ಸರಕಾರಿ ಶಾಲೆಗಳನ್ನು ಮುಚ್ಚಿ ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸರಕಾರದ ಷಡ್ಯಂತ್ರ: ಪ್ರೊ. ಮುರಿಗೆಪ್ಪ

ಬೆಂಗಳೂರು: "ತನ್ನ ಮೇಲಿನ ಭಾರವನ್ನು ಇಳಿಸಿಕೊಳ್ಳಲು ಸರಕಾರಿ ಶಾಲೆಗಳನ್ನು ಮುಚ್ಚಿ ಖಾಸಗಿ ಶಾಲೆಗಳಿಗೆ ಸರಕಾರವು ಮಣೆ ಹಾಕುತ್ತಿದೆ. ಈ ಮೂಲಕ ಬಡಮಕ್ಕಳ ಭವಿಷ್ಯವನ್ನು ಹಾಳುಗೆಡವುತ್ತಿದೆ. ಸರ್ಕಾರವು ತನ್ನ ಜವಾಬ್ದಾರಿಯಿಂದ ನುಣುಚಿಕೊಳ್ಳುವ ಷಡ್ಯಂತ್ರ ಇದಾಗಿದೆ ಎಂದು ಹಂಪಿ ಕನ್ನಡ ವಿಶ್ವವಿದ್ಯಾನಿಲಯದ ಮಾಜಿ ಕುಲಪತಿ ಪ್ರೊ.ಎ.ಮುರಿಗೆಪ್ಪ ಹೇಳಿದ್ದಾರೆ.
ಇಂದು ನಗರದ ಫ್ರೀಡಂ ಪಾರ್ಕ್ ನಲ್ಲಿಂದು ಸರ್ಕಾರಿ ಶಾಲೆಗಳನ್ನು ರಕ್ಷಿಸಿ, ಬಲಪಡಿಸಲು ಆಗ್ರಹಿಸಿ ಎಐಡಿಎಸ್ಓ ನೇತೃತ್ವದಲ್ಲಿ ಹಮ್ಮಿಕೊಂಡಿದ್ದ 50 ಲಕ್ಷ ಸಹಿ ಸಂಗ್ರಹ ಅಭಿಯಾನದ ಸಮಾರೋಪದಲ್ಲಿ ಅವರು ಮಾತನಾಡಿದರು.
ಕಡಿಮೆ ಸಂಖ್ಯೆಯ ನೆಪದಲ್ಲಿ ಸರ್ಕಾರಿ ಶಾಲೆಗಳನ್ನು ಮುಚ್ಚಿದರೆ, ಒಪ್ಪತಿನ ಊಟಕ್ಕೂ ಕಷ್ಟಪಡುತ್ತಿರುವ ಸಾಮಾನ್ಯ ಜನರ ಮಕ್ಕಳು ಖಾಸಗಿ ಶಾಲೆಗಳಿಗೆ ತಮ್ಮ ಮಕ್ಕಳನ್ನು ಕಳುಹಿಸಲು ಸಾಧ್ಯವಿಲ್ಲ. ವಿದ್ಯಾರ್ಥಿಗಳು ಎಷ್ಟೇ ಇದ್ದರೂ ಸರ್ಕಾರಿ ಶಾಲೆಗಳನ್ನು ಮುಚ್ಚಬಾರದು. ಬದಲಾಗಿ ಸರ್ಕಾರಿ ಶಾಲೆಗಳು ಎದುರಿಸುತ್ತಿರುವ ಶಿಕ್ಷಕರ ಹಾಗೂ ಮೂಲಭೂತ ಸೌಕರ್ಯಗಳ ಕೊರತೆಯನ್ನು ಪರಿಹರಿಸಿ ದಾಖಲಾತಿ ಹೆಚ್ಚಿಸುವುದು ಸರ್ಕಾರದ ಆದ್ಯ ಕರ್ತವ್ಯವಾಗಬೇಕು ಮತ್ತು ಸರ್ಕಾರವು ಶಿಕ್ಷಣಕ್ಕೆ ಒತ್ತು ನೀಡಬೇಕು ಎಂದು ಒತ್ತಾಯಿಸಿದರು.
ಎಐಡಿಎಸ್ಓ ರಾಜ್ಯ ಕಾರ್ಯದರ್ಶಿ ಅಜಯ್ ಕಾಮತ್ ಮಾತನಾಡಿ, ಹಲವೆಡೆ ವಿದ್ಯಾರ್ಥಿಗಳನ್ನು ಈ ಕಾರ್ಯಕ್ರಮಕ್ಕೆ ಬರದಂತೆ ಶಿಕ್ಷಕರ ಮೂಲಕ ತಡೆಯಲಾಗಿದೆ. ಅನೇಕ ಶಾಲೆ-ಕಾಲೇಜುಗಳಲ್ಲಿ ದಿಢೀರಾಗಿ ಪರೀಕ್ಷೆಗಳನ್ನು ನಡೆಸಲಾಗುತ್ತಿದೆ. ಮಕ್ಕಳನ್ನು ಫ್ರೀಡಂ ಪಾರ್ಕಿಗೆ ಕಳುಹಿಸದಂತೆ ಪಾಲಕರನ್ನು ಭಯಪಡಿಸಲಾಗಿದೆ. ಆದರೆ ಎಲ್ಲ ಅಡೆತಡೆಗಳನ್ನು ಮೀರಿ ವಿದ್ಯಾರ್ಥಿಗಳು ಈ ಹೋರಾಟಕ್ಕೆ ಧಾವಿಸಿದ್ದಾರೆ. ಸರಕಾರಿ ಶಾಲೆಗಳನ್ನು ಬಲಪಡಿಸುವ ಹೋರಾಟಕ್ಕೆ ವಿದ್ಯಾರ್ಥಿ ಸಮೂಹ ಮುಂದಾಗಬೇಕು ಎಂದು ಕರೆ ನೀಡಿದರು.
ರಾಜ್ಯಾಧ್ಯಕ್ಷ ಅಶ್ವಿನಿ ಕೆ. ಎಸ್. ಮಾತನಾಡಿ, 'ಹಬ್ ಆಂಡ್ ಸ್ಪೋಕ್' ಹೆಸರಿನಲ್ಲಿ ಶಾಲೆಗಳನ್ನು ವಿಲೀನಗೊಳಿಸುವ ಆದೇಶವನ್ನು ಅಧಿಕೃತವಾಗಿ ಹಿಂಪಡೆಯಬೇಕೆಂದು ಸರಕಾರವನ್ನು ಆಗ್ರಹಿಸಿದರು.
ಎಐಡಿಎಸ್ಓ ಕೇಂದ್ರ ಕೌನ್ಸಿಲ್ ಕಾರ್ಯದರ್ಶಿಗಳಾದ ಶಿಬಾಶಿಶ್ ಪ್ರಹರಾಜ್ ಮಾತನಾಡಿ, ಕರ್ನಾಟಕ ಸೇರಿದಂತೆ ದೇಶಾದ್ಯಂತ ಕನಿಷ್ಠ ಮೂಲಭೂತ ಸೌಕರ್ಯ ಹಾಗೂ ಶಿಕ್ಷಕರ ಕೊರತೆಯಿಂದಾಗಿ ಸಾವಿರಾರು ಸರ್ಕಾರಿ ಶಿಕ್ಷಣ ಸಂಸ್ಥೆಗಳು ನಲುಗುತ್ತಿವೆ. ಈ ಸಮಸ್ಯೆಗಳ ವಿರುದ್ಧ ಬಲಿಷ್ಠ ಹೋರಾಟವನ್ನು ಕಟ್ಟುವ ಅವಶ್ಯಕತೆಯನ್ನು ಮನಗಂಡು ವಿದ್ಯಾರ್ಥಿಗಳು ಸಂಘಟಿತರಾಗಬೇಕೆಂದು ಕರೆ ನೀಡಿದರು.
ಎಐಡಿಎಸ್ಓ ತಮಿಳುನಾಡು ರಾಜ್ಯಾಧ್ಯಕ್ಷ ಸೆಬಾಸ್ಟಿಯನ್ ಮಾತನಾಡಿ, ಶಿಕ್ಷಣದಲ್ಲಿ ವೈಜ್ಞಾನಿಕ ಚಿಂತನೆಯನ್ನು ಕುಂಠಿತಗೊಳಿಸಿ, ವಿದ್ಯಾರ್ಥಿಗಳಲ್ಲಿ ಪ್ರಶ್ನೆ ಮಾಡುವ ಮನೋಭಾವ ಇಲ್ಲವಾಗುವಂತೆ, ಸರ್ಕಾರಗಳು ತಮ್ಮ ನೀತಿಗಳ ಮೂಲಕ ಅವೈಜ್ಞಾನಿಕ ಚಿಂತನೆಗಳ ಹರಡುತ್ತಿವೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಸಮಾವೇಶದಲ್ಲಿ ಭಾಗವಹಿಸಲು ಸಾಧ್ಯವಾಗದ ಪ್ರೊ ಬರಗೂರು ರಾಮಚಂದ್ರಪ್ಪ, ನ್ಯಾಯಮೂರ್ತಿ ಸಂತೋಷ ಹೆಗ್ಡೆ, ಚಿತ್ರನಟ ಕಿಶೋರ್ ಹೋರಾಟವನ್ನು ಅಭಿನಂದಿಸಿ ತಮ್ಮ ಸಂದೇಶವನ್ನು ಕಳುಹಿಸಿದರು.
ಪ್ರಾಥಮಿಕ ಶಿಕ್ಷಣ ಇಲಾಖೆಯ ನಿರ್ದೇಶಕಿ ಅನಿತಾ ನಜಾರೆ ಸರಕಾರದ ಪರವಾಗಿ ಸಮಾವೇಶಕ್ಕೆ ಆಗಮಿಸಿ ರಾಜ್ಯದ ಜನತೆಯು ನೀಡಿದ 50 ಲಕ್ಷ ಸಹಿಗಳನ್ನು ಸ್ವೀಕರಿಸಿದರು. ರಾಜ್ಯದ ಸರ್ಕಾರಿ ಶಾಲೆಗಳು ಎದುರಿಸುತ್ತಿರುವ ಗಂಭೀರ ಸಮಸ್ಯೆಗಳಾದ ಶಿಕ್ಷಕರ ಕೊರತೆ ಹಾಗೂ ಮೂಲಭೂತ ಸೌಕರ್ಯಗಳ ಕೊರತೆಯನ್ನು ನೀಗಿಸುವಂತೆ ಒತ್ತಾಯಿಸಿ ಮನವಿ ಪತ್ರವನ್ನು ಅವರಿಗೆ ಸಲ್ಲಿಸಲಾಯಿತು.







