ಗ್ರಾಮೀಣ ಸ್ವಚ್ಛತಾ ಸೇನಾನಿಗಳಿಂದ ಜಿಲ್ಲೆಗೆ ರಾಜ್ಯದಲ್ಲೇ ಅಗ್ರಸ್ಥಾನ: ಉಡುಪಿ ಜಿಪಂ ಸಿಇಓ ಪ್ರಸನ್ನ ಎಚ್
ಸ್ವಚ್ಛತಾ ಕಾರ್ಯಕರ್ತರ ಕ್ರೀಡಾಕೂಟ ‘ಸ್ವಚ್ಛ ಸಂಭ್ರಮ’
ಉಡುಪಿ, ಡಿ.7: ಗ್ರಾಮೀಣ ಪ್ರದೇಶದ ಸ್ವಚ್ಛತೆಯಲ್ಲಿ ಉಡುಪಿ ಜಿಲ್ಲೆ ರಾಜ್ಯದಲ್ಲೇ ಪ್ರಥಮ ಸ್ಥಾನ ಪಡೆದಿದ್ದು, ಈ ಸ್ಥಾನ ಪಡೆಯುವಲ್ಲಿ ಜಿಲ್ಲೆಯ ಗ್ರಾಮೀಣ ಭಾಗದ ಸ್ವಚ್ಛತಾ ಸೇನಾನಿಗಳ ಪಾತ್ರ ಅತ್ಯಂತ ಮಹತ್ವದ್ದಾಗಿದೆ. ಜಿಲ್ಲೆಯ ಈ ಸಾಧನೆಯನ್ನು ನಿರಂತರವಾಗಿ ಮುಂದುವರೆಸುವಂತೆ ಗ್ರಾಮೀಣ ಸ್ವಚ್ಛತಾ ಕಾರ್ಯಕರ್ತರಿಗೆ ಉಡುಪಿ ಜಿಲ್ಲಾ ಪಂಚಾಯತ್ನ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಪ್ರಸನ್ನ ಎಚ್. ಹೇಳಿದ್ದಾರೆ.
ಬುಧವಾರ ಜಿಲ್ಲಾ ಪಂಚಾಯತ್ನ ಸ್ವಚ್ಛ ಭಾರತ್ ಮಿಷನ್ (ಗ್ರಾಮೀಣ) ಹಾಗೂ ಜಿಲ್ಲಾ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಉಡುಪಿ ಇವರ ವತಿಯಿಂದ ಅಜ್ಜರಕಾಡು ಮಹಾತ್ಮಾಗಾಂಧಿ ಜಿಲ್ಲಾ ಕ್ರೀಡಾಂಗಣದಲ್ಲಿ ನಡೆದ ಸ್ವಚ್ಛತಾ ಕಾರ್ಯಕರ್ತರ ಕ್ರೀಡಾಕೂಟ ‘ಸ್ವಚ್ಛ ಸಂಭ್ರಮ-2022-23’ನ್ನು ಉದ್ಘಾಟಿಸಿ ಅವರು ಮಾತನಾಡುತಿದ್ದರು.
ಸ್ವಚ್ಛತೆ ಮತ್ತು ಆರೋಗ್ಯಕ್ಕೆ ನಿಕಟ ಸಂಬಂಧವಿದ್ದು, ಗ್ರಾಮೀಣ ಭಾಗದ ಸಾರ್ವಜನಿಕರ ಆರೋಗ್ಯ ಕಾಪಾಡುವಲ್ಲಿ ಗ್ರಾಮೀಣ ಸ್ಚಚ್ಛತಾ ಕಾರ್ಯಕರ್ತರು ಅತ್ಯುತ್ತಮವಾಗಿ ಕಾರ್ಯನಿರ್ವಸುತ್ತಿದ್ದಾರೆ. ಸ್ವಚ್ಛತೆಯ ಕುರಿತಂತೆ ಸಾರ್ವಜನಿಕರಲ್ಲಿ ಹೊಸ ಪರಿಕಲ್ಪನೆ ಮೂಡಿಸಿದ್ದಾರೆ. ಇವರ ಅಗತ್ಯ ಬೇಡಿಕೆಗಳ ಬಗ್ಗೆ ಹಾಗೂ ಅಪಘಾತ ವಿಮೆ ಸೇರಿದಂತೆ, ಆರೋಗ್ಯ ವಿಮೆ ಸೌಲಭ್ಯ ಒದಗಿಸುವ ಕುರಿತಂತೆ ಪರಿಶೀಲನೆ ನಡೆಸಲಾಗುತ್ತಿದೆ ಎಂದರು.
ರಾಜ್ಯಮಟ್ಟದ ಸರ್ವೋತ್ತಮ ಸೇವಾ ಪ್ರಶಸ್ತಿ ಪಡೆದ ಜಿಲ್ಲಾ ಪಂಚಾಯತ್ ಮುಖ್ಯ ಯೋಜನಾಧಿಕಾರಿ ಶ್ರೀನಿವಾಸ ರಾವ್ ಇವರನ್ನು ಸನ್ಮಾನಿಸಲಾಯಿತು. ಜಿಲ್ಲಾ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕ ಡಾ. ರೋಶನ್ಕುಮಾರ್ ಶೆಟ್ಟಿ ಉಪಸ್ಥಿತರಿದ್ದರು.
ಮಾಧವಿ ಸ್ವಾಗತಿಸಿ, ರಘುರಾಮ್ ಕಾರ್ಯಕ್ರಮ ನಿರೂಪಿಸಿದರು.