ಬೆಂಗಳೂರು | ಶಿಕ್ಷಣದಲ್ಲಿ ದ್ವಿಭಾಷಾ ನೀತಿ ಜಾರಿಗೆ ಆಗ್ರಹಿಸಿ ಕರವೇ ಧರಣಿ

ಬೆಂಗಳೂರು, ಆ.14 : ಪ್ರೊ.ಸುಖದೇವ್ ಥೋರಟ್ ನೇತೃತ್ವದ ರಾಜ್ಯ ಶಿಕ್ಷಣ ನೀತಿ ಆಯೋಗದ ವರದಿಯಂತೆ ರಾಜ್ಯದಲ್ಲಿ ದ್ವಿಭಾಷಾ ಶಿಕ್ಷಣ ನೀತಿ ಜಾರಿಗೊಳಿಸುವಂತೆ ಆಗ್ರಹಿಸಿ, ಕರ್ನಾಟಕ ರಕ್ಷಣಾ ವೇದಿಕೆ ಕಾರ್ಯಕರ್ತರು ಗುರುವಾರ ಫ್ರೀಡಂ ಪಾರ್ಕ್ ನಲ್ಲಿ ಅಹೋರಾತ್ರಿ ಧರಣಿ ನಡೆಸಿದ್ದಾರೆ.
ಈ ವೇಳೆ ಮಾತನಾಡಿದ ಕರವೇ ರಾಜ್ಯಾಧ್ಯಕ್ಷ ಟಿ.ಎ.ನಾರಾಯಣಗೌಡ , ಕರ್ನಾಟಕದಲ್ಲಿ ಕನ್ನಡವೇ ಸಾರ್ವಭೌಮ ಭಾಷೆ ಆದರೆ, ಶಿಕ್ಷಣ ವ್ಯವಸ್ಥೆೆಯಲ್ಲಿ ತ್ರಿಭಾಷಾ ನೀತಿ ಹೆಸರಿನಲ್ಲಿ ಹಿಂದಿ ಹೇರಿಕೆ ಸಲ್ಲದು. ಇದು ವಿದ್ಯಾರ್ಥಿಗಳ ಶೈಕ್ಷಣಿಕ ವ್ಯವಸ್ಥೆೆ ಮೇಲೆ ಒತ್ತಡ ಹೇರಲಾಗುತ್ತಿದೆ. ಆದ್ದರಿಂದ ಹಿಂದಿಯನ್ನು ಪಠ್ಯಕ್ರಮದಿಂದ ಕೈಬಿಡಬೇಕು ಎಂದು ಆಗ್ರಹಿಸಿದರು.
ದ್ವಿಭಾಷಾ ಶಿಕ್ಷಣ ನೀತಿ ಬಹುಭಾಷಾ ಕಲಿಕೆಗೆ ವಿರುದ್ಧವಲ್ಲ. ಬದಲಾಗಿ ಕನ್ನಡ ಮತ್ತು ಇಂಗ್ಲಿಷ್ ಭಾಷೆಗೆ ಹೆಚ್ಚು ಮಹತ್ವ ನೀಡಲಿದೆ. ಮೂರನೇ ಭಾಷೆಯಾಗಿ ವಿದ್ಯಾರ್ಥಿಗಳು ಹಿಂದಿ ಭಾಷೆಯನ್ನು ಆಯ್ಕೆ ಮಾಡಿಕೊಳ್ಳಬಹುದು, ಆಸಕ್ತಿಗೆ ಅನುಗುಣವಾಗಿ ಇತರೆ ಭಾಷೆಗಳ ಆಯ್ಕೆಯನ್ನು ನೀಡಬಹುದು. ಹಿಂದಿ ಭಾಷಾ ಹೇರಿಕೆ ವಿದ್ಯಾರ್ಥಿಗಳ ಸ್ವಾತಂತ್ರ್ಯಕ್ಕೆ ವಿರುದ್ಧವಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.





