್ಳಬೇಕು ಎಂದು ಮೊಯಿದಿನಬ್ಬ ಪ್ರಕಟಣೆಯಲ್ಲಿ ಆಗ್ರಹಿಸಿದ್ದಾರೆ.