ವೈದ್ಯರಿಂದ ಗ್ರಾಮೀಣ ಪ್ರದೇಶದಲ್ಲಿ ಉತ್ತಮ ಸೇವೆ: ಉಡುಪಿ ಡಿಸಿ ಕೂರ್ಮಾರಾವ್
ಉಡುಪಿ: ಗ್ರಾಮೀಣ ಪ್ರದೇಶದಲ್ಲಿ ವೈದ್ಯಕೀಯ ಸೇವೆ ನೀಡುವುದು ಸುಲಭ ಇಲ್ಲವಾದರೂ ನಮ್ಮ ಜಿಲ್ಲೆಯ ವೈದ್ಯರು ಕೋವಿಡ್ ಅವಧಿಯಲ್ಲಿ ಉತ್ತಮ ಸೇವೆ ನೀಡಿ ಕೊರೋನಾ ನಿಯಂತ್ರಣಕ್ಕೆ ಹೆಚ್ಚಿನ ಕೊಡುಗೆ ನೀಡಿದ್ದರು. ಜಿಲ್ಲೆಯಲ್ಲಿ ಶೇ.೧೦೦ ಕೋವಿಡ್ ಲಸಿಕಾಕರಣ ಆಗುವಲ್ಲಿ ವೈದ್ಯಕೀಯ ಸಿಬಂದಿ ಗಳ ಶ್ರಮ ಅಪಾರವಾದುದು ಎಂದು ಉಡುಪಿ ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ. ಹೇಳಿದ್ದಾರೆ.
ಉಡುಪಿ ಆದರ್ಶ ಆಸ್ಪತ್ರೆ ಮತ್ತು ಆದರ್ಶ ಚಾರಿಟೆಬಲ್ ಟ್ರಸ್ಟ್ ವತಿಯಿಂದ ವೈದ್ಯರ ದಿನಾಚರಣೆ ಪ್ರಯುಕ್ತ ರವಿವಾರ ಆಸ್ಪತ್ರೆಯಲ್ಲಿ ಆಯೋಜಿಸಲಾದ ವೈದ್ಯಕೀಯ ತಪಾಸಣೆ ಶಿಬಿರ ಹಾಗೂ ವೈದ್ಯರಿಗೆ ಸನ್ಮಾನ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡುತ್ತಿದ್ದರು.
ಈ ಸಂದರ್ಭದಲ್ಲಿ ವೈದ್ಯರಾದ ಡಾ.ಅಂಜಲಿ ವಾಗ್ಳೆ, ಡಾ.ವಿದ್ಯಾ, ಡಾ. ರಂಗನಾಥ್ ವೈ.ಪಿ., ಡಾ.ಎ. ರವೀಂದ್ರನಾಥ್ ಶೆಟ್ಟಿ, ಡಾ.ಪ್ರಶಾಂತ್ ಹೆಗ್ಡೆ, ಡಾ. ಶ್ರೀಷ ರಾವ್ ಕೊರಡ್ಕಲ್ ಅವರನ್ನು ಸಮ್ಮಾನಿಸಲಾಯಿತು.
ಆದರ್ಶ ಆಸ್ಪತ್ರೆಯ ನರರೋಗ ಶಸ್ತ್ರಚಿಕಿತ್ಸಾ ವಿಭಾಗದ ಮುಖ್ಯಸ್ಥ ಡಾ.ಪ್ರೊ. ಎ.ರಾಜ ಅಧ್ಯಕ್ಷತೆ ವಹಿಸಿದ್ದರು. ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾ ಧಿಕಾರಿ ಡಾ.ನಾಗಭೂಷಣ ಉಡುಪ, ಜಿಲ್ಲಾ ಸರ್ಜನ್ ಡಾ.ಮಧುಸೂದನ್ ನಾಯಕ್, ಆಸ್ಪತ್ರೆಯ ಮುಖ್ಯ ಕಾರ್ಯನಿರ್ವಹಣಾಧಿಕಾರಿ ವಿಮಲಾ ಚಂದ್ರ ಶೇಖರ್ ಉಪಸ್ಥಿತರಿದ್ದರು.
ಆಸ್ಪತ್ರೆಯ ವೈದ್ಯಕೀಯ ನಿರ್ದೇಶಕ ಡಾ.ಜಿ.ಎಸ್.ಚಂದ್ರಶೇಖರ್ ಸ್ವಾಗತಿಸಿ, ಪ್ರಸ್ತಾವಿಕವಾಗಿ ಮಾತನಾಡಿದರು. ಡಯಟೀಷಿಯನ್ ಅನುಶ್ರೀ ಕಾರ್ಯಕ್ರಮ ನಿರೂಪಿಸಿದರು.