ಅಂತರ್ ಜಿಲ್ಲಾ ಶಾಲಾ ಕಾಲೇಜುಗಳಲ್ಲಿ ಕಳವು ಪ್ರಕರಣ: ಇಬ್ಬರು ಆರೋಪಿಗಳ ಬಂಧನ
'ಕಳ್ಳತನಕ್ಕಾಗಿಯೇ ಉಡುಪಿಯಲ್ಲಿ ಬಾಡಿಗೆ ಮನೆ ಮಾಡಿಕೊಂಡಿದ್ದ ಆರೋಪಿ'
ಉಡುಪಿ(Udupi): ರಾಜ್ಯದ ವಿವಿಧ ಜಿಲ್ಲೆಗಳ ಶಾಲಾ ಕಾಲೇಜುಗಳಲ್ಲಿ ನಡೆದ ಕಳವು ಪ್ರಕರಣಕ್ಕೆ ಸಂಬಂಧಿಸಿ ಇಬ್ಬರು ಆರೋಪಿಗಳನ್ನು ಬಂಧಿಸುವಲ್ಲಿ ಕೋಟ ಪೊಲೀಸರು ಯಶಸ್ವಿಯಾಗಿದ್ದಾರೆ.
ತಮಿಳುನಾಡು ರಾಜ್ಯದ ಸೇಲಂ ನಿವಾಸಿ ಕುಮಾರಸ್ವಾಮಿ(59) ಹಾಗೂ ಪಡುಬಿದ್ರಿ ಹೆಜಮಾಡಿ ಎಸ್ಎಸ್ ರಸ್ತೆಯ ಜಾಹೀದ ಸಿನಾನ್(32) ಬಂಧಿತ ಆರೋಪಿಗಳು. ಬಂಧಿತರಿಂದ ಒಂದು ಬೈಕು, ಎರಡು ಮೊಬೈಲ್ ಹಾಗೂ 10,000ರೂ. ನಗದು ವಶಪಡಿಸಿಕೊಂಡಿದ್ದು ತನಿಖೆ ಮುಂದುವರಿಸಲಾಗಿದೆ.
ನ.21ರಂದು ಕೋಟ ಪೊಲೀಸ್ ಠಾಣಾ ವ್ಯಾಪ್ತಿಯ ಆವರ್ಸೆ ಗ್ರಾಮದ ಬಳಿ ಬೈಕ್ನಲ್ಲಿ ಸಂಶಯಾಸ್ಪದವಾಗಿ ತಿರುಗಾಡುತ್ತಿದ್ದ ಇವರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.
ವಿಶೇಷ ತಂಡ ರಚಿಸಿ ತನಿಖೆ
ಕಳೆದ 5-6 ತಿಂಗಳಿನಿಂದ ಶಾಲಾ ಕಾಲೇಜುಗಳಿಗೆ ನುಗ್ಗಿ ಹಣ ಹಾಗೂ ಸೊತ್ತುಗಳು ಕಳ್ಳತನ ಮಾಡುತ್ತಿರುವ ಕುರಿತು ಉಡುಪಿ ಜಿಲ್ಲೆಯ ಬೇರೆ ಬೇರೆ ಠಾಣೆಗಳಲ್ಲಿ ದಾಖಲಾಗಿದ್ದವು. ಈ ಬಗ್ಗೆ ಬ್ರಹ್ಮಾವರ ವೃತ್ತ ನಿರೀಕ್ಷಕ ಅನಂತ ಪದ್ಮನಾಭ ನೇತೃತ್ವದಲ್ಲಿ ಕೋಟ ಎಸ್ಸೈ ಮಧು ಬಿ.ಇ. ಹಾಗೂ ಸಿಬ್ಬಂದಿಗಳ ವಿಶೇಷ ತಂಡವನ್ನು ರಚಿಸಲಾಗಿತ್ತು.
ತಂಡವು ಆರೋಪಿ ಪತ್ತೆಗೆ ಎಲ್ಲ ಶಾಲಾ ಕಾಲೇಜುಗಳ ಮಾಹಿತಿ, ಅಪರಾಧ ನಡೆದ ದಿನಾಂಕ ಹಾಗೂ ಇನ್ನಿತರ ಮಾಹಿತಿಯನ್ನು ಆಧರಿಸಿ, ಸಿಸಿ ಕ್ಯಾಮೆರಾಗಳ ಪರಿಶೀಲನೆ, ಲಾಡ್ಜ್ ಪರಿಶೀಲನೆ, ಜೈಲಿನಿಂದ ಬಿಡುಗಡೆಯಾದ ಕಳ್ಳತನ ಪ್ರಕರಣದ ಆರೋಪಿಗಳ ಮಾಹಿತಿ, ತಾಂತ್ರಿಕ ಮಾಹಿತಿಯನ್ನು ಕಲೆಹಾಕಿತು. ಹೊರ ರಾಜ್ಯ ಹಾಗೂ ಹೊರ ಜಿಲ್ಲೆಯಿಂದ ಬರುವ ವ್ಯಕ್ತಿಗಳು ಹಾಗೂ ವಾಹನದ ಮಾಹಿತಿ ಬಗ್ಗೆ ನಿಗಾವಹಿಸಿತು.
4 ಜಿಲ್ಲೆಗಳ 37 ಕಡೆ ಕಳ್ಳತನ
ಕುಮಾರಸ್ವಾಮಿ ಭಟ್ಕಳ ನಗರ ಠಾಣೆಯಲ್ಲಿ 5 ಮನೆ ಕಳ್ಳತನ, ಹೊನ್ನಾವರ ಠಾಣೆಯಲ್ಲಿ 4 ಮನೆ ಕಳ್ಳತನ, ಹಾಸನ ಜಿಲ್ಲೆ ಬೇಲೂರು ಠಾಣೆಯಲ್ಲಿ 4 ಮನೆ ಕಳ್ಳತನ ಪ್ರಕರಣದಲ್ಲಿ ಹಳೆ ಆರೋಪಿಯಾಗಿದ್ದಾನೆ. ಈ ಪ್ರಕರಣಗಳಿಗೆ ಸಂಬಂಧಿಸಿದಂತೆ ನ್ಯಾಯಾಲಯದಿಂದ ಶಿಕ್ಷೆಗೆ ಒಳಪಟ್ಟು 2014 ರಿಂದ 2021 ರವರೆಗೆ ಸುಮಾರು 7 ವರ್ಷಗಳ ಕಾಲ ಕಾರವಾರ ಜೈಲ್ನಲ್ಲಿದ್ದು ಶಿಕ್ಷೆ ಅನುಭವಿಸಿದ್ದನು.
ಜಾಹೀದ ಸಿನಾನ್ ಕಳ್ಳತನ ನಡೆಸುವುದಕ್ಕಾಗಿಯೇ ಉಡುಪಿ ಸಂತೆಕಟ್ಟೆ ಬಳಿ ಬಾಡಿಗೆ ಮನೆಯನ್ನು ಮಾಡಿಕೊಂಡಿದ್ದನು. ಕುಮಾರ ಸ್ವಾಮಿಯನ್ನು ಕರೆಯಿಸಿ ಕೊಂಡು ಒಟ್ಟಿಗೆ ಕಳ್ಳತನ ಮಾಡುತ್ತಿದ್ದರು. ಕುಮಾರಸ್ವಾಮಿ 2021ರಲ್ಲಿ ಕಾರವಾರ ಜೈಲಿನಿಂದ ಬಿಡುಗಡೆಯಾದ ನಂತರ ಹೆಜಮಾಡಿಯ ಜಾಹೀದ್ ಸಿನಾನ್ ಜೊತೆ ಸೇರಿ ಉಡುಪಿ ಜಿಲ್ಲೆ, ಉತ್ತರ ಕನ್ನಡ ಜಿಲ್ಲೆ, ಶಿವಮೊಗ್ಗ ಜಿಲ್ಲೆ, ದಕ್ಷಿಣ ಕನ್ನಡ ಜಿಲ್ಲೆಯ ಸುಮಾರು 37 ಕಡೆ ಶಾಲಾ- ಕಾಲೇಜಿಗಳಿಗೆ ನುಗ್ಗಿ ಕಳ್ಳತನ ಮಾಡಿದ್ದನು ಎಂದು ಪೊಲೀಸರು ತಿಳಿಸಿದ್ದಾರೆ.
ಉಡುಪಿಯ 27 ಕಡೆ ಕಳವು
ಇವರು ಉಡುಪಿ ಜಿಲ್ಲೆಯ ಬೈಂದೂರು, ಕೊಲ್ಲೂರು, ಶಂಕರನಾರಾಯಣ, ಕುಂದಾಪುರ, ಬ್ರಹ್ಮಾವರ, ಹಿರಿಯಡ್ಕ, ಉಡುಪಿ ನಗರ, ಮಲ್ಪೆ, ಕಾರ್ಕಳ, ಪಡುಬಿದ್ರೆ ಠಾಣಾ ವ್ಯಾಪ್ತಿಯ ಒಟ್ಟು 27 ಕಡೆ ಶಾಲಾ ಕಾಲೇಜುಗಳಿಗೆ ನುಗ್ಗಿ ಕಳ್ಳತನ ನಡೆಸಿದ್ದಾರೆ.
ದಕ್ಷಿಣ ಕನ್ನಡ ಜಿಲ್ಲೆಯ ಮುಲ್ಕಿ ಠಾಣೆಯಲ್ಲಿ 2 ಪ್ರಕರಣ, ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ, ಹೊಸನಗರ, ರಿಪ್ಪನಪೇಟೆ, ನಗರ ಠಾಣೆಗಳಲ್ಲಿ 6 ಪ್ರಕರಣ, ಉತ್ತರ ಕನ್ನಡ ಜಿಲ್ಲೆಯ ಮುಡೇಶ್ವರ ಠಾಣೆಯಲ್ಲಿ 2 ಪ್ರಕರಣಗಳನ್ನು ಪೊಲೀಸರು ಆರೋಪಿಗಳನ್ನು ಬಂಧಿಸಿ ಎಲ್ಲ ಪ್ರಕರಣಗಳನ್ನು ಭೇದಿಸಿದ್ದಾರೆಂದು ಪೊಲೀಸರು ತಿಳಿಸಿದ್ದಾರೆ.
ಇದನ್ನೂ ಓದಿ: ಮಂಗಳೂರು: ಹಣದಾಸೆಗೆ ವ್ಯಾಪಾರಿಯ ಕೊಲೆಗೈದ ಆರೋಪಿಗೆ ಸಿಕ್ಕಿದ್ದು ಕೇವಲ 30 ರೂ.!