ಸೇವಾ ನಿಯಮಾವಳಿಗಳನ್ನು ಅರಿತು ಕಾರ್ಯನಿರ್ವಹಿಸಿ: ಪ್ರಸನ್ನ ಎಚ್.
ಉಡುಪಿ : ಸರಕಾರಿ ಅಧಿಕಾರಿಗಳು, ಸಿಬ್ಬಂದಿಗಳು ಸೇವಾ ನಿಯಮಗಳನ್ನು ತಿಳಿದುಕೊಂಡಿರುವುದು ಅತೀ ಅಗತ್ಯ. ನಿಯಮಿತವಾಗಿ ಈ ನಿಯಮಗಳನ್ನು ಹಾಗೂ ಅದರ ಪರಿಷ್ಕೃತ ಸಂಗತಿಗಳನ್ನು ಅರಿತುಕೊಂಡಲ್ಲಿ ಪರಿಣಾಮಕಾರಿಯಾಗಿ ಕಾರ್ಯನಿರ್ವಹಿಸಲು ಸಾಧ್ಯ ಎಂದು ಉಡುಪಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರಸನ್ನ ಎಚ್.ಹೇಳಿದ್ದಾರೆ.
ಇತ್ತೀಚೆಗೆ ಮಣಿಪಾಲದ ಅಟಲ್ ಬಿಹಾರಿ ವಾಜಪೇಯಿ ಸಭಾಂಗಣದಲ್ಲಿ ವಿವಿಧ ಇಲಾಖೆಗಳ ಅಧಿಕಾರಿಗಳು, ಸಿಬ್ಬಂದಿಗಳಿಗೆ ಪರಿಣಾಮಕಾರಿ ಕಾರ್ಯ ನಿರ್ವಹಣೆಗಾಗಿ ಸೇವಾ ನಿಯಮಗಳ ಅರಿವು ಕರ್ನಾಟಕ ನಾಗರಿಕ ಸೇವಾ ನಿಯಮಾವಳಿಗಳ ತರಬೇತಿ ಕಾರ್ಯಾಗಾರ ಉದ್ಘಾಟಿಸಿ ಮಾತನಾಡುತಿದ್ದರು.
ನಿವೃತ್ತ ಪತ್ರಾಂಕಿತ ವ್ಯವಸ್ಥಾಪಕ ಉಮೇಶ್ ಆಚಾರ್, ಸರಕಾರಿ ನೌಕರರ ಹಕ್ಕು, ಕರ್ತವ್ಯ, ರಜಾ ನಿಯಮ, ವೇತನದ ವಿಧ, ಇತ್ಯಾದಿ ಸೇವಾ ನಿಯಮಗಳ ಕುರಿತು ಮಾಹಿತಿ ನೀಡಿದರು.
ಕಾರ್ಯಕ್ರಮದಲ್ಲಿ ಜಿಪಂನ ಮುಖ್ಯ ಯೋಜನಾಧಿಕಾರಿ ಶ್ರೀನಿವಾಸ್ ರಾವ್, ಇಲಾಖಾಧಿಕಾರಿಗಳು ಹಾಗೂ ಸಿಬ್ಬಂದಿಗಳು ಉಪಸ್ಥಿತರಿದ್ದರು.
Next Story