ನೆಲಮಂಗಲ | ದ್ವಿಚಕ್ರ ವಾಹನಕ್ಕೆ ಕ್ಯಾಂಟರ್ ಢಿಕ್ಕಿ: ಇಬ್ಬರು ಮೃತ್ಯು

ಬೆಂಗಳೂರು, ಆ.25: ಕ್ಯಾಂಟರ್ ಢಿಕ್ಕಿ ಹೊಡೆದು ದ್ವಿಚಕ್ರ ವಾಹನದಲ್ಲಿ ಚಲಿಸುತ್ತಿದ್ದ ಇಬ್ಬರು ಸಾವನ್ನಪ್ಪಿರುವ ಘಟನೆ ನೆಲಮಂಗಲದ ರಾಷ್ಟ್ರೀಯ ಹೆದ್ದಾರಿ 48ರ ಹನುಮಂತಪುರ ಗೇಟ್ ಬಳಿ ನಡೆದಿದೆ.
ದ್ವಿಚಕ್ರ ವಾಹನದಲ್ಲಿದ್ದ ಗಸ್ತು ಅರಣ್ಯ ರಕ್ಷಕ ಕೆಂಪರಾಜು, ಸೆಂಟ್ರಿಂಗ್ ಕೆಲಸ ಮಾಡುವ ಮತ್ತೊಬ್ಬ ವ್ಯಕ್ತಿ ಸಾವನ್ನಪ್ಪಿದ್ದು, ಘಟನಾ ಸ್ಥಳಕ್ಕೆ ನೆಲಮಂಗಲ ಸಂಚಾರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿರುವುದಾಗಿ ತಿಳಿಸಿದ್ದಾರೆ.
ಆ.24ರ ಮಧ್ಯಾಹ್ನ 12:15ರ ಸಮಯದಲ್ಲಿ ಟಿವಿಎಸ್ ವಿಕ್ಟರ್ ಗಾಡಿಯಲ್ಲಿದ್ದವರು ದಾಬಸ್ ಪೇಟೆಯಿಂದ ಬೆಂಗಳೂರು ಕಡೆ ಬರುತ್ತಿದ್ದ ವೇಳೆ ಮಹಾರಾಷ್ಟ್ರ ನೋಂದಣಿ ಸಂಖ್ಯೆಯ ಕ್ಯಾಂಟರ್ ನಡುವೆ ಅಪಘಾತ ಸಂಭವಿಸಿದೆ, ಈ ವೇಳೆ ದ್ವಿಚಕ್ರ ವಾಹನದಲ್ಲಿದ್ದ ಇಬ್ಬರು ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ಹೇಳಿದ್ದಾರೆ.
ನೆಲಮಂಗಲದ ರಾಷ್ಟ್ರೀಯ ಹೆದ್ದಾರಿಯಲ್ಲಿ ಅಪಘಾತ ಸಂಖ್ಯೆ ಹೆಚ್ಚಾಗುತ್ತಿದೆ. ಈ ಕುರಿತು ಪರಿಶೀಲನೆ ಮಾಡಲಾಗುತ್ತಿದೆ, ರಸ್ತೆ ಅಗಲೀಕರಣ ಕಾಮಗಾರಿ ಮುಕ್ತಾಯವಾದರೆ. ವಾಹನ ಸುಗಮ ಸಂಚಾರಕ್ಕೆ ಅವಕಾಶ ಸಿಗುವುದು, ಸ್ಥಳದಲ್ಲಿ ಪೊಲೀಸ್ ಸಿಬ್ಬಂದಿಗಳ ನಿಯೋಜನೆಗೂ ಕ್ರಮ ತೆಗೆದುಕೊಳ್ಳಲಾಗುವುದು ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಎಸ್ಪಿ ಸಿ.ಕೆ.ಬಾಬಾ ಹೇಳಿದರು.





