ಅ.2ರಂದು 31,679 ವಿದ್ಯಾರ್ಥಿಗಳಿಗೆ ಉಚಿತ ಸಮವಸ್ತ್ರ ವಿತರಣೆ
ಉಡುಪಿ, ಸೆ.29: ಹೆಗ್ಗುಂಜೆ ರಾಜೀವ ಶೆಟ್ಟಿ ಚಾರಿಟೇಬಲ್ ಸೊಸೈಟಿ ಬೆಂಗಳೂರು ವತಿಯಿಂದ ಉಡುಪಿ ಜಿಲ್ಲೆಗೆ 25 ವರ್ಷ ತುಂಬಿದ ಹಿನ್ನೆಲೆಯಲ್ಲಿ ಜಿಲ್ಲೆಯ 350 ಸರಕಾರಿ, ಅನುದಾನಿತ ಪ್ರೌಢ, ಪ್ರಾಥಮಿಕ ಹಾಗೂ ಹಿರಿಯ ಪ್ರಾಥಮಿಕ ಶಾಲೆಗಳ 31679 ವಿದ್ಯಾರ್ಥಿಗಳಿಗೆ ಉಚಿತವಾಗಿ ಶಾಲಾ ಸಮವಸ್ತ್ರ ಗಳ ವಿತರಿಸುವ ಕಾರ್ಯಕ್ರಮ ವನ್ನು ಅಂಬಾಗಿಲಿನ ಅಮೃತ್ ಗಾರ್ಡನ್ನಲ್ಲಿ ಅ.2ರಂದು ಬೆಳಗ್ಗೆ 11ಗಂಟೆಗೆ ಹಮ್ಮಿಕೊಳ್ಳಲಾಗಿದೆ.
ಉಡುಪಿಯಲ್ಲಿಂದು ಕರೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸೊಸೈಟಿಯ ಉಪಾಧ್ಯಕ್ಷ ಎಚ್.ನಾಗರಾಜ ಶೆಟ್ಟಿ, ಸೊಸೈಟಿಯ ಅಧ್ಯಕ್ಷ ಎಚ್.ಎಸ್.ಶೆಟ್ಟಿ ಅಪೇಕ್ಷೆಯಂತೆ ಅಂದಾಜು 1.75 ಕೋಟಿ ರೂ. ವೆಚ್ಚದಲ್ಲಿ ಉಚಿತ ಸಮವಸ್ತ್ರ ನೀಡಲಾಗುತ್ತಿದೆ. ಈ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವ ಶಿಕ್ಷಕರು ಹಾಗೂ ವಿದ್ಯಾರ್ಥಿಗಳ ಪಯಾಣ ವೆಚ್ಚವನ್ನು ಸೊಸೈಟಿಯಿಂದಲೇ ಭರಿಸಲಾಗುತ್ತೆ ಎಂದು ತಿಳಿಸಿದರು.
ಕಾರ್ಯಕ್ರಮವನ್ನು ಸಚಿವ ಸುನೀಲ್ ಕುಮಾರ ಉದ್ಘಾಟಿಸಲಿದ್ದು, ಶಾಸಕ ಕೆ.ರಘುವತಿ ಭಟ್ ಅಧ್ಯಕ್ಷತೆ ವಹಿಸಲಿದ್ದಾರೆ. ಶಾಸಕರಾದ ಹಾಲಾಡಿ ಶ್ರೀನಿವಾಸ ಶೆಟ್ಟಿ, ಲಾಲಾಜಿ ಆರ್.ಮೆಂಡನ್, ಬಿ.ಎಂ.ಸುಕುಮಾರ ಶೆಟ್ಟಿ, ನಟ ರಮೇಶ್ ಅರವಿಂದ್, ಪಾಂಡಿಚೆರಿ ವಿವಿ ಪ್ರಾಧ್ಯಾಪಕ ಪ್ರೊ.ಹಾಲಾಡಿ ಪ್ರತಾಪ್ ಕುಮಾರ ಶೆಟ್ಟಿ, ಜಿಲ್ಲಾಧಿಕಾರಿ ಕೂರ್ಮರಾವ್, ಜಿಪಂ ಸಿಇಓ ಪ್ರಸನ್ನ ಎಚ್., ಜಿಲ್ಲಾ ವಿದ್ಯಾಂಗ ಉಪ ನಿರ್ದೇಶಕ ಎನ್.ಕೆ.ಶಿವರಾಜ್ ಭಾಗವಹಿಸಲಿರುವರು.
ಸುದ್ದಿಗೋಷ್ಠಿಯಲ್ಲಿ ಸೊಸೈಟಿಯ ಸಂಘಟನಾ ಕಾರ್ಯದರ್ಶಿ ರಾಜೀವ್ ಶೆಟ್ಟಿ, ಅಮಾಸೆಬೈಲು ಗ್ರಾಪಂ ಸದಸ್ಯ ಕೃಷ್ಣ ಪೂಜಾರಿ, ನಿಧಿ ಎಸ್.ಹೆಗ್ಡೆ ಹಾಜರಿದ್ದರು.