ಬಿಜೆಪಿಯಿಂದ ‘ಧರ್ಮದ ಉಳಿವಿಗಾಗಿ ಧರ್ಮ ಯುದ್ಧ' ಹೋರಾಟ: ಬಿ.ವೈವಿಜಯೇಂದ್ರ

ಬೆಂಗಳೂರು: ಶ್ರೀ ಕ್ಷೇತ್ರ ಧರ್ಮಸ್ಥಳದ ವಿಚಾರವಾಗಿ ರಾಜ್ಯ ಸರ್ಕಾರದ ಧೋರಣೆಯನ್ನು ಖಂಡಿಸಿ ಆ.22ರಿಂದ ‘ಧರ್ಮದ ಉಳಿವಿಗಾಗಿ ಧರ್ಮ ಯುದ್ಧ' ಹೋರಾಟ ಮಾಡಲಿದ್ದೇವೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ ಹೇಳಿದ್ದಾರೆ.
ನಗರದಲ್ಲಿ ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಶ್ರೀ ಕ್ಷೇತ್ರ ಧರ್ಮಸ್ಥಳದ ವಿಚಾರವಾಗಿ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಮತ್ತು ಸಚಿವ ದಿನೇಶ್ ಗುಂಡೂರಾವ್ ನೀಡಿರುವ ಹೇಳಿಕೆಗಳು ಎಲ್ಲರಿಗೂ ತಿಳಿದಿದೆ. ಧರ್ಮಸ್ಥಳದ ವಿರುದ್ಧ ಅಪಪ್ರಚಾರದ ವಿಚಾರವಾಗಿ ರಾಜ್ಯ ಸರ್ಕಾರದ ನಡವಳಿಕೆ ಬಗ್ಗೆ ನಮಗೂ ಅನುಮಾನಗಳು ಕಾಡುತ್ತಿವೆ. ರಾಜ್ಯ ಸರ್ಕಾರದ ಈ ಧೋರಣೆಯನ್ನು ಖಂಡಿಸಿ ‘ಧರ್ಮದ ಉಳಿವಿಗಾಗಿ ಧರ್ಮ ಯುದ್ಧ’ ಪ್ರತಿಭಟನೆಯನ್ನು ಶುಕ್ರವಾರದಿಂದ ಮುಂದಿನ ವಾರದವರೆಗೂ ರಾಜ್ಯದ ಎಲ್ಲ ವಿಧಾನ ಸಭಾ ಕ್ಷೇತ್ರಗಳಲ್ಲಿ ಮಾಡಲಿದ್ದೇವೆ ಎಂದು ಪ್ರಕಟಿಸಿದರು.
ಕಳೆದ ಒಂದು ತಿಂಗಳಿಂದ ಧರ್ಮಸ್ಥಳ ವಿಚಾರದಲ್ಲಿ ಯಾವ ಯಾವ ಬೆಳವಣಿಗೆ ಆಗಿದೆ ಎಂಬುದು ಎಲ್ಲರಿಗೂ ತಿಳಿದಿರುವ ವಿಚಾರ. ರಾಜ್ಯ ಸರ್ಕಾರ ಧರ್ಮಸ್ಥಳ ವಿಚಾರದಲ್ಲಿ ತನಿಖೆ ನಡೆಸಬೇಕೆಂದು ಎಸ್ಐಟಿ ರಚಿಸಿದಾಗ ಅದನ್ನು ಸ್ವಾಗತ ಮಾಡಿದ್ದೆವು; ಈ ವಿಚಾರದಲ್ಲಿ ಸಮಗ್ರವಾಗಿ, ಪಾರದರ್ಶಕವಾಗಿ ತನಿಖೆಯಾಗಬೇಕು ಎಂದು ರಾಜ್ಯ ಸರಕಾರಕ್ಕೆ ನಾವು ಸಂಪೂರ್ಣವಾಗಿ ಬೆಂಬಲ ನೀಡಿದ್ದೆವು. ಇದು ಬಿಜೆಪಿಯ ಸ್ಪಷ್ಟ ನಿಲುವಾಗಿದೆ ಎಂದು ತಿಳಿಸಿದರು.
ತನಿಖೆ ವಿಚಾರದಲ್ಲಿ ಇಂದು ಕೂಡ ನಾವು ಹಿಂದೆ ಸರಿದಿಲ್ಲ. ಆದರೆ ತನಿಖೆಯ ಸಂದರ್ಭದಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ ನಿರಂತರವಾಗಿ ಶ್ರೀ ಕ್ಷೇತ್ರದ ಬಗ್ಗೆ ಅಪಪ್ರಚಾರಗಳು ನಡೆದುಕೊಂಡು ಬಂದಿವೆ. ಇಂಥ ಅಪಪ್ರಚಾರವನ್ನು ನಿಲ್ಲಿಸುವ, ತಡೆಯುವ ಮತ್ತು ಕಟ್ಟಿಹಾಕುವ ಕೆಲಸವನ್ನು ರಾಜ್ಯ ಸರ್ಕಾರ ಮತ್ತು ಪೊಲೀಸ್ ಇಲಾಖೆ ಏಕೆ ಮಾಡಲಿಲ್ಲ ಎಂದು ಪ್ರಶ್ನಿಸಿದರು.
ಧರ್ಮಸ್ಥಳ ಕ್ಷೇತ್ರದ ಅಪಪ್ರಚಾರ ವಿಚಾರದಲ್ಲಿ ಕ್ರಮ ಏಕೆ ಇಲ್ಲ
ರಾಜ್ಯ ಸರ್ಕಾರ ಮತ್ತು ಪೊಲೀಸ್ ಇಲಾಖೆ ಬೇರೆ ಬೇರೆ ಸಂದರ್ಭದಲ್ಲಿ 24 ಗಂಟೆ ಒಳಗಾಗಿ ಎಫ್ಐಆರ್ ದಾಖಲಿಸುತ್ತಾರೆ. ಕಾನೂನು ಸುವ್ಯವಸ್ಥೆಯನ್ನು ಕಾಪಾಡುವ ನೆಪದಲ್ಲಿ ದಕ್ಷಿಣ ಕನ್ನಡದಲ್ಲಿ 81 ವರ್ಷದ ಬಿಜೆಪಿ ಹಿರಿಯ ಕಾರ್ಯಕರ್ತ ಪೂವಪ್ಪರ ಮನೆಗೆ ರಾತ್ರಿ 1 ಗಂಟೆಗೆ ಪೊಲೀಸ್ ಅಧಿಕಾರಿಗಳು ಹೋಗಿ ಪೋಟೋ ತೆಗೆಯುತ್ತಾರೆ. ಸಾಮಾಜಿಕ ಜಾಲತಾಣದಲ್ಲಿ ಹಿಂದುತ್ವ ಕಾರ್ಯಕರ್ತರು ಪೋಸ್ಟ್ ಮಾಡಿದರೆ ತಡ ಮಾಡದೇ ಅವರ ವಿರುದ್ಧ ಸ್ವಯಂಪ್ರೇರಿತ ಪ್ರಕರಣ ಹಾಕಿ ಎಫ್ಐಆರ್ ದಾಖಲಿಸಿ ಬಂಧಿಸಿರುವುದನ್ನು ಕಳೆದ ಎರಡೂವರೆ ವರ್ಷಗಳಲ್ಲಿ ನೋಡಿದ್ದೇವೆ. ಆದರೆ ಧರ್ಮಸ್ಥಳದ ವಿಚಾರದಲ್ಲಿ ಅಪಪ್ರಚಾರ ಮಾಡುತ್ತಿರುವವರ ವಿರುದ್ಧ ಸರ್ಕಾರ ಏಕೆ ಕ್ರಮ ತೆಗದುಕೊಂಡಿಲ್ಲ ಎಂದು ವಿಜಯೇಂದ್ರ ಪ್ರಶ್ನಿಸಿದರು.
ಧರ್ಮಸ್ಥಳ ವಿಚಾರ ಬಂದಾಗ ಕೋಟ್ಯತರ ಭಕ್ತರ ಭಾವನೆಗೆ ಧಕ್ಕೆ ತರುತ್ತಿರುವ ಈ ಅಪಪ್ರಚಾರಗಳನ್ನು ರಾಜ್ಯ ಸರಕಾರ ತಡೆಯುವ ಕೆಲಸವನ್ನು ಮಾಡಲಿಲ್ಲ ಎಂದು ಆಕ್ಷೇಪಿಸಿದರು. ಇದು ವ್ಯವಸ್ಥಿತವಾಗಿರುವ ಷಡ್ಯಂತ್ರ. ಈ ಅಪಪ್ರಚಾರವನ್ನು ತಡೆಯುವ ಇಚ್ಛಾಶಕ್ತಿ ರಾಜ್ಯ ಸರ್ಕಾರಕ್ಕೆ ಇರಲಿಲ್ಲವೇ? ಅಥವಾ ರಾಜ್ಯ ಸರ್ಕಾರವೇ ಈ ಅಪಪ್ರಚಾರಕ್ಕೆ ಕುಮ್ಮಕ್ಕು ನೀಡುತ್ತಿದಿಯೇ ಎಂದು ಅವರು ಪ್ರಶ್ನಿಸಿದರು.
ಈ ಎಲ್ಲ ಗುಮಾನಿಗಳು ಇಂದು ರಾಜ್ಯಾದ್ಯಂತ ಮತ್ತು ರಾಜ್ಯದ ಅಸಂಖ್ಯಾತ ಭಕ್ತರಲ್ಲಿ ಚರ್ಚೆ ಆಗುತ್ತಿದೆ. ಇದೆಲ್ಲದರ ನಡುವೆಯೂ ಇಂದು ಯಾವ ದುಷ್ಟಶಕ್ತಿಗಳು ಈ ಷಡ್ಯಂತ್ರದ ಹಿಂದೆ ಕೆಲಸ ಮಾಡುತ್ತಿವೆ?; ಯಾವ ಯಾವ ಸಂಘಟನೆಗಳು ಇದಕ್ಕೆ ಶಕ್ತಿ ತುಂಬುವ ಕೆಲಸ ಮಾಡುತ್ತಿವೆ? ಇದನ್ನು ತಡೆಯುವ ಕೆಲಸ ರಾಜ್ಯ ಸರ್ಕಾರ ಮಾಡುತ್ತಿಲ್ಲ ಎಂದು ಆರೋಪಿಸಿದರು.







